ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಬೆಳಗಾವಿ ಮಹಾ ನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಜನರಲ್ಲಿ ಗಾಬರಿ ಹುಟ್ಟಿಸಿದೆ. ಪ್ರಣಾಳಿಕೆಯಲ್ಲಿ ಉಚಿತ ಶವಸಂಸ್ಕಾರದ ಭರವಸೆ ನೀಡಿರುವುದು ಇದಕ್ಕೆ ಕಾರಣವಾಗಿದೆ.
ಶನಿವಾರ ವಿಧಾನಪರಿಷತ್ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಬೆಳಗಾವಿಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
’ಮನೆ ಬಾಗಿಲಿಗೆ ಮಹಾನಗರಪಾಲಿಕೆ-ಬಿಜೆಪಿ ಸಂಕಲ್ಪ’ ಎಂಬುದನ್ನು ಒಳಗೊಂಡಿರುವ ಈ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳ ಜೊತೆಗೆ “ಬೆಳಗಾವಿ ಮಹಾನಗರಪಾಲಿಕೆಯಿಂದ ಶವಸಂಸ್ಕಾರಕ್ಕೆ ಉಚಿತ ವ್ಯವಸ್ಥೆಗೆ ಕ್ರಮ” ಎಂಬುದು ಸೇರಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬೆಳಗಾವಿ ಜನರು, ಬಿಜೆಪಿ ಜನರ ಸಾವನ್ನು ಬಯಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ‘ಜನರು ಉಗಿಯುವುದೊಂದೆ ಬಾಕಿ’ – ರಾಜೀನಾಮೆ ಪತ್ರದಲ್ಲಿ ಬಿಜೆಪಿ ಅಧ್ಯಕ್ಷ!
ಬೆಳಗಾವಿಯ ಮಹಾನಗರ ಪಾಲಿಕೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಾಯಿತು.
ಬೆಳಗಾವಿಯ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ.
ಬೆಳಗಾವಿಯ ಮಹಾನಗರಕ್ಕೆ ನಮ್ಮ ಕೊಡುಗೆ.
ನಿಮ್ಮ ಸಹಕಾರ, ನಮ್ಮಿಂದ ಸಾಕಾರ.ಈ ಸಂದರ್ಭದಲ್ಲಿ ಸಚಿವರು, ಶಾಸಕರು, ಉಸ್ತುವಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. pic.twitter.com/lzgRrBq8N9
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) August 28, 2021
ಬಿಜೆಪಿ ತನ್ನ ಪ್ರಣಾಳಿಕೆಯನ್ನು ಜನಸ್ನೇಹಿ ಹಾಗೂ ಅಭಿವೃದ್ಧಿ ಪರ ಆಡಳಿತ ನಮ್ಮ ಸಂಕಲ್ಪ ಎಂದು ಹೇಳಿದೆ. ನೂರು ರೂಪಾಯಿ ಬಾಂಡ್ಗಳನ್ನು ನೀಡಿ ಖರೀದಿಸಿದ ಮನೆಗಳ ಸಕ್ರಮಕ್ಕೆ ಪ್ರಾಮಾಣಿಕ ಪ್ರಯತ್ನ. ತ್ಯಾಜ್ಯ ಮುಕ್ತ ನಗರ ನಿರ್ಮಾಣ. ಸ್ವಚ್ಛತೆಗೆ ಆದ್ಯತೆ, ಮನೆ ಮನೆಗಳಿಂದ ಕಸ ಸಂಗ್ರಹಿಸುವ ವ್ಯವಸ್ಥೆ ಜಾರಿ. ಬೆಳಗಾವಿ ಮಹಾನಗರಪಾಲಿಕೆಯಿಂದ ಶವಸಂಸ್ಕಾರಕ್ಕೆ ಉಚಿತ ವ್ಯವಸ್ಥೆಗೆ ಕ್ರಮ ಮತ್ತು ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ನಾಲೆಗಳಿಗೆ ಕಾಂಕ್ರೀಟ್ ಎಂಬ ಭರವಸೆಗಳು ಪ್ರಣಾಳಿಕೆಯಲ್ಲಿವೆ.
ಅಭಿವೃದ್ಧಿ ಹಾಗೂ ಹಿಂದುತ್ವದ ಪರಿಕಲ್ಪನೆಯೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎದುರಿಸುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಮುಜರಾಯಿ ಇಲಾಖೆ ಸಚಿವ ಶಶಿಕಲಾ ಜೊಲ್ಲೆ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅನಿಲ ಬೆನಕೆ, ಮಹೇಶ ಕುಮಠಳ್ಳಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ತಮಿಳುನಾಡು: ಲೈಂಗಿಕ ಹಗರಣದಲ್ಲಿ ಬಿಜೆಪಿ ಮುಖಂಡ, ವಿಡಿಯೊ ಪ್ರಸಾರದ ಮಾಡಿದ ಸ್ವಪಕ್ಷದ ಸದಸ್ಯ