ರಾಜ್ಯದ ಕನಿಷ್ಠ ಹತ್ತು ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ಅಲ್ಲಿನ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.
“ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ಸಂದರ್ಭದಲ್ಲಿ ಸುಮಾರು 100 ಜನ ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ವಿಮಾನಗಳು ಇಳಿಯಲು ಸಾಧ್ಯವಾಗದೆ ಎರಡು ಬಸ್ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಕ್ಕಿಂತ ಹೆಚ್ಚು ಮಂದಿ ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.
“ರಾಯಭಾರ ಕಚೇರಿಗೆ ಸಂದೇಶ ಕಳುಹಿಸಲಾಗಿದೆ. ರಾಯಭಾರ ಕಚೇರಿ ವಿದ್ಯಾರ್ಥಿಗಳಿಗೆ ಎಲ್ಲಿಗೆ ತಲುಪಬೇಕು ಮತ್ತು ಭದ್ರತಾ ಪರಿಸ್ಥಿತಿಯ ಬಗ್ಗೆ ಮಾರ್ಗದರ್ಶನ ನೀಡುತ್ತಿದೆ. ಅವರು ಮೊದಲು ಸುರಕ್ಷಿತವಾಗಿರಬೇಕು. ವಿಮಾನಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ, ಭಾರತ ಸರ್ಕಾರದ ಸಮನ್ವಯದೊಂದಿಗೆ ಅವರನ್ನು ಮನೆಗೆ ಕರೆತರಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?
ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಈ ಬಗ್ಗೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. pic.twitter.com/eyrZZyD1I0
— Basavaraj S Bommai (@BSBommai) February 24, 2022
ಉಕ್ರೇನ್ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ ೨೦೦ ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬ್ಯಾಚ್ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್ ದೇಶದ ಪೂರ್ವದಲ್ಲಿನ ಡಾನ್ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ದ ಅನಿವಾರ್ಯ ಎಂದಿದ್ದಾರೆ.
ಇದನ್ನೂ ಓದಿ: ಟರ್ಬನ್ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ