ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ ನೀಡಿದರು.
ನವದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯನ್ನುದ್ದೇಶಿಸಿ ಅವರು, 2026ರ ಏಪ್ರಿಲ್ 17ರಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ಜಂಟಿ ಹೋರಾಟವನ್ನು ಸ್ಮರಿಸಿದರು. ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಸೋಲಿಸುವ ಮೂಲಕ ಮೈತ್ರಿಕೂಟವು ತನ್ನ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದರು. ಅಲ್ಲದೆ, ವಿರೋಧ ಪಕ್ಷಗಳು ಇದೇ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸಿಕೊಳ್ಳಬೇಕು ಎಂದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಖರ್ಗೆ ಆರೋಪಿಸಿದರು. ಕೇಂದ್ರ ಸರ್ಕಾರ ಸಂವಿಧಾನದ ಮೇಲಿನ ದಾಳಿಗಳನ್ನು ಮುಂದುವರೆಸಿದೆ, ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಬಿಜೆಪಿಯೇತರ ಸರ್ಕಾರಗಳ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.
“ಸಂವಿಧಾನದ ಮೇಲಿನ ದಾಳಿಯು ನಿರಂತರವಾಗಿ ಮುಂದುವರಿದಿದೆ” ಎಂದು ಹೇಳಿದ ಖರ್ಗೆ, ತನಿಖಾ ಸಂಸ್ಥೆಗಳನ್ನು “ರಾಜಕೀಯ ವಿರೋಧಿಗಳನ್ನು ಹೆದರಿಸುವ ಸಾಧನಗಳಾಗಿ ನಿರಂತರವಾಗಿ ಬಳಸಲಾಗುತ್ತಿದೆ” ಎಂದು ಆರೋಪಿಸಿದರು.
ದೇಶದಾದ್ಯಂತ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಎದುರಿಸುತ್ತಲೇ ಇದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬಿಜೆಪಿಯೇತರ ಆಡಳಿತದ ಸರ್ಕಾರಗಳು ತಾರತಮ್ಯ ಎದುರಿಸುತ್ತಿವೆ ಎಂದು ಖರ್ಗೆ ಆರೋಪಿಸಿದರು. ನಾಗರಿಕರನ್ನು ಬಾಧಿಸುವ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲು ವಿರೋಧ ಪಕ್ಷಗಳು ಒಗ್ಗಟ್ಟಾಗಿರಬೇಕು ಎಂದು ಅವರು ಕರೆ ನೀಡಿದರು.
ಪರೀಕ್ಷಾ ವ್ಯವಸ್ಥೆಯ ಹಗರಣಗಳಿಂದ ಲಕ್ಷಾಂತರ ಯುವಕರ ಆಶೋತ್ತರಗಳಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಹೇಳುವ ಮೂಲಕ ಖರ್ಗೆ ಅವರು ನಿರುದ್ಯೋಗ ಮತ್ತು ನೇಮಕಾತಿ ಕುರಿತು ಕಳವಳ ವ್ಯಕ್ತಪಡಿಸಿದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಪ್ರಸ್ತಾಪಿಸಿದ ಅವರು, ಹೆಚ್ಚುತ್ತಿರುವ ಆಡಳಿತಾತ್ಮಕ ವೈಫಲ್ಯಗಳ ವಿರುದ್ಧ ವಿರೋಧ ಪಕ್ಷಗಳು ಸಂಘಟಿತವಾಗಿ ಪ್ರತಿಕ್ರಿಯಿಸಬೇಕು ಎಂದು ಕರೆ ನೀಡಿದರು.
ದುರ್ಬಲ ಹೂಡಿಕೆ, ಖಾಸಗಿ ಏಕಸ್ವಾಮ್ಯದ ಬೆಳವಣಿಗೆ, ಎಂಎಸ್ಎಂಇಗಳು ಎದುರಿಸುತ್ತಿರುವ ಸವಾಲುಗಳು ಮತ್ತು ದಮನಿತ ಸಮುದಾಯಗಳ ಮೇಲಿನ ದೌರ್ಜನ್ಯಗಳ ಕುರಿತು ಖರ್ಗೆ ಮತ್ತಷ್ಟು ಕಳವಳ ವ್ಯಕ್ತಪಡಿಸಿದರು. ಭಾರತದ ಸುದೀರ್ಘ ಇತಿಹಾಸದ ಮೌಲ್ಯಗಳು ಮತ್ತು ನಿಲುವುಗಳೊಂದಿಗೆ ಕೇಂದ್ರ ಸರ್ಕಾರವು ರಾಜಿ ಮಾಡಿಕೊಂಡಿದೆ ಎಂದು ಪ್ರತಿಪಾದಿಸುವ ಮೂಲಕ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದರು.
ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 23 ವಿರೋಧ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾಗವಹಿಸಿದ್ದರು.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್ಸಿ), ಸಮಾಜವಾದಿ ಪಾರ್ಟಿ (ಎಸ್ಪಿ), ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್ಸಿ) ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಿವಸೇನಾ (ಯುಬಿಟಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನಿಸ್ಟ್) ಲಿಬರೇಶನ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವಿಡುದಲೈ ಚಿರುತ್ತೈಗಳ್ ಕಚ್ಚಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ಕೇರಳ ಕಾಂಗ್ರೆಸ್, ಕೇರಳ ಕಾಂಗ್ರೆಸ್ (ಎಂ), ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ, ಭಾರತ ಆದಿವಾಸಿ ಪಾರ್ಟಿ, ಲೋಕದಳ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಮತ್ತು ಶೇತ್ಕರಿ ಕಾಮಗಾರ್ ಪಕ್ಷಗಳ ಪ್ರತಿನಿಧಿಗಳು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದರು.


