ಭೀಮಾ ಕೋರೆಗಾಂವ್ ಪ್ರಕರಣದ ಹೋರಾಟಗಾರರಾದ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರು ಮಾರ್ಚ್ 3 ರಂದು ತೀರ್ಪನ್ನು ಕಾಯ್ದಿರಿಸಿದ್ದರು.
ಗೊನ್ಸಾಲ್ವೆಸ್ ಮತ್ತು ಫೆರೇರಾ ಐದು ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದರು ಎನ್ನುವುದನ್ನು ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡು ಜಾಮೀನು ನೀಡಿತು.
”ಆರೋಪಗಳು ಗಂಭೀರವಾಗಿವೆ ಎಂಬ ಕಾರಣಕ್ಕಾಗಿ ಮಾತ್ರ, ಅವರಿಗೆ ಜಾಮೀನು ನಿರಾಕರಿಸಲಾಗುವುದಿಲ್ಲ” ಎಂದು ಆದೇಶವನ್ನು ಓದುವಾಗ ನ್ಯಾಯಮೂರ್ತಿ ಬೋಸ್ ಹೇಳಿದರು.
ಜಾಮೀನಿಗೆ ಷರತ್ತುಗಳ ಪ್ರಕಾರ, ಗೊನ್ಸಾಲ್ವೆಸ್ ಮತ್ತು ಫೆರೇರಾ ಅವರು ಪ್ರಕರಣದ ವಿಚಾರಣೆ ಮುಗಿಯುವವರೆಗೆ ಮಹಾರಾಷ್ಟ್ರವನ್ನು ಬಿಟ್ಟು ಎಲ್ಲಿಗೂ ಹೋಗುವಂತಿಲ್ಲ. ಇಬ್ಬರು ಕಾರ್ಯಕರ್ತರು ತಮ್ಮ ಪಾಸ್ಪೋರ್ಟ್ಗಳನ್ನು ಒಪ್ಪಿಸಬೇಕು ಮತ್ತು ಅವರ ವಿಳಾಸಗಳು ಮತ್ತು ಫೋನ್ ಸಂಖ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ತಿಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
”ಅವರು ಈ ಅವಧಿಯಲ್ಲಿ ಕೇವಲ ಒಂದು ಮೊಬೈಲ್ ಸಂಪರ್ಕವನ್ನು ಹೊಂದಬಹುದು. ಲೈವ್ ಟ್ರ್ಯಾಕಿಂಗ್ಗಾಗಿ NIA [ರಾಷ್ಟ್ರೀಯ ತನಿಖಾ ಸಂಸ್ಥೆ] ಅಧಿಕಾರಿಯೊಂದಿಗೆ ಮೊಬೈಲ್ ಸಂಖ್ಯೆ ಹಂಚಿಕೊಳ್ಳಬೇಕು. ಅವರು ವಾರಕ್ಕೊಮ್ಮೆ ತನಿಖಾಧಿಕಾರಿಗೆ ವರದಿ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.
ಪ್ರಕರಣದ ಹಿನ್ನೆಲೆ
ಜನವರಿ 1, 2018ರಂದು ಪುಣೆ ಬಳಿಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ನಡೆದ ಜಾತಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 16 ಕಾರ್ಯಕರ್ತರು, ಶಿಕ್ಷಣ ತಜ್ಞರು ಮತ್ತು ವಕೀಲರಲ್ಲಿ ಗೊನ್ಸಾಲ್ವೆಸ್ ಮತ್ತು ಫೆರೇರಾ ಸೇರಿದ್ದಾರೆ. ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು ಜೈಲಿಗೆ ಹಾಕಲಾಗಿತ್ತು.
ಭೀಮಾ ಕೋರೆಗಾಂವ್ ಯುದ್ಧದ 200ನೇ ವಾರ್ಷಿಕೋತ್ಸವದ ಸ್ಮರಣಾರ್ಥ 2017ರ ಡಿಸೆಂಬರ್ 31 ರಂದು ಎಲ್ಗಾರ್ ಪರಿಷತ್ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಶಿಕ್ಷಣ ತಜ್ಞರು ವಕೀಲರು ಸೇರಿ ಅನೇಕರು ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣಗಳು ಮರುದಿನ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ 16 ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದರು ಮತ್ತು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಆಗಸ್ಟ್ 28, 2018 ರಂದು ಬಂಧಿತರಾದ ಗೊನ್ಸಾಲ್ವೆಸ್ ಮತ್ತು ಫೆರೇರಾ ಅವರು ಈ ಪ್ರಕರಣದಲ್ಲಿ ಡೀಫಾಲ್ಟ್ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಗೊನ್ಸಾಲ್ವೆಸ್ ಮತ್ತು ಫೆರೇರಾ ಅವರು ಜಾಮೀನಿಗೆ ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಲಿಲ್ಲ ಎಂದು ನ್ಯಾಯಾಲಯವು ಹೇಳಿತ್ತು.
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 167(2)ರ ಅಡಿಯಲ್ಲಿ, ಆರೋಪಿತ ವ್ಯಕ್ತಿಯನ್ನು ನಿರ್ದಿಷ್ಟ ಸಮಯದವರೆಗೆ ಮಾತ್ರ ಬಂಧಿಸಬಹುದು. ಈ ಅವಧಿಯ ನಂತರವೂ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸದಿದ್ದರೆ ಅವರಿಗೆ ಜಾಮೀನು ನೀಡಬೇಕಾಗುತ್ತದೆ. ಈ ಸೆಕ್ಷನ್ ಅಡಿಯಲ್ಲಿ ಜಾಮೀನು ಡೀಫಾಲ್ಟ್ ಜಾಮೀನು ಅಥವಾ ಕಡ್ಡಾಯ ಜಾಮೀನು ಎಂದು ಉಲ್ಲೇಖಿಸಲಾಗುತ್ತದೆ.
ಇದನ್ನೂ ಓದಿ: ಭೀಮಾ ಕೋರೆಗಾಂವ್: ಚಿಂತಕ ಆನಂದ್ ತೇಲ್ತುಂಬ್ಡೆರವರಿಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್