ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸರ್ಕಾರಗಳು ಘೋಷಿಸಿದ ಲಾಕ್ಡೌನ್ನಿಂದ ಉಂಟಾದ ನಷ್ಟ ಭರಿಸಲು ರಾಜ್ಯ ಸರ್ಕಾರವು ಆಟೋ ಚಾಲಕರಿಗೆ ರೂ. 5000 ನೀಡುವುದಾಗಿ ಘೋಷಿಸಿತ್ತು. ಆದರೆ ಈ ಪರಿಹಾರ ಇನ್ನೂ ಫಲಾನುಭವಿಗಳಿಗೆ ತಲುಪದ ಕಾರಣ ಆಗಸ್ಟ್ 19 ರಂದು ಆಟೋ ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ‘ಎಲ್ಲಿ 5 ಸಾವಿರ?’ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಆಟೋ ಘಟಕದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದ್ದಾರೆ.
ಕೊರೊನಾದಿಂದ ಬಹುತೇಕ ಎಲ್ಲಾ ವಹಿವಾಟುಗಳು ಸ್ಥಗಿತಗೊಂಡಿದ್ದರಿಂದ ಚಾಲಕರ ಪರಿಸ್ಥಿತಿ ದಯನೀಯವಾಗಿದೆ. ಅನ್ಲಾಕ್ ಪ್ರಾರಂಭವಾಗಿದ್ದರೂ ಸಹ ಮೊದಲಿನಂತೆ ವ್ಯವಹಾರ ನಡೆಯುತ್ತಿಲ್ಲ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರವು ಕೊಟ್ಟ ಭರವಸೆ ಈಡೇರಿಸಿಲ್ಲ. ಹಾಗಾಗಿ ಹೋರಾಟ ಅನಿವಾರ್ಯವಾಗಿದ್ದು ಈ ಪ್ರತಿಭಟನೆಗೆ ರಾಜ್ಯದಾದ್ಯಂತ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಚಾಲಕರಿದ್ದಾರೆ. ಅವರಲ್ಲಿ ಸುಮಾರು 3.5ಲಕ್ಷ ಜನ ಈ ಪರಿಹಾರ ದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ ಕೇವಲ 40 ಸಾವಿರ ಆಟೋ ಚಾಲಕರಿಗೆ ಮಾತ್ರ ಪರಿಹಾರ ಸಿಕ್ಕಿದೆ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್ ಹೇಳಿದ್ದಾರೆ.
ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಕೈಗೊಳ್ಳುವುದಾಗಿ ಆಟೋ ಚಾಲಕರು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ