ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿಯೊಂದಕ್ಕೆ ಚಪ್ಪಲಿ ಎಸೆದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಲಾಗಿದೆ.
“ಕೋಮು ಗಲಭೆ ಸೃಷ್ಟಿಸಲು ಈ ಕೃತ್ಯವನ್ನು ಎಸಗಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ. ಸಿರುಗುಪ್ಪ ಪಟ್ಟಣದಲ್ಲಿ ಘಟನೆ ನಡೆದಿದೆ.
ಆರೋಪಿಗಳನ್ನು ನಿತೇಶ್ ಕುಮಾರ್, ಭೀಮಣ್ಣ, ಅಶೋಕ್ ಮತ್ತು ಆಂಜನೇಯಲು ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. “ನಾವು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.
“ಮೆರವಣಿಗೆಯ ಮಾರ್ಗದಲ್ಲಿ ಗಮನ ಹರಿಸಲು ನಿಯೋಜಿಸಲಾಗಿದ್ದ ಪೊಲೀಸ್ ಅಧಿಕಾರಿಗಳು ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಆರಂಭದಲ್ಲಿ ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆರೋಪಿಗಳು ಚಪ್ಪಲಿ ಎಸೆದಿರುವ ವಿಡಿಯೋ ವೈರಲ್ ಆದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
Four people arrested in #Ballari #Karnataka for throwing slippers at a mosque during #GaneshChaturthi procession. They are arrested for creating disharmony between communities, and defiling a religious place. pic.twitter.com/FgfauCYVsb
— Imran Khan (@KeypadGuerilla) September 11, 2022
ಘಟನೆಗೆ ಸಂಬಂಧಿಸಿದಂತೆ ಸಿರುಗುಪ್ಪ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಸಾವರ್ಕರ್, ಗೋಡ್ಸೆ ಫೋಟೋ ಪ್ರದರ್ಶನ
ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಗಣೇಶೋತ್ಸವವೂ ವಿವಾದಕ್ಕೆ ಗುರಿಯಾಗಿತ್ತು. ಹಿಂದೂ ಮಹಾಸಭಾದಿಂದ ನಡೆದ ಗಣೇಶೋತ್ಸವದಲ್ಲಿ ಗಾಂಧಿ ಹಂತಕ ಗೋಡ್ಸೆ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದ ವಿ.ಡಿ.ಸಾವರ್ಕರ್ ಫೋಟೋವನ್ನು ಪ್ರದರ್ಶಿಸಲಾಗಿತ್ತು.
ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ವೇಳೆ ಈ ಫೋಟೋಗಳನ್ನು ಪ್ರದರ್ಶಿಸಿದ್ದರು.
ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಸುಭಾಷ್ಚಂದ್ರ ಬೋಸ್, ಭಗತ್ಸಿಂಗ್ ಜೊತೆಗೆ ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ, ವಿ.ಡಿ.ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆಯ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.
ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್!
ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಅಮೀರ್ಅಹಮದ್ ವೃತ್ತದಲ್ಲಿ ವೀರಸಾವರ್ಕರ್ ಹೆಸರಿನಲ್ಲಿ ಬೃಹತ್ ಮಹಾದ್ವಾರ ನಿರ್ಮಿಸಲಾಗಿತ್ತು. ವಿಶೇಷವೆಂದರೆ ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.
ಮೆರವಣಿಗೆಯಲ್ಲಿ ಸಾಗಿ ಬಂದ ಗಣಪತಿ ಮೂರ್ತಿ ಹಿಂಭಾಗದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಅಮೀರ್ ಅಹಮದ್ ವೃತ್ತ ಹಾಗೂ ಬಸ್ ನಿಲ್ದಾಣದ ಎದುರು ಅಶೋಕ ಲಾಂಛನದ ಮೇಲೆ ಕೇಸರಿ ಧ್ವಜಗಳು ಹಾರಾಡಿದ್ದವು.
ಮೆರವಣಿಗೆಯಲ್ಲಿ ಡಿಜೆ ಹಾಕಲು ಜಿಲ್ಲಾಡಳಿತ ಮೊದಲು ಅವಕಾಶ ನಿರಾಕರಿಸಿತ್ತು. ನಂತರ ಸಂಘಟಕರ ಒತ್ತಡಕ್ಕೆ ಮಣಿದು ಗೋಪಿ ವೃತ್ತದಲ್ಲಿ ಡಿಜೆಗೆ ಅವಕಾಶ ಕಲ್ಪಿಸಲಾಗಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ಹುರಿದುಂಬಿಸಿದ್ದರು.