ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ರವಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ಕೊಟ್ಟಿದ್ಧಾರೆ. ಕೋಲಾರದ ಭಾಷಣದ ಕಾರಕ್ಕಾಗಿಯೇ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹರಾಗಿದ್ದಾರೆ. ಇದೇ ಅದೇ ಕೋಲಾರದಿಂದ ರಾಹುಲ್ ಗಾಂಧಿ ಅವರ ಪ್ರಚಾರ ಅಭಿಯಾನ ಶುರುವಾಗಿದೆ.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ”ಬಿಜೆಪಿ ಮತ್ತು ಆರ್ಎಸ್ಎಸ್ ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.
ಇಂದು ಭಾರತದಾದ್ಯಂತ ಆರ್ಎಸ್ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ವಿಷಾದಕರ ಎಂದು ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದರು.
”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಜನರ ಒಲವು ಬಲವಾಗಿದೆ ಎಂದು ತಿಳಿದು ನನಗೆ ತುಂಬಾ ಸಂತೋಷವಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದರು.
ಸಂಸತ್ತಿನ ಅಧಿವೇಶನದಲ್ಲಿ ಉದ್ದೇಶಪೂರ್ವಕವಾಗಿ ತಮ್ಮ ಮೈಕ್ ಆಫ್ ಮಾಡಲಾಯಿತು. ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಯಿತು. ಆ ಬಳಿಕ ಅವರು ನನ್ನನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು ಎಂದು ರಾಹುಲ್ ಗಾಂಧಿ ಹೇಳಿಕೊಂಡರು.
ಇದನ್ನೂ ಓದಿ: ಬಸವಣ್ಣನವರ ವಿಚಾರಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ಬಗ್ಗೆ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥರೆಂದು ಗುರುತಿಸಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಲಾಗಿದೆ ಎನ್ನುವುದನ್ನು ಉಲ್ಲೇಖಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸರ್ಕಾರಿ ಉದ್ಯೋಗದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸಾಕಷ್ಟು ಪ್ರಾತಿನಿಧ್ಯವನ್ನು ನೀಡಲು ವಿಫಲವಾಗಿದೆ ಎಂದು ಗಾಂಧಿ ಟೀಕಿಸಿದರು.
”ನಾವು ದೇಶದಲ್ಲಿ ಒಬಿಸಿಯನ್ನು ಮುಂದಕ್ಕೆ ಕೊಂಡೊಯ್ಯಲು ಮತ್ತು ಅವರ ಹಕ್ಕುಗಳನ್ನು ನೀಡಲು ಬಯಸುತ್ತೇವೆ. ಆದರೆ ಪ್ರಧಾನಿ ಮೋದಿ ಒಬಿಸಿ ಜನಗಣತಿಯ ಡೇಟಾವನ್ನು ಬಿಡುಗಡೆ ಮಾಡುತ್ತಿಲ್ಲ. ಏಕೇಮದರೆ ಪ್ರಧಾನಿಗೆ ಒಬಿಸಿ ಕಲ್ಯಾಣವಾಗುವುದು ಬೇಕಿಲ್ಲ, ಹಾಗಾಗಿ ಅವರು ಒಬಿಸಿ ಜನಗಣತಿ ಅಂಕಿಅಂಶಗಳನ್ನು ಬಿಡುಗಡೆ ಮಾಡುವುದಿಲ್ಲ. ನಮಗೆ ಅವಕಾಶ ಸಿಕ್ಕ ತಕ್ಷಣ ನಾವು ಬಿಡುಗಡೆ ಮಾಡಿ, ಓಬಿಸಿಗಳ ಕಲ್ಯಾನಕ್ಕೆ ಶ್ರಮಿಸುತ್ತೇವೆ ಎಂದರು.
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.