ರಾಜ್ಯದಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟವನ್ನು ನಿಭಾಯಿಸುವ ಸಲುವಾಗಿ ಬಿಬಿಎಂಪಿ ವ್ಯಾಪ್ತಿಗೆ ಬರುವ ಸರ್ಕಾರಿ ಗುತ್ತಿಗೆ ಜಮೀನುಗಳನ್ನು ಮಾರಾಟ ಮಾಡಲು ರಾಜ್ಯಸರ್ಕಾರ ಮುಂದಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ್ ನೇತೃತ್ವದಲ್ಲಿ ನಡೆದ ವಿಸ್ತೃತ ಸಭೆಯಲ್ಲಿ ಚರ್ಚಿಸಿ, ಕರ್ನಾಟಕದ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಹಾಗೂ ಸ್ಥಳೀಯ ಸಂಸ್ಥೆಗಳ ಕಾಯ್ದೆಯಡಿ ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಮಾರಾಟ ಮಾಡುವ ಪ್ರಸ್ತಾವವನ್ನು ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆಗೆ ಸಲ್ಲಿಸಲಾಗಿದೆ.
ಬಿಬಿಎಂಪಿ, ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳನ್ನು ಮಾರಲಾಗುತ್ತಿದೆ. ಕೇವಲ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 4,780 ಆಸ್ತಿಗಳನ್ನು ಗುತ್ತಿಗೆಗೆ ನೀಡಲಾಗಿದೆ. ಇವುಗಳ ಮಾರಾಟದಿಂದ ಸುಮಾರು 5 ಸಾವಿರ ಕೋಟಿ ವರಮಾನ ಬರಲಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯ ಸರ್ಕಾರದ ಈ ನಡೆಗೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರಿಂದ ಆಕ್ರೋಷ ವ್ಯಕ್ತವಾಗಿದೆ.
ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು.
1/5— H D Kumaraswamy (@hd_kumaraswamy) August 18, 2020
ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ.
4/5— H D Kumaraswamy (@hd_kumaraswamy) August 18, 2020
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಸರ್ಕಾರದ ಈ ನಡೆಯನ್ನು ಖಂಡಿಸಿದ್ದಾರೆ.
‘ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.
‘ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.
‘ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದಿದ್ದಾರೆ.
‘ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಆರೋಪಿಸಿದ್ದಾರೆ.
‘ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿ’ ಎಂದು ಆಗ್ರಹಿಸಿದ್ದಾರೆ.
ಕೊರೊನಾ ನೆಪದಲ್ಲಿ ಇಂತಹ ಕ್ರಮ ತೆಗೆದುಕೊಳ್ಳುವು ಸರಿಯಲ್ಲ. ಮುಂದೆ ಸರ್ಕಾರಿ ಯೋಜನೆಗಳಿಗೆ ಖಾಸಗಿಯವರ ಬಳಿ ಕೈಚಾಚಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
‘ಲಾಕ್ ಟೌನ್ ನಿಂದಾಗಿ ಹತ್ತಾರು ಕೋಟಿಯ ಕಾಮಗಾರಿಗಳು ಸ್ಥಗಿತಗೊಂಡಿವೆ. ಮತ್ತೊಂದೆಡೆ ಸಾವಿರಾರು ಕೋಟಿಯ ನಿರುಪಯುಕ್ತ ಕಾಮಗಾರಿಗಳನ್ನು ಸರ್ಕಾರ ಮಾಡುತ್ತಿದೆ. ಈ ಯೋಜನೆಗಳನ್ನು ರದ್ದುಪಡಿಸಿದರೆ ಸರ್ಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣ ಇರುತ್ತಿತ್ತು’ ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷರಾದ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.
‘ಭ್ರಷ್ಟಾಚಾರ ನಡೆಸುವ ಉದ್ದೇಶದಿಂದ ಹಾಗೂ ರಿಯಲ್ ಎಸ್ಟೇಟ್ ನವರಿಗೆ ಲಾಭ ಮಾಡಿಕೊಡಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ’ ಎಂದು ಆರೋಪಿಸಿದ್ದಾರೆ.
ಗುತ್ತಿಗೆ ಜಮೀನುಗಳನ್ನು ಮಾರುವ ಬದಲು, ಅವುಗಳ ಬಾಡಿಗೆ ಹೆಚ್ಚಿಸಿದ್ದರೆ ಸಾಕಿತ್ತು ಎಂದು ಪಾಲಿಕೆಯ ಬಿಜೆಪಿ ಸದಸ್ಯ ಬಿ.ಎಸ್ ಸತ್ಯನಾರಾಯಣ ಹೇಳಿದ್ದಾರೆ. ರಾಜ್ಯಸರ್ಕಾರವು ಕೌನ್ಸಿಲ್ ನ ಒಪ್ಪಿಗೆ ಪಡೆಯದೇ ಈ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ