Homeಮುಖಪುಟಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; 'ನನ್ನ ಮಗನ ಶವ ನನಗೆ ಬೇಡ' ಎಂದ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

- Advertisement -
- Advertisement -

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ ಮುಂಜಾನೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಆದರೆ, ಈ ಘಟನೆಯ ನಂತರ ಆತನ ಹೆತ್ತ ತಾಯಿ ನೀಡಿರುವ ಹೇಳಿಕೆ ಹಾಗೂ ಆಕೆಯ ನಿರ್ಧಾರ ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ. “ನನ್ನ ಮಗ ಮಾಡಿದ ರಾಕ್ಷಸ ಕೃತ್ಯಕ್ಕೆ ಆತನಿಗೆ ಸೂಕ್ತ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಸ್ವೀಕರಿಸುವುದಿಲ್ಲ” ಎಂದು ತಾಯಿ ಸಂಧ್ಯಾ ಮಂಡಲ್ ದೃಢವಾಗಿ ಹೇಳಿದ್ದು, ಕ್ರೂರ ಅಪರಾಧವೆಸಗಿದ ಮಗನಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಂಡಿದ್ದಾರೆ.

ಬರುಯಿಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪಲಾಶ್ ಚಂದ್ರ ದಾಲಿ ನೀಡಿದ ಮಾಹಿತಿಯಂತೆ, ಬುಧವಾರ ಮುಂಜಾನೆ ಸುಮಾರು 12:45ರ ವೇಳೆಗೆ ಪ್ರಕರಣದ ತನಿಖೆಯ ಭಾಗವಾಗಿ ಅಪರಾಧ ನಡೆದ ಸ್ಥಳದ (ಸೂರ್ಯಪುರ) ಪುನರ್ನಿರ್ಮಾಣ (Reconstruction of crime scene) ಕಾರ್ಯಕ್ಕಾಗಿ ಆರೋಪಿ ಪ್ರಭಾಸ್ ಮೊಂಡೋಲ್‌ನನ್ನು ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿಯು ತನಿಖೆಗೆ ಸಹಕರಿಸದೆ ಅಧಿಕಾರಿಗಳನ್ನು ದಾರಿತಪ್ಪಿಸಲು ಯತ್ನಿಸಿದ್ದನು.

ಸ್ಥಳಕ್ಕೆ ತಲುಪುತ್ತಿದ್ದಂತೆಯೇ, ಪ್ರಭಾಸ್ ದಿಢೀರನೆ ಪೊಲೀಸ್ ಅಧಿಕಾರಿಯೊಬ್ಬರ ಸೇವಾ ಪಿಸ್ತೂಲನ್ನು ಕಸಿದುಕೊಂಡು, ಪೊಲೀಸ್ ತಂಡದ ಮೇಲೆ ಒಂದು ಸುತ್ತು ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಭಾಸ್‌ನನ್ನು ತಕ್ಷಣವೇ ಬರುಯಿಪುರ ಸಬ್-ಡಿವಿಷನಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

‘ಶವ ಮನೆಗೆ ತರಲ್ಲ, ಏನು ಬೇಕಾದರೂ ಮಾಡಿ’: ತಾಯಿಯ ಪ್ರತಿಕ್ರಿಯೆ

ಮಗನ ಎನ್‌ಕೌಂಟರ್ ಸುದ್ಧಿ ತಿಳಿದ ನಂತರ ಪ್ರಮುಖ ಆರೋಪಿ ಪ್ರಭಾಸ್‌ನ ತಾಯಿ ಸಂಧ್ಯಾ ಮಂಡಲ್ ಸುದ್ದಿ ಸಂಸ್ಥೆ (ANI) ಜೊತೆ ಮಾತನಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬುಧವಾರ ಬೆಳಿಗ್ಗೆ ನಾನು ಎಚ್ಚರಗೊಳ್ಳುತ್ತಿದ್ದಂತೆಯೇ ಇಬ್ಬರು ಪೊಲೀಸರು ಮನೆಗೆ ಬಂದರು. ‘ನಿಮ್ಮ ಮಗ ಸತ್ತಿದ್ದಾನೆ, ಆಸ್ಪತ್ರೆಗೆ ಬರುತ್ತೀರಾ?’ ಎಂದು ಕೇಳಿದರು. ನನ್ನ ಪತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಬರುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದೆ. ಆತ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ. ಆತ ಎಸಗಿದ ಭಯಾನಕ ಅಪರಾಧಕ್ಕೆ ಆತನಿಗೆ ತಕ್ಕ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಮನೆಗೆ ತರುವುದಿಲ್ಲ ಮತ್ತು ಸ್ವೀಕರಿಸುವುದೂ ಇಲ್ಲ. ಆತನ ಶವವನ್ನು ಪೊಲೀಸರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೆ ಯಾವುದೇ ಅಭ್ಯಂತರವಿಲ್ಲ” ಎಂದು ಅತ್ಯಂತ ಕಠಿಣ ಧ್ವನಿಯಲ್ಲಿ ಸಂಧ್ಯಾ ಮಂಡಲ್ ಪ್ರತಿಪಾದಿಸಿದ್ದಾರೆ.

ಈ ಪ್ರಕರಣವು ಪಶ್ಚಿಮ ಬಂಗಾಳ ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಶನಿವಾರ (ಜುಲೈ 4) ಕಾಣೆಯಾಗಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಮೃತದೇಹವು ಭಾನುವಾರ ಬೆಳಿಗ್ಗೆ ಬರುಯಿಪುರದ ಸೂರ್ಯಪುರ ಹಾಟ್ ಬಳಿಯ ಕೊಳವೊಂದರಲ್ಲಿ ಪತ್ತೆಯಾಗಿತ್ತು.

ಬಾಲಕಿಯ ಶವ ಸಿಗುತ್ತಿದ್ದಂತೆಯೇ ಸ್ಥಳೀಯರು ರೊಚ್ಚಿಗೆದ್ದು, ರಸ್ತೆ ತಡೆ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಆಸ್ಪತ್ರೆಯಿಂದ ಬಂದ ಪ್ರಥಮ ಮರಣೋತ್ತರ ಪರೀಕ್ಷೆಯ (Autopsy) ವರದಿಯು ಅಪರಾಧದ ಕ್ರೂರತೆಯನ್ನು ಬಿಚ್ಚಿಟ್ಟಿತ್ತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ದೇಹಕ್ಕೆ ಸುಟ್ಟ ಗಾಯಗಳನ್ನು ಉಂಟುಮಾಡಿ, ತಲೆಯ ಹಿಂಭಾಗಕ್ಕೆ ಬಲವಾದ ವಸ್ತುವಿನಿಂದ ಹೊಡೆದು ಹಿಂಸಿಸಲಾಗಿತ್ತು. ಅಷ್ಟೇ ಅಲ್ಲದೆ, ಬಾಲಕಿ ಜೀವಂತವಾಗಿದ್ದಾಗಲೇ ಆಕೆಯನ್ನು ಕೊಳಕ್ಕೆ ಎಸೆಯಲಾಗಿತ್ತು ಎಂಬುದು ಆಕೆಯ ಶ್ವಾಸಕೋಶದಲ್ಲಿ ಸಿಕ್ಕ ಕೆಸರು ನೀರಿನಿಂದ ದೃಢಪಟ್ಟಿತ್ತು. ಅತಿಯಾದ ರಕ್ತಸ್ರಾವ ಮತ್ತು ನೀರಿನಲ್ಲಿ ಮುಳುಗಿದ್ದೇ ಬಾಲಕಿಯ ಸಾವಿಗೆ ಕಾರಣವೆಂದು ವೈದ್ಯರು ದೃಢಪಡಿಸಿದ್ದರು.

ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬಾಲಕಿ ಕಾಣೆಯಾಗುವ ಮೊದಲು ಆಕೆಯೊಂದಿಗೆ ಪ್ರಭಾಸ್ ಮೊಂಡೋಲ್ ಇರುವುದು ಕಂಡುಬಂದಿತ್ತು. ಪೊಲೀಸರು ತಕ್ಷಣವೇ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಇತರ ಸಹ-ಆರೋಪಿಗಳಾದ ಆನಂದ್ ಸರ್ದಾರ್, ದಿವಾಕರ್ ಸರ್ದಾರ್ ಮತ್ತು ಕಬೀರ್ ಮೊಲ್ಲಾ ಎಂಬುವವರ ಹೆಸರುಗಳು ಹೊರಬಂದಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪೋಕ್ಸೋ (POCSO) ಕಾಯ್ದೆ, ಸಾಮೂಹಿಕ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯ ನಾಶದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದರು.

ಈ ಎನ್‌ಕೌಂಟರ್ ಘಟನೆಯು ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರವು ಅಪರಾಧಗಳ ವಿರುದ್ಧ ‘ಝೀರೋ ಟಾಲರೆನ್ಸ್’ ನೀತಿ ಅನುಸರಿಸುವುದಾಗಿ ಸ್ಪಷ್ಟಪಡಿಸಿದ್ದರೆ, ಮತ್ತೊಂದೆಡೆ ಎನ್‌ಕೌಂಟರ್ ಪ್ರಕ್ರಿಯೆಯ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

ತನ್ನ ಮಗನೇ ಆದರೂ ಆತ ಎಸಗಿದ ಮನುಷ್ಯತ್ವವಿಲ್ಲದ ಕೃತ್ಯಕ್ಕೆ ಆತನ ಹೆತ್ತ ತಾಯಿಯೇ ಮೃತದೇಹವನ್ನು ನಿರಾಕರಿಸಿ, ಶಿಕ್ಷೆಯನ್ನು ಬೆಂಬಲಿಸಿರುವುದು ಸಮಾಜದಲ್ಲಿ ಅಪರಾಧಿಗಳ ವಿರುದ್ಧ ವ್ಯಕ್ತವಾಗುತ್ತಿರುವ ತೀವ್ರ ಆಕ್ರೋಶಕ್ಕೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...