ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಸಿವಾನ್ ಎಸ್ಪಿ ಪುರಾನ್ ಕುಮಾರ್ ಝಾ, “ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಜಿಲ್ಲಾ ಗುಪ್ತಚರ ಘಟಕ (ಡಿಐಯು) ದಲ್ಲಿ ಪೋಸ್ಟ್ ಮಾಡಲಾದ ಕಾನ್ಸ್ಟೆಬಲ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಇಲಾಖಾ ಕ್ರಮಗಳನ್ನು ಸಹ ಪ್ರಾರಂಭಿಸಲಾಗಿದೆ” ಎಂದು ಹೇಳಿದ್ದಾರೆ.
“ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ” ಎಂದು ಅವರು ಹೇಳಿದರು.
ಪ್ರತಿಭಟನೆಯ ಸಮಯದಲ್ಲಿ ಕಾನ್ಸ್ಟೆಬಲ್ ಎಕೆ-47 ರೈಫಲ್ ಅನ್ನು ಯಾವ ಸಂದರ್ಭಗಳಲ್ಲಿ ಬಳಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಎಸ್ಪಿ ಹೇಳಿದರು.
“ಹೋರಾಟದ ಸಮಯದಲ್ಲಿ ಗುಂಡು ಹಾರಿಸದಂತೆ ಪೊಲೀಸ್ ಪಡೆಗೆ ಸ್ಪಷ್ಟ ಸೂಚನೆಗಳಿದ್ದವು” ಎಂದು ಅವರು ಹೇಳಿದರು.
ಜುಲೈ 25 ರಂದು, ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ನೀಟ್ ಪತ್ರಿಕೆ ಸೋರಿಕೆ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ವಿರೋಧಿಸಿ ಕರೆ ನೀಡಿದ್ದ ಬಿಹಾರ ಬಂದ್ ಅನ್ನು ಬೆಂಬಲಿಸಿ ಹಲವಾರು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರೊಂದಿಗೆ ಘರ್ಷಣೆ ನಡೆಸಿದರು.
ಪಾಟ್ನಾ, ಸರನ್, ಸಿವಾನ್, ಔರಂಗಾಬಾದ್, ಭಾಗಲ್ಪುರ್, ಸೀತಾಮರ್ಹಿ, ಪೂರ್ಣಿಯಾ ಮತ್ತು ಭೋಜ್ಪುರಗಳಲ್ಲಿ ಬಂದ್ ಹಿಂಸಾತ್ಮಕವಾಯಿತು. ಆದರೆ, ಸಮಷ್ಟಿಪುರ್, ನವಾಡಾ, ನಳಂದ, ಮಧುಬನಿ ಮತ್ತು ಶೇಖ್ಪುರಗಳಲ್ಲಿ ಪ್ರತಿಭಟನೆಗಳು ನಡೆದವು.
ಪಾಟ್ನಾದ ಡಾಕ್ ಬಂಗಲೋ ಕ್ರಾಸಿಂಗ್ನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಪ್ರತಿಭಟನಾಕಾರರು ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದರು. ನಂತರ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಲಾಯಿತು.
ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಕೂಡ ಈ ವಿಷಯವನ್ನು ಪ್ರಸ್ತಾಪಿಸಿದರು. ಸಿವಾನ್ನಲ್ಲಿ ನಡೆದ ಬಿಹಾರ ಬಂದ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದರು. ಘಟನೆಗೆ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ಅವರು ದೂಷಿಸಿದರು.
“ಸಿವಾನ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಪೊಲೀಸರು ವಿದ್ಯಾರ್ಥಿಗಳ ಮೇಲೆ ಎಕೆ-47 ನಿಂದ ನೇರ ಗುಂಡು ಹಾರಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಏಳು ಕೊಲೆಗಳಲ್ಲಿ ಆರೋಪಿಯಾಗಿರುವ ಅಪರಾಧಿ ಮುಖ್ಯಮಂತ್ರಿಯಾಗಿದ್ದಾಗ, ಪೊಲೀಸರು ಮುಗ್ಧ ವಿದ್ಯಾರ್ಥಿಗಳ ಮೇಲೆ ಈ ರೀತಿಯ ಗುಂಡುಗಳನ್ನು ಹಾರಿಸುತ್ತಾರೆ” ಎಂದು ಯಾದವ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.


