ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನೂ ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿಎಸ್ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್ ಯಡಿಯೂರಪ್ಪ ವಿರುದ್ಧದ ತಮ್ಮ ಎಂದಿನ ವಾಗ್ದಾಳಿಯನ್ನು ನಿಲ್ಲಿಸಲು ಯತ್ನಾಳ್ ಇಂದೂ ಸಹ ಅವರ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ ಹೀಗಿದೆ:
ಜ.4 ಮತ್ತು 5 ರಂದು ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಹಿಂದಿನ ವಿಭಾಗವಾರು ಸಭೆಗಳು ವಿಫಲವಾಗಿವೆ. ಈ ಮೊದಲು ವಿಭಾಗವಾರು ಶಾಸಕರ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಮನವಿ ಸಲ್ಲಿಸಲಾಗಿತ್ತು. ಸಿಎಂ ತಕ್ಷಣ ಹಣ ಬಿಡುಗಡೆ ಮಾಡಿ ಎಂದು ಷರಾ ಬರೆದಿದ್ದರು. ಆದರೂ, ಈವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಯತ್ನಾಳ ಪತ್ರದಲ್ಲಿ ತಿಳಿಸಿದ್ದಾರೆ.
![](https://naanugauri.com/wp-content/uploads/2020/12/Yatnal-CM-Letter.jpeg)
ಈ ಹಿಂದೆ ನಡೆದ ವಿಭಾಗವಾರು ಶಾಸಕರ ಸಭೆಯಿಂದಾಗಿ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಶಾಸಕರ ಮನಸ್ಸಿಗೆ ನೋವಾಗಿದೆ. ಉದಾಹರಣೆಗೆ ನನ್ನ ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ. ಶಾಸಕರು ಸಿಎಂ ಭೇಟಿಗೆ ಹೋದರೂ ಮುಖ್ಯಮಂತ್ರಿಗಳು ಸಿಗುತ್ತಿಲ್ಲ. ಬಹುಷಃ ಸಿಎಂ ಅನಾರೋಗ್ಯದ ದೃಷ್ಠಿಯಿಂದ ಸಿಗುತ್ತಿಲ್ಲ ಎಂದು ಭಾವಿಸುತ್ತೇನೆ ಎಂದು ಸಿಎಂ ಆರೋಗ್ಯದ ಬಗ್ಗೆಯೂ ಯತ್ನಾಳ ಪ್ರಸ್ತಾಪಿಸಿದ್ದಾರೆ.
ಇತ್ತೀಚೆಗೆ ನಡೆದ ನಾನಾ ನಿಗಮ ಮತ್ತು ಮಂಡಳಿಗಳಿಗೆ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಲ್ಲದೇ, ಹಲವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ವಿಚಾರದಲ್ಲಿಯೂ ಬಿಜೆಪಿ ಶಾಸಕರನ್ನು ಕಡೆಗಣನೆ ಮಾಡಲಾಗಿದೆ. ಇದರಿಂದ ಕಾರ್ಯಕರ್ತರಿಗೂ ನೋವಾಗಿದೆ” ಎಂದು ಯತ್ನಾಳ ಸಿಎಂ ವಿರುದ್ಧದ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಆದ್ದರಿಂದ, ರಾಜ್ಯಾಧ್ಯಕ್ಷರು, ಸಿಎಂ ಜ. 4 ಮತ್ತು 5 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಮೂಲಕ ಬಿಜೆಪಿ ಶಾಸಕರಲ್ಲಿ ಇರುವ ಅಸಮಾಧಾನ ಹೋಗಲಾಡಿಸಬೇಕು ಎಂದು ಯತ್ನಾಳ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.