ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರೊಬ್ಬರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.
ಇಂದು ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ರ್ಯಾಲಿ ನಡೆಸಲಿರುವ ಸ್ಥಳವಾದ ಪೂರ್ವ ಮಿಡ್ನಾಪುರದ ಕೊಂಟೈನಿಂದ ಸುಮಾರು 40 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಭೂಪತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾಗಬನ್ಪುರ ಬ್ಲಾಕ್ 2ರ ನಾರ್ಯಬಿಲಾ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಶುಕ್ರವಾರ ರಾತ್ರಿ 11.15ರ ಸುಮಾರಿಗೆ ನಾರ್ಯಬೈಲ ಗ್ರಾಮದ ತೃಣಮೂಲ ಕಾಂಗ್ರೆಸ್ನ ಬೂತ್ ಅಧ್ಯಕ್ಷರ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದಿಂದಾಗಿ ಮನೆಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಸ್ಫೋಟದ ಕಾರಣವನ್ನು ಇನ್ನೂ ಪತ್ತೆಹಚ್ಚಲಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸ್ಫೋಟದ ಪರಿಣಾಮವು ಎಷ್ಟು ರಭಸವಾಗಿದೆಯೆಂದರೆ, ಹುಲ್ಲಿನ ಛಾವಣಿಯೊಂದಿಗೆ ಮಣ್ಣಿನ ಮನೆ ಹಾರಿಹೋಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
“ತೃಣಮೂಲ ಮುಖಂಡನ ಮನೆಯಲ್ಲಿ ಕಚ್ಚಾ ಬಾಂಬ್ಗಳನ್ನು ಸಿದ್ಧಪಡಿಸಲಾಗುತ್ತಿದೆ” ಎಂದು ಬಿಜೆಪಿ ಆರೋಪಿಸಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್, “ರಾಜ್ಯದಲ್ಲಿ ಬಾಂಬ್ ತಯಾರಿಕೆ ಉದ್ಯಮ ಮಾತ್ರ ಅಭಿವೃದ್ಧಿ ಹೊಂದುತ್ತಿದೆ” ಎಂದು ಹೇಳಿದ್ದಾರೆ.
“ಇಂತಹ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಕೆ ಮೌನವಾಗಿದ್ದಾರೆ” ಎಂದು ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಯವರು ಈ ಕುರಿತು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಯಾವುದೇ ಪುರಾವೆಗಳಿಲ್ಲದೆ ಆಡಳಿತ ಪಕ್ಷವನ್ನು ದೂಷಿಸುವುದು ವಿರೋಧ ಪಕ್ಷಗಳಿಗೆ ತುಂಬಾ ಸುಲಭ” ಎಂದು ಪ್ರತಿಕ್ರಿಯಿಸಿದ್ದಾರೆ.
ಮುಂದಿನ ವರ್ಷರಾಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಅದರ ಭಾಗವಾಗಿ ಪೊಲೀಸರು ರಾಜ್ಯಾದ್ಯಂತ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇದರ ಪರಿಣಾಮವಾಗಿ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕಚ್ಚಾ ಬಾಂಬ್ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.
ಇದನ್ನೂ ಓದಿರಿ: ತಮಿಳುನಾಡು: ಟಾಯ್ಲೆಟ್ ತೊಳೆಯಲು ದಲಿತ ವಿದ್ಯಾರ್ಥಿಗಳನ್ನು ದೂಡುತ್ತಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು
ಶಾಂತಿಯುತ ಚುನಾವಣೆ ನಡೆಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪೊಲೀಸರಿಗೆ ಆದೇಶ ನೀಡಿದ್ದಾರೆ ಎಂದು ಆಡಳಿತಾರೂಢ ಟಿಎಂಸಿ ಹೇಳಿದೆ.
2018ರಲ್ಲಿ ನಡೆದ ಪಂಚಾಯತ್ ಚುನಾವಣೆ ವೇಳೆ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ದಾಖಲಾಗಿತ್ತು. ಆಡಳಿತಾರೂಢ ಟಿಎಂಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರೆ, ಆ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊಮ್ಮಿತು. ಎಡ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಬದಿಗೆ ಸರಿಸಿ ಪ್ರಮುಖ ವಿರೋಧ ಪಕ್ಷವಾಗಿ ಬಿಜೆಪಿ ಗುರುತಿಸಿಕೊಂಡಿತು.