ಬೆಂಗಳೂರಿನ ಚಲವಾದಿಪಾಳ್ಯ ವಾರ್ಡ್ನ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಮೇಲೆ ಇಂದು ಬೆಳಗ್ಗೆ ಮಾರಕಾಸ್ತ್ರಗಳಿಂದ ಬರ್ಬರ ಹಲ್ಲೆ ನಡೆದಿದ್ದು, ಅವರು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಿಗ್ಗೆ ರೇಖಾ ಕದಿರೇಶ್ರವರು ಮನೆಯಲ್ಲಿದ್ದಾಗ ಅವರನ್ನು ಮನೆಯಿಂದ ಹೊರಗೆ ಕರೆದು ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಚಾಕುವಿನಿಂದ ಕುತ್ತಿಗೆ ಸೀಳಿ ಹಲ್ಲೆ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಅವರು ಬದುಕುಳಿಯಲಿಲ್ಲ. ಈ ಹಿಂದೆ 2018ರಲ್ಲಿ ರೇಖಾರವರು ಪತಿ ಕದಿರೇಶ್ ಅವರನ್ನು ಸಹ ಶೋಬನ್ ಮತ್ತು ಗ್ಯಾಂಗ್ ಕೊಲೆ ಮಾಡಿತ್ತು.
ರೇಖಾ ಅವರ ಸಂಬಂಧಿ ಪೀಟರ್ ಹಾಗೂ ಸುರೇಶ್ ಎಂಬುವವರಿಂದ ಇಂದು ಬೆಳಿಗ್ಗೆ ಕೊಲೆ ನಡೆದಿದೆ ಎಂದು ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ 10.30ರ ವೇಳೆಗೆ ಅವರ ಮನೆ ಮುಂದೆ ಬಂದ ದುಷ್ಕರ್ಮಿಗಳು ಅವರನ್ನು ಮನೆಯಿಂದ ಹೊರಗೆ ಕರೆಸಿಕೊಂಡು ಮಾತುಕತೆ ನಡೆಸುವ ವೇಳೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಆಕೆಯ ಕುತ್ತಿಗೆ, ತಲೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಮಾಡಿದ್ದ ಹಂತಕರು ಗಲಾಟೆ ಕೇಳಿ ಸ್ಥಳೀಯರು ಜಮಾಯಿಸುವುದರೊಳಗೆ ಅಲ್ಲಿಂದ ಪರಾರಿಯಾಗಿದ್ದರು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ