ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಸರಣಿ ಕೊಲೆಗಳು ನಡೆದ ಹಿನ್ನೆಲೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿಗೆ ನಿರ್ಬಂಧ ಹೇರಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಆಗಸ್ಟ್ 05ರಿಂದ ಈ ನಿಯಮ ಅನ್ವಯವಾಗಲಿದ್ದು ಮಹಿಳೆಯರು, ವೃದ್ದರು ಮತ್ತು ಮಕ್ಕಳಿಗೆ ವಿನಾಯಿತಿ ನೀಡಲಾಗಿತ್ತು. ಆದರೆ ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ಬಂದ ನಂತರ ಆದೇಶ ವಾಪಸ್ ಪಡೆಯಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ದ್ವಿಚಕ್ರವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಹಾಗಾಗಿ ಪುರುಷ ಹಿಂಬದಿ ಸವಾರರನ್ನು ನಿರ್ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಶುಕ್ರವಾರದಿಂದ ಈ ನಿಯಮ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಈ ನಿಯಮವನ್ನು ಈ ಹಿಂದೆ ಕೇರಳದ ವಯನಾಡಿನಲ್ಲಿಯೂ ಜಾರಿಗೆ ತರಲಾಗಿತ್ತು ಎಂದು ಅವರು ಹೇಳಿದ್ದಾರೆ.
ಸದ್ಯಕ್ಕೆ ಒಂದು ವಾರ ಈ ನಿಯಮ ಜಾರಿಯಲ್ಲಿರುತ್ತದೆ. ಅಗತ್ಯಬಿದ್ದರೆ 10 ದಿನಗಳವರೆ ಮುಂದುವರೆಸುತ್ತೇವೆ ಎಂದು ಎಡಿಜಿಪಿ ತಿಳಿಸಿದ್ದರು. ಆದರೆ ಕಮಿಷನರ್ ಶಶಿಕುಮಾರ್ ಆದೇಶವನ್ನು ವಾಪಸ್ ಪಡೆದು ಇನ್ನು ಮೂರು ದಿನಗಳ ಕಾಲ ಮಂಗಳೂರು ನಗರ ವ್ಯಾಪ್ತಿಯಲ್ಲಿನ ನಿಷೇದಾಜ್ಞೆಯನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಈ ನೂತನ ನಿರ್ಧಾರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ಆರಂಭವಾಗಿದ್ದವು. ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ಜನಸಾಮಾನ್ಯರ ಮೇಲೆ ಹೊರೆ ಹೊರಿಸಲಾಗುತ್ತಿದೆ ಎಂಬ ಆರೋಪಗಳು ಸಹ ಕೇಳಿಬಂದಿದ್ದವು.
ಇದನ್ನೂ ಓದಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು