ಬಿಜೆಪಿ ಸಂಸದರ ಮನೆಯಲ್ಲಿ ಬಾಲಕನ ಮೃತದೇಹ ನೇಣು ಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಶನಿವಾರ ಅಸ್ಸಾಂನ ಸಿಲ್ಚಾರ್ನಲ್ಲಿರುವ ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಮಗುವಿನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಸುಬ್ರತಾ ಸೇನ್ ಪಿಟಿಐಗೆ ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಎರಡೂವರೆ ವರ್ಷಗಳಿಂದ ಮನೆಗೆಲಸ ಮಾಡುತ್ತಿದ್ದರು. ಇವರು ಮೂಲತಃ ಧೋಲೈ ಪ್ರದೇಶದವರು ಎಂದು ಎಎಸ್ಪಿ ತಿಳಿಸಿದ್ದಾರೆ. ಅವರು ವಿಧವೆಯಾಗಿದ್ದು, ಸಂಸದರು ಮನೆಯಲ್ಲಿಯೇ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಬಾಲಕ 5 ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ರಾಜದೀಪ್ ರಾಯ್, ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನನಗೆ ತಿಳಿಯಿತು. ನಾವು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಮತ್ತು ಅವರು ಬಾಲಕನ ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ. ದುರದೃಷ್ಟವಶಾತ್ ಬಾಲಕ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ.
ಆದರೆ 5 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವಾ ಇನ್ನೇನಾದರೂ ನಡೆದಿದೆಯಾ ಎಂಬ ಬಗ್ಗೆ ಪೊಲೀಸರ ನಿಷ್ಪಕ್ಷಪಾತ ತನಿಖೆಯಿಂದ ಮಾತ್ರ ತಿಳಿದು ಬರಬೇಕಿದೆ.
ಇದನ್ನು ಓದಿ: ಮುಜಫರ್ನಗರ ಪ್ರಕರಣ: ವಾರದೊಳಗೆ ವರದಿ ಸಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಸೂಚನೆ