Homeಮುಖಪುಟಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ - ದೇವನೂರ ಮಹಾದೇವ

ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ಗಾಂಧಿ-ಅಂಬೇಡ್ಕರ್-ಜೆಪಿ ವರ್ಚಸ್ಸಿನ ನಾಯಕತ್ವದ ಹುಟ್ಟಿಗೆ ಭಾರತಮಾತೆ ಕಾವು ಕೊಡುತ್ತಿರಬೇಕು, ಅದಕ್ಕಾಗೆ ಭೂಷಣ್‌ರ ಮೇಲೆ ಆರೋಪ, ಅದಕ್ಕಾಗೇ ಈ ನೆಲದ ಪ್ರಜ್ಞೆಗಳಾದ ಆನಂದ್ ತೇಲ್ತುಂಬ್ಡೆ ಮತ್ತಿತರರನ್ನು ರಾಜಕೀಯ ಖೈದು ಮಾಡಿ ಬಂಧನದಲ್ಲಿಟ್ಟಿರುವುದು ಇದ್ದಿರಬಹುದೆ.

- Advertisement -
- Advertisement -

ಮೊನ್ನೆ ಹಿರಿಯ ವಕೀಲರಾದ ರವಿವರ್ಮಕುಮಾರ್ ಅವರಿಗೆ ಫೋನ್ ಮಾಡಿ “ ಹೇಗಿದೆ ನಮ್ಮ ಸುಪ್ರೀಂಕೋರ್ಟ್‌ನ ಯೋಗಕ್ಷೇಮ?” ಎಂದು ಕೇಳಿದೆ. ಪ್ರಶಾಂತ್ ಭೂಷಣ್ ಅವರ ಟ್ವೀಟ್‌ಗಳಿಂದ – ನ್ಯಾಯಾಲಯ ನಿಂದನೆ (Contempt of Court ) ಆಗಿದೆ ಎಂದು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರ ತ್ರಿಸದಸ್ಯ ಪೀಠ ತೀರ್ಪಿತ್ತ ಹಿನ್ನೆಲೆಯಲ್ಲಿ ನಾವು ಮಾತಾಡುತ್ತಿದ್ದೆವು.

ರವಿ ಹೇಳಿದರು – ‘ನ್ಯಾಯಾಂಗನೇ ಆರೋಪ ಮಾಡುವುದು; ಅದೇ ಮೊಕದ್ದಮೆಯನ್ನೂ ಹೂಡಿ ಮತ್ತೆ ಅದೇನೆ ಆರೋಪವನ್ನು ಸಾಬೀತುಪಡಿಸುವುದು, ಆಮೇಲೆ ಆರೋಪ ಸಾಬೀತಾಗಿದೆ ಎಂದು ತೀರ್ಪು ಕೊಡುವುದು ನಮ್ಮ ಸುಪ್ರೀಂಕೋರ್ಟ್‌ನಲ್ಲಿ ನಡೆದು ಹೋಯಿತು” ಅಂದರು. ಯಾಕೆಂದರೆ, ಆ ತೀರ್ಪಿಗೆ ಪ್ರಶಾಂತ್ ಭೂಷಣ್ ಸಲ್ಲಿಸಿದ ಪ್ರಮಾಣಪತ್ರವನ್ನು ಆ ತ್ರಿಸದಸ್ಯ ಪೀಠ ಗಂಭೀರವಾಗಿ ಪರಿಗಣಿಸಲಿಲ್ಲ್ಲ. ನಿಷ್ಪಕ್ಷಪಾತ ನಿಲುವಿಗಾಗಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ತಕ್ಕಡಿ ಹಿಡಿದು ನಿಂತ ನ್ಯಾಯದೇವತೆ ಪ್ರತಿಮೆ ಸುಪ್ರೀಂಕೋರ್ಟ್‌ನಲ್ಲಿ ಇರುವುದೇ ಇಲ್ಲವೇ ಒಮ್ಮೆ ನೋಡಿಬರಬೇಕೆನ್ನಿಸಿತು. ಯಾಕೆಂದರೆ ನ್ಯಾಯಾಲಯದ ಆ ತೀರ್ಪು ಕುರುಡಾಗಿತ್ತು.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ಈ ತೀರ್ಪನ್ನು ಸುಪ್ರೀಂಕೋರ್ಟ್ ವಕೀಲ ಗೌತಮ್ ಬಾಟಿಯಾ ಒಂದು ರೂಪಕದಲ್ಲಿ ಸೆರೆಹಿಡಿಯುತ್ತಾರೆ – “ಬಾಲ್ಯ ಕಾಲದ ನನ್ನ ಫುಟ್‌ಬಾಲ್ ಆಟ ನೆನಪಾಗುತ್ತಿದೆ… ಆಟದ ಮೈದಾನದಲ್ಲಿ ನಾನು ಫುಟ್‌ಬಾಲನ್ನು ಆಫ್‌ವೇ ಲೈನ್‌ನಿಂದ ಎದುರಾಳಿಗಳಿಗೆ ಚೆಂಡು ಸಿಗದಂತೆ ಮಾಡುವ ಚಾಕಚಕ್ಯತೆಯ ಡ್ರಿಬಲ್ ಮಾಡುತ್ತಾ ಗುರಿಯಿಟ್ಟು ಒದ್ದು ಗೋಲ್ ಗಳಿಸುತ್ತಿದ್ದೆ… ಯಾರೂ ಎದುರಾಳಿಗಳು ಇಲ್ಲದ ಆ ಆಟದ ಮೈದಾನದಲ್ಲಿ!” ಈ ಆಟ ನ್ಯಾಯಾಲಯದೊಳಗೆ ನಡೆದು ಬಿಟ್ಟಿತು.

ವಕೀಲ ಪ್ರಶಾಂತ್ ಭೂಷನ್

ಆಯ್ತು, ಪ್ರಶಾಂತ್ ಭೂಷಣ್ ಟ್ವೀಟ್‌ನೊಳಗೆ ಏನಿದೆ? ಅದು ಹೀಗಿದೆ –“ಭವಿಷ್ಯದಲ್ಲಿ ಇತಿಹಾಸಕಾರರು ಕಳೆದ ಆರು ವರ್ಷಗಳ ಬಗ್ಗೆ ಬರೆಯುವಾಗ, ಹೇಗೆ ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಘೋಷಿಸದೆಯೇ ಪ್ರಜಾತಂತ್ರವನ್ನು ನಾಶಮಾಡಲಾಯಿತು ಎಂದು ದಾಖಲಿಸುವಾಗ ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ನ ಹಿಂದಿನ ನಾಲ್ಕು ಮುಖ್ಯ ನ್ಯಾಯಾಧೀಶರ ಪಾತ್ರವನ್ನು ಗುರುತಿಸುತ್ತಾರೆ” – ಈ ಟ್ವೀಟ್ ಆತ್ಮಾವಲೋಕನಕ್ಕೆ ಕಾರಣವಾಗಬೇಕಿತ್ತು. ಕುಸಿಯುತ್ತಿರುವ ನ್ಯಾಯಾಂಗದ ಘನತೆ ಕಾಪಾಡಲು ಒದ್ದಾಡುತ್ತಿರುವ ಸಂಕಟದಂತೆ ಆ ಟ್ವೀಟ್‌ಗಳ ನುಡಿಗಳು ಕಾಣಿಸಬೇಕಿತ್ತು. ಆದರೆ ಪ್ರಶಾಂತ್ ಭೂಷಣ್‌ರ ಆ ಟ್ವೀಟ್‌ಗಳು ನ್ಯಾಯಾಂಗದ ಬುಡವನ್ನೇ ಅಲ್ಲಾಡಿಸುತ್ತಿವೆ ಎಂಬಂತೆ ನ್ಯಾಯಾಧೀಶರ ತ್ರಿಸದಸ್ಯ ಪೀಠ ಭಾವಿಸಿ, ತಮ್ಮ ಭಾವನೆಗಳೇ ನ್ಯಾಯ ಅಂದುಕೊಂಡಂತೆ ಜೊತೆಗೆ ಭೀತಿಗೆ ಒಳಗಾದವರಂತೆ ತೀರ್ಪು ನೀಡಿದ್ದಾರೆ.

ಇಂದು ಈ ಭೀತಿ ನ್ಯಾಯಾಂಗವನ್ನು ಮಾತ್ರವಲ್ಲ, ಇಡೀ ದೇಶವನ್ನೇ ಆವರಿಸಿಕೊಂಡಿದೆ. ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಅಷ್ಟೇಕೆ ಮಾಧ್ಯಮ ಕ್ಷೇತ್ರಗಳನ್ನೂ ಈ ಭೀತಿ ಬಿಟ್ಟಿಲ್ಲ. ಈ ಭೀತಿ ಯಾವ ಸ್ವಾಯತ್ತ ಸಂಸ್ಥೆಗಳನ್ನೂ ಸ್ವಾಯತ್ತವಾಗಿ ಉಳಿಸಿಲ್ಲ. ಈ ಭೀತಿ ಬಗ್ಗೆ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಹೇಳಿಕೆಯೊಂದು ಸುಳಿವು ನೀಡುತ್ತದೆ – “ಗೋಗೋಯ್‌ರನ್ನು ನ್ಯಾಯಮೂರ್ತಿ ಎಂದು ಕರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ… ಅಕ್ಷರಶಃ ಗೋಗೋಯ್ ಅವರು ಆಳುವ ಬಿಜೆಪಿ ಸರ್ಕಾರದ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಹುತೇಕ ಸುಪ್ರೀಂಕೋರ್ಟ್‌ನ ರಾಜಕೀಯ ಕಾರ್ಯಾಂಗದ ವಶಕ್ಕೆ ಒಪ್ಪಿಸಿದರು” ಎನ್ನುತ್ತಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ಅದಕ್ಕಾಗೆ ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜಕೀಯ ನಾಯಕರು, ‘ನಾವು ಸಂವಿಧಾನವನ್ನು ಬದಲಿಸಲು ಬಂದಿದ್ದೇವೆ’ ಎಂದು ಹೇಳಿದರೆ ಅದು ನ್ಯಾಯಾಲಯ ನಿಂದನೆ ಆಗುವುದಿಲ್ಲ! ಸಂವಿಧಾನವನ್ನು ಸುಟ್ಟರೂ ಅದು ನ್ಯಾಯಾಲಯ ನಿಂದನೆ ಆಗುವುದಿಲ್ಲ! ಆದರೆ ನ್ಯಾಯಾಂಗದ ಘನತೆಯನ್ನು ಕಾಪಾಡಲು ತಹತಹಿಸುವ ಪ್ರಶಾಂತ್ ಭೂಷಣ್‌ರ ಟ್ವೀಟ್‌ಗಳು ನ್ಯಾಯಾಲಯದ ನಿಂದನೆಯಾಗಿ ಆ ನ್ಯಾಯಮೂರ್ತಿಗಳಿಗೆ ಕಾಣಿಸುತ್ತಿದೆ. ಇದನ್ನೆಲ್ಲಾ ನೋಡಿದಾಗ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಮಾತುಗಳು ಮನಸ್ಸನ್ನು ಆವರಿಸಿಕೊಳ್ಳುತ್ತವೆ.

ಪ್ರಶಾಂತ್‌ ಭೂಷಣ್ ಮಾಡಿದ್ದ ಟ್ವೀಟ್

ಸ್ವಾತಂತ್ಯ್ರನಂತರ ಎಂದೂ ಭಾರತಕ್ಕೆ ಇಂತಹ ಸ್ಥಿತಿ ಬಂದಿರಲಿಲ್ಲವೇನೋ. ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಕಾಲದಲ್ಲೂ ಕೂಡ. ಆ ಕಾಲದಲ್ಲಿ ನ್ಯಾಯಾಂಗ, ಚುನಾವಣಾ ಆಯೋಗ, ದೇಶದ ಒಕ್ಕೂಟ ಸ್ವರೂಪ, ಆರ್‌ಬಿಐ, ಸಿಬಿಐ, ಮಾಧ್ಯಮ ಇತ್ಯಾದಿ ಹಾಗೂ ಸ್ವಾಯತ್ತ ಸಂಸ್ಥೆಗಳಿಗೆ ಉಗುರು ಹಲ್ಲುಗಳು ಇದ್ದವು. ಅವು ಪ್ರತಿರೋಧ ತೋರಿಸುತ್ತಿದ್ದವು. ಇಂದಿರಾರು ಘೋಷಿಸಿದ ತುರ್ತು ಪರಿಸ್ಥಿತಿ ಅದು ವ್ಯಾಘ್ರ ತುರ್ತು ಪರಿಸ್ಥಿತಿಯಾಗಿತ್ತು. ಹಾಗೇ ಇಂದಿರಾ ವ್ಯಾಘ್ರ ಸರ್ವಾಧಿಕಾರಿಯೂ ಆಗಿದ್ದರು. ಆಗೆಲ್ಲಾ ನೇರಾನೇರಾ ಇತ್ತು. ಎದುರುಬದುರಾ ಆಗುತ್ತಿತ್ತು. ದಮನಿಸಿದರೂ ಪ್ರತಿಭಟನೆಗಳು ಉಕ್ಕುತ್ತಿದ್ದವು.

ಆದರೀಗ? ಈಗ ಇರುವುದು ಗೋಮುಖವ್ಯಾಘ್ರ ತುರ್ತು ಪರಿಸ್ಥಿತಿ. ಇದು ನೋಟಕ್ಕೆ ನಾಜೂಕಾಗಿ ಉದ್ಧಾರಕನಂತೆ ಕಾಣಿಸಿಕೊಳ್ಳುತ್ತದೆ. ಒಳಗೆ ಮಾಡಬಾರದ್ದನ್ನೆಲ್ಲಾ ಮಾಡುತ್ತಿರುತ್ತದೆ. ಇದು ಮುಖಾಮುಖಿಯಾಗುವುದೇ ಇಲ್ಲ. ಬದಲಾಗಿ, ಸಂವಿಧಾನದ ನಾಲ್ಕು ಅಂಗಗಳು ಅಂತೀವಲ್ಲಾ ಅದು ಹಾಗೂ ಎಲ್ಲಾ ಸ್ವಾಯತ್ತ ಸಂಸ್ಥೆಗಳು ಮತ್ತು ದೇಶದ ಒಕ್ಕೂಟ ಸ್ವರೂಪ ಈ ಎಲ್ಲದರ ಕತ್ತಿನ ನರ, ಹಿಮ್ಮಡಿ ನರ ಕತ್ತರಿಸಿ ಇಟ್ಟುಕೊಂಡಿರುತ್ತದೆ. ಈ ಸಂಸ್ಥೆಗಳಿಗೆ ಅವವೇ ಆಕಾರ ಇರುತ್ತದೆ ನಿಜ. ಆದರೆ ಒಳಗೆ ಅರೆಜೀವ. ಹಾಗಾಗಿ ಎಲ್ಲವೂ ರಾಜಕೀಯ ಕಾರ್ಯಾಂಗದ ಉರುಫ್ ಗೋಮುಖವ್ಯಾಘ್ರ ಸರ್ವಾಧಿಕಾರಿಯ ಇಚ್ಛೆ, ಕಣ್ಸನ್ನೆ ಅರಿತು ಕಾರ್ಯ ನಿರ್ವಹಿಸುವಂತಾಗಿಬಿಟ್ಟಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಇದನ್ನು ಸ್ಪಷ್ಟ ಪಡಿಸುವುದಕ್ಕಾಗಿ, ಇತ್ತೀಚೆಗೆ ಅಮೆರಿಕಾದಲ್ಲಿ ಆಫ್ರೊ-ಅಮೆರಿಕನ್ ಜನಾಂಗದ ಕರಿಯ ವ್ಯಕ್ತಿಯನ್ನು ಅಲ್ಲಿನ ಪೋಲಿಸರು ಕತ್ತು ಹಿಸುಕಿ ಕೊಂದಾಗ ಭುಗಿಲೆದ್ದ ಹಿಂಸೆಗೆ ಪ್ರತಿಕ್ರಿಯಿಸುತ್ತ ಯೂರೋ-ಅಮೆರಿಕನ್ ಜನಾಂಗಕ್ಕೆ ಸೇರಿದ ಅಮೆರಿಕಾದ ಅಧ್ಯಕ್ಷ ಟ್ರಂಪ್ –‘ಡಾಮಿನೇಟ್… ಹಿಡಿತ ಸಾಧಿಸಿ’ ಎಂದು ಕರೆ ಕೊಟ್ಟಾಗ ಅದಕ್ಕೆ ಪೋಲಿಸ್ ಚೀಫ್ Acevedo ದಿಟ್ಟತನದಿಂದ “ಬೇಕಾಗಿರುವುದು ಇಲ್ಲಿ ಡಾಮಿನೇಟ್ ಮಾಡುವುದಲ್ಲ, ಹೃದಯ ಗೆಲ್ಲೋದು. ನಿಮ್ಮ ತಿಳಿಗೇಡಿತನದಿಂದ ಪರಿಸ್ಥಿತಿ ಹಾಳಾಗುವುದು ಬೇಡ. ಅಧ್ಯಕ್ಷ ಟ್ರಂಪ್ ಅವರಿಗೆ ಏನಾದರೂ ರಚನಾತ್ಮಕವಾಗಿ ಹೇಳುವುದಿದ್ದರೆ ಹೇಳಲಿ, ಇಲ್ಲದಿದ್ದರೆ ಬಾಯಿ ಮುಚ್ಚಿಕೊಂಡಿರಲಿ” ಎನ್ನುತ್ತಾರೆ. ಈ ಹಿನ್ನೆಲೆಯನ್ನು ಭಾರತದ ಪರಿಸ್ಥಿತಿಗೆ ಅಳವಡಿಸಿ ನೋಡಿದಾಗ ಎಲ್ಲವೂ ಸ್ವಯಂಸ್ಪಷ್ಟವಾಗುತ್ತದೆ.

ಮತ್ತೊಂದು ಟ್ವೀಟ್

ಈಗ ಮತ್ತೆ ಭಾರತಕ್ಕೆ ಬಂದರೆ, ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯೊಬ್ಬರಿಂದ ಬಹುಮುಖಿ ಮೇಧಾವಿ ಎನ್ನಿಸಿಕೊಂಡ ನಮ್ಮ ಪ್ರಧಾನಿ ಮೋದಿಯವರ ನೋಟು ಅಮಾನ್ಯೀಕರಣ, ಜಿಎಸ್‌ಟಿ ಇತ್ಯಾದಿ ಅಪ್ರಬುದ್ಧ ಹೊಡೆತಗಳಿಂದಾಗಿ ಇಂದು ಭಾರತ ಮುಳುಗುತ್ತಿದೆ. ನಿರುದ್ಯೋಗ ಕಿತ್ತು ತಿನ್ನುತ್ತಿದೆ. ಬಡತನದಿಂದ ಹಸಿವಿನೆಡೆಗೆ ಧಾವಿಸುತ್ತಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಿ ಸರ್ಕಾರ ನೀಸಬೇಕಿದೆ. ಈ ಎಲ್ಲದರಿಂದಾಗಿ ಭುಗಿಲೇಳುವ ಸಾರ್ವಜನಿಕ ಕಿಚ್ಚನ್ನು ನಿಯಂತ್ರಿಸಲು ನ್ಯಾಯಾಂಗ, ಮಾಧ್ಯಮ, ಸಿಬಿಐ, ಆರ್‌ಬಿಐ ಇತ್ಯಾದಿ ಎಲ್ಲಾ ಸ್ವಯತ್ತ ಸಂಸ್ಥೆಗಳನ್ನು ಹೆಚ್ಚೂಕಮ್ಮಿ ಸರ್ಕಾರದ ಅಂಗಸಂಸ್ಥೆಗಳ ಮಟ್ಟಕ್ಕೆ ಸರ್ಜರಿ ಮಾಡಲಾಗಿದೆ. ಇಂದು ಸಾರ್ವಜನಿಕ ಹಿತಾಸಕ್ತಿ ಅನಾಥವಾಗಿ ಬಿದ್ದಿದೆ.

ನೋಡಿದರೆ, ತಬ್ಬಲಿಯಾದ ಈ ಸಾರ್ವಜನಿಕ ಹಿತಾಸಕ್ತಿಗೆ ಪ್ರಶಾಂತ್ ಭೂಷಣ್ ತನ್ನ ವಕೀಲ ವೃತ್ತಿಯನ್ನೇ ಮುಡಿಪಾಗಿಟ್ಟವರು. ಸಾರ್ವಜನಿಕ ಹಿತಾಸಕ್ತಿಯನ್ನು ಪ್ರಭುತ್ವ ಕಸದಂತೆ ಗುಡಿಸಿ ಎಸೆದ ಮೇಲೆ ಅದರ ಮುಂದಿನ ಕೆಲಸ ಸಾರ್ವಜನಿಕ ಹಿತಾಸಕ್ತಿಯ ಧ್ವನಿಯನ್ನು ದಮನ ಮಾಡುವುದು ತಾನೇ? ಗೋಮುಖವ್ಯಾಘ್ರ ಸರ್ವಾಧಿಕಾರತ್ವವು ಪ್ರಶಾಂತ್ ಭೂಷಣ್‌ರ ಟ್ವೀಟ್‌ಗಳನ್ನು ನೆಪ ಮಾಡಿಕೊಂಡು ಸಾರ್ವಜನಿಕ ಹಿತಾಸಕ್ತಿಯ ಧ್ವನಿಯನ್ನು ದಮನಮಾಡಲು ಸರ್ವೋಚ್ಛನ್ಯಾಯಾಲಯವನ್ನೇ ಬಳಸಿಕೊಂಡುಬಿಟ್ಟಿತು ಅನ್ನಿಸುತ್ತದೆ. ಇದನ್ನೆಲ್ಲಾ ಬರೆಯುತ್ತಾ, ಕೋಪ ತಾಪ ವಿಷಾದಗಳನ್ನು ದಾಟಿಕೊಂಡು ಮನಸ್ಸು ತಿಳಿಯಾದಾಗ, ಗಾಂಧಿ-ಅಂಬೇಡ್ಕರ್-ಜೆಪಿ ವರ್ಚಸ್ಸಿನ ನಾಯಕತ್ವದ ಹುಟ್ಟಿಗೆ ಭಾರತಮಾತೆ ಕಾವು ಕೊಡುತ್ತಿರಬೇಕು, ಅದಕ್ಕಾಗೆ ಭೂಷಣ್‌ರ ಮೇಲೆ ಆರೋಪ, ಅದಕ್ಕಾಗೇ ಈ ನೆಲದ ಪ್ರಜ್ಞೆಗಳಾದ ಆನಂದ್ ತೇಲ್ತುಂಬ್ಡೆ ಮತ್ತಿತರರನ್ನು ರಾಜಕೀಯ ಖೈದು ಮಾಡಿ ಬಂಧನದಲ್ಲಿಟ್ಟಿರುವುದು ಇದ್ದಿರಬಹುದೆ ಅನ್ನಿಸಿತು.


ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....