ಬಿಜೆಪಿ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಪ್ರಕಟಗೊಳ್ಳುವ ಮುನ್ನವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದಗೌಡ ಅವರು ತಮ್ಮ ಕ್ಷೇತ್ರದ ಜನತೆಗೆ ಧನ್ಯವಾದ ಹೇಳಿ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.
ಈ ಮೂಲಕ ಲೋಕಸಭೆ ಚುನಾವಣೆಗೆ ಟಿಕೆಟ್ ಕೈ ತಪ್ಪುವ ಸುಳಿವು ನೀಡಿದ್ದಾರೆ. ಸದಾನಂದಗೌಡ ಅವರು ಕಳೆದ 10 ವರ್ಷಗಳಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದಾರೆ.
“ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ
ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು” ಎಂದು ಸದಾನಂದಗೌಡ ಬರೆದುಕೊಂಡಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿಯ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಲಿದೆ. ಅವರ ಬದಲಿಗೆ ಮೈಸೂರು ರಾಜ ಮನೆತನದ ಉತ್ತರಾಧಿಕಾರಿ ಯಧುವೀರ್ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗ್ತಿದೆ. ಇನ್ನುಳಿದಂತೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿಗಳಿಗೆ ಟಿಕೆಟ್ ಕೈ ತಪ್ಪುವ ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ : ದಕ್ಷಿಣ ಕನ್ನಡ “ಲೋಕ” ಪಂದ್ಯ: ಕೇಸರಿ ಪಡೆಗೇ ಬೇಡವಾದ ನಳಿನ್; ಬಿಲ್ಲವ ಅಭ್ಯರ್ಥಿ ಅರಸುತ್ತಿರುವ ಕಾಂಗ್ರೆಸ್