Homeಚಳವಳಿನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು

ಒಂದು ತಿಂಗಳೊಳಗೆ ಮನೆ ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದಿದ್ದಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು...

- Advertisement -
- Advertisement -

ಇದೇ ಜುಲೈ 26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷ ತುಂಬಿತ್ತು. ಈ ಸಂಭ್ರಮಕ್ಕಾಗಿ ಬಿಜೆಪಿಯು ಎರಡು ವರ್ಷದ ಸಾಧನೆಯ ಪುಸ್ತಕ ಹೊರತಂದಿತ್ತು. ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡಿತ್ತು. ಅಲ್ಲದೇ ಎಲ್ಲಾ ವೆಬ್‌ಸೈಟ್‌ಗಳನ್ನು ತಲುಪುವುದಕ್ಕಾಗಿ ಕೋಟ್ಯಾಂತರ ರೂ ಖರ್ಚು ಮಾಡಿ ಗೂಗಲ್ ಜಾಹೀರಾತನ್ನು ಸಹ ನೀಡಿತ್ತು. ಆದರೆ ಈ ಜಾಹೀರಾತು ನೋಡಿದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿದರಹಳ್ಳಿ ಗ್ರಾಮದ ನೆರೆ ಸಂತ್ರಸ್ತರು ಕೆಂಡಾಮಂಡಲವಾಗಿದ್ದಾರೆ. ನೆರೆ ಬಂದು ಮನೆ ಕೊಚ್ಚಿ ಎರಡು ವರ್ಷವಾದರೂ ಯಾವುದೇ ಮನೆ ಪಡೆಯದ ಅವರು ಬೀದಿಯಲ್ಲಿದ್ದರೆ ಸರ್ಕಾರ ಮಾತ್ರ ಅವರಿಗೆ ಮನೆ ಕಟ್ಟಿಸಿಕೊಟ್ಟಿರುವುದಾಗಿ ದೊಡ್ಡ ದೊಡ್ಡ ಜಾಹೀರಾತು ಹಾಕಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

2019ರ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾ ಮಳೆಯಿಂದಾಗಿ ಕಬಿನಿ ನದಿ ಪ್ರವಾಹದಿಂದಾಗಿ ಕಬಿನಿ ಜಲಾಶಯದ ಪಕ್ಕದಲ್ಲೇ ಇರುವ ಸರಗೂರು ತಾಲ್ಲೂಕಿನ ಬಿದರಹಳ್ಳಿ ಸರ್ಕಲ್ ಗ್ರಾಮದ ಮನೆಗಳು ಜಲಾವೃತವಾಗಿದ್ದವು. ಬಹುತೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿದು ಹಾನಿಗೊಳಗಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ. ಅಲ್ಲಿನ ಸಂತ್ರಸ್ತರಿಗೆ ಸ್ವಲ್ಪ ದಿನಗಳ ಮಟ್ಟಿಗೆ ಕಾಳಜಿ ಕೇಂದ್ರದಲ್ಲಿ ವಾಸದ ವ್ಯವಸ್ಥೆ ಮಾಡಲಾಗಿದ್ದರೂ ನಂತರ ಅಲ್ಲಿಂದಲೂ ಯಾವುದೇ ಪರಿಹಾರ ನೀಡದೇ ಖಾಲಿ ಮಾಡಿಸಲಾಯಿತು.

ಅಂದಿನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ, ತಗ್ಗಿನಲ್ಲಿರುವ ನಮ್ಮ ಊರನ್ನು ಸ್ಥಳಾಂತರಿಸಿ, ಮೂರು ತಿಂಗಳ ಒಳಗಾಗಿ 42 ಹೊಸ ಮನೆಗಳ ನಿರ್ಮಾಣ ಮಾಡಿಕೊಡುವುದಾಗಿ ಹೇಳಿ, ಪರ್ಯಾಯ ಜಾಗವನ್ನೂ ಗುರುತಿಸಿ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಮ್ಮ ಬದುಕು ಅತಂತ್ರವಾಗಿದೆ. ಇದುವರೆಗೆ ನಮಗೆ ಯಾವುದೇ ಪರಿಹಾರವಾಗಲಿ, ಪುನರ್ವಸತಿಯಾಗಲಿ ದೊರಕಿಲ್ಲ. ಕಾಡುಪ್ರಾಣಿಗಳ, ಹಾವುಗಳ ಭಯದಿಂದ ಸಂಬಂಧಿಕರ ಮನೆಗಳಲ್ಲಿ ದಿನದೂಡುವಂತಾಗಿದೆ. ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಂಡಿದ್ದೇವೆ. ಮಳೆಯಿಂದ ರಕ್ಷಿಸಿಕೊಳ್ಳಲು ಟರ್ಪಾಲು, ಷೀಟಿನಂತಹ ತಾತ್ಕಾಲಿಕ ವ್ಯವಸ್ಥೆಯನ್ನೂ ನಾವೇ ಮಾಡಿಕೊಂಡಿದ್ದೇವೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಪತ್ರಿಕೆಗಳಲ್ಲಿ ಸರ್ಕಾರ ನೀಡಿರುವ ಜಾಹೀರಾತು

ಕಳೆದ ಎರಡು ವರ್ಷದ ಅವಧಿಯಲ್ಲಿ ನಾವು ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಸರಗೂರಿನ ತಹಶೀಲ್ದಾರರಿಗೆ, ಅಂದಿನ ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದೇವೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿ ಸಮಸ್ಯೆ ಹೇಳಿಕೊಂಡಿದ್ದೇವೆ. ಅಂದಿನ ನೀರಾವರಿ ಸಚಿವರಿಗೂ ಅಹವಾಲು ಸಲ್ಲಿಸಿದ್ದೇವೆ. ಆದರೆ ಇದುವರೆಗೆ ನಮಗೆ ಮನೆ ಸಿಕ್ಕಿಲ್ಲ. ನಮ್ಮ ಪುನರ್ವಸತಿಗೆ ಗುರುತಿಸಿರುವ ಕಪಿಲೇಶ್ವರ ಕಾಲೊನಿಯ ಜಾಗ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದು, ಅದು ಕಂದಾಯ ಇಲಾಖೆಗೆ ಹಸ್ತಾಂತರಗೊಳ್ಳದಿರುವುದರಿಂದ ನಾವು ಕಷ್ಟ ಅನುಭವಿಸಬೇಕಾಗಿದೆ ಎಂದು ಸಂತ್ರಸ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಕಬಿನಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ನಮ್ಮ ಪೂರ್ವಜರು 50 ವರ್ಷಗಳ ಹಿಂದೆ ಇಲ್ಲೇ ನೆಲೆಸಿದರು. ನೀರಾವರಿ ಯೋಜನೆಗೆ ಬೆವರು ಸುರಿಸಿದ ನಮ್ಮ ಕುಟುಂಬಗಳನ್ನು ನೀರಾವರಿ ಇಲಾಖೆಯೇ ಅಕ್ಷರಶ ನಡುನೀರಿನಲ್ಲಿ ಕೈಬಿಟ್ಟಿದೆ. ಕೂಲಿಕಾರರಾದ ನಾವು ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸರಿಯಾದ ಉದ್ಯೋಗವೂ ಲಭಿಸದೆ ಕಂಗಾಲಾಗಿದ್ದೇವೆ.
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳ ಬಗ್ಗೆ ಇದೇ ಜುಲೈ 26ರಂದು ಪ್ರಕಟವಾಗಿದ್ದ ಜಾಹೀರಾತಿನಲ್ಲಿ ನೆರೆ ಸಂತ್ರಸ್ತರ ಪರಿಹಾರ, ಪುನರ್ವಸತಿ ಪೂರ್ಣಗೊಂಡಿರುವ ಊರುಗಳ ಪಟ್ಟಿಯಲ್ಲಿ ಬಿದರಹಳ್ಳಿಯ ಹೆಸರೂ ಇರುವುದನ್ನು ಕಂಡು ನಮಗೆ ದಿಗ್ಭ್ರಮೆಯಾಗಿದೆ” ಎನ್ನುತ್ತಾರೆ ನೆರೆಯಿಂದಾಗಿ ಮನೆ ಕಳೆದುಕೊಂಡ ಚೆಲುವಿ.

ಬಿದರಹಳ್ಳಿ ಪಕ್ಕದ ಕಪಿಲೇಶ್ವರ ಕಾಲೊನಿಯಲ್ಲಿ ಪುನರ್ವಸತಿಯ 42 ಮನೆಗಳ ಕಾಮಗಾರಿಯನ್ನು ತಕ್ಷಣವೇ ಆರಂಭಿಸಿ ಆರು ತಿಂಗಳೊಳಗೆ ಮನೆ ಕಟ್ಟಿಕೊಡಬೇಕು. ನೊಂದ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಸರ್ಕಾರ ಕೂಡಲೇ ಇತ್ತ ಗಮನೆ ಸೆಳೆಯಬೇಕೆಂದು ಆಗ್ರಹಿಸಲಾಗಿದೆ.

ಕೋವಿಡ್ ನಿಯಂತ್ರಣದ ತುರ್ತು ಕೆಲಸಗಳಲ್ಲಿ ಜಿಲ್ಲಾಡಳಿತ ಮುಳುಗಿ ಹೋಗಿದ್ದರಿಂದ ನಾವು ಇಷ್ಟು ಕಾಲ ಸಹನೆಯಿಂದ ಕಾದಿದ್ದೇವೆ. ಇನ್ನಾದರೂ ವಿಳಂಬ ಮಾಡದೆ ತಕ್ಷಣವೇ ನಮಗೆ ಪುನರ್ವಸತಿ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇನ್ನು ಒಂದು ತಿಂಗಳ ಒಳಗೆ ಮನೆಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದಲ್ಲಿ ನೆರೆ ಸಂತ್ರಸ್ತರ ಕುಟುಂಬಗಳ ಸಮೇತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಸ್.ಯು.ಸಿ.ಐ.(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಆಗ್ರಹಿಸಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ಸಂತ್ರಸ್ತರಾದ ಚೆಲುವಿ, ಪದ್ಮ, ಸತ್ಯಮೂರ್ತಿ ಮತ್ತು ಎಸ್‌ಯುಸಿಐನ ಮುಖಂಡರಾದ ಚಂದ್ರಶೇಖರ್ ಮೇಟಿ, ಸುನೀಲ್ ಟಿ ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...