ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಹುದ್ದೆ ಕೊನೆಗೂ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯ್ಕ್ಗೆ ಒಲಿದಿದೆ. ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಆಯ್ಕೆಯಾಗಿದ್ದಾರೆ.
ಕೆಎಂಎಫ್ ಆಡಳಿತ ಮಂಡಳಿಯಲ್ಲಿ 15 ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳನ್ನು ಪ್ರತಿನಿಧಿಸುವ 15 ನಿರ್ದೇಶಕರಿದ್ದು, ಇವರೆಲ್ಲರೂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಮತದಾನದ ಹಕ್ಕು ಹೊಂದಿರುತ್ತಾರೆ. ಅಲ್ಲದೇ ಕೆಎಂಎಫ್ನ ಒಬ್ಬ ನಾಮ ನಿರ್ದೇಶಿತ ನಿರ್ದೇಶಕರು ಸಹ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇದೆ. ಜತೆಗೆ, ಸರಕಾರದ ಪಶು ಸಂಗೋಪನೆ, ಸಹಕಾರ ಇಲಾಖೆ, ಎನ್ಡಿಡಿಬಿಯಿಂದ ನಿಯೋಜಿಸುವ ಪ್ರತಿನಿಧಿಗಳು ಕೂಡ ಮತದಾನದ ಹಕ್ಕನ್ನು ಹೊಂದಿದ್ದರು. ಆದರೆ, ಭೀಮಾನಾಯ್ಕ್ ಅವಿರೋಧ ಆಯ್ಕೆಯಾಗಿರುವುದರಿಂದ ಮತದಾನದ ಪ್ರಕ್ರಿಯೆ ನಡೆಯಲಿಲ್ಲ.
ಕೆಎಂಎಫ್ ಅಧ್ಯಕ್ಷರ ಅಧಿಕಾರದ ಅವಧಿ ಇನ್ನೂ ಒಂದು ವರ್ಷವಿದ್ದು, ತಮಗೆ ಎಲ್ಲ ನಿರ್ದೇಶಕರ ಬೆಂಬಲವಿದ್ದರೂ ಸಹ ಸಂಸ್ಥೆಯ ಪ್ರಗತಿಗಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಮುಂಬರುವ ಹೊಸ ಅಧ್ಯಕ್ಷರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳುವ ಮೂಲಕ ಕೆಎಂಎಫ್ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದಿದ್ದರು.
ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದ ಬಾಲಚಂದ್ರ ಜಾರಕಿಹೊಳಿ!
ಭೀಮಾನಾಯ್ಕ್ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ಹೊಂದಿದ್ದರು ಎನ್ನಲಾಗಿದೆ. ಆದ್ದರಿಂದ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡದಂತೆ ನಂಜೇಗೌಡರ ಮನವೊಲಿಸಿದ್ದರು ಎಂದು ತಿಳಿದುಬಂದಿದೆ. ಮತ್ತೊಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆ ಯಾರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ್ದರಿಂದ ಭೀಮಾನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧಿಕಾರದ ಅವಧಿ ಇನ್ನೂ ಒಂದು ವರ್ಷವಿತ್ತು, ಕೆಎಂಎಫ್ನ ಎಲ್ಲಾ ನಿರ್ದೇಶಕರ ಬೆಂಬಲ ಇದ್ದರೂ ಕೂಡ ಸಂಸ್ಥೆಯ ಪ್ರಗತಿಯ ದೃಷ್ಟಿಯಿಂದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಹೊಸ ಅಧ್ಯಕ್ಷರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದಿರುವ ನಿರ್ಗಮಿತ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಾಜ್ಯದ ರೈತರು, ಹೈನುಗಾರರು ಮತ್ತು ಗ್ರಾಹಕರ ರಕ್ಷಣೆಗೆ ಸದಾ ಬದ್ಧವಾಗಿದ್ದೆ. ನನ್ನ ಅವಧಿಯಲ್ಲಿ ಪಾರದರ್ಶಕ ಆಡಳಿತ ತರಲು ಶ್ರಮಿಸಿದ್ದೇನೆ, ಕೆಎಂಎಫ್ ಬಲಪಡಿಸಲು ಶಕ್ತಿ ಮೀರಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.