ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.
ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ನ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ. ವಿಶೇಷವೆಂದರೆ ಜಾಖರ್ ಈ ಹಿಂದೆ ಪಂಜಾಬ್ನಲ್ಲಿ ಕಾಂಗ್ರೆಸ್ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಕರ್ನಾಟಕದಲ್ಲೂ ರಜಾfಯ ಬಿಜೆಪಿ ನಾಯಕರ ಬದಲಾವಣೆಯ ಮಾತುಗಳು ಕೇಳಿಬಂದಿದ್ದು, ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯಾಧ್ಯಕ್ಷೆ ಪಟ್ಟ ಒಲಿದು ಬರೆಲಿದೆ ಎಂದು ಹೇಳಲಾಗುತ್ತಿದೆ.
ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿತು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದಲ್ಲಿ ಸಂಘಟನಾ ಪುನರ್ರಚನೆಯ ಬಗ್ಗೆ ಚರ್ಚೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ಸಚಿವರ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು ಸೂಚಿಸಿದ ಬಿಎಸ್ವೈ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಕ್ಕಾಗಿ ಸೂಕ್ತ ವ್ಯಕ್ತಿಯ ಹುಡುಕಾಟವನ್ನು ಬಿಜೆಪಿ ಹೈಕಮಾಂಡ್ ಮುಂದುವರಿಸಿರುವುದರ ನಡುವೆಯೇ ಮಾಜಿ ಸಿಎಂ ಯಡಿಯೂರಪ್ಪನವರು, ಶೋಭಾ ಕರಂದ್ಲಾಜೆಗೆ ರಾಜ್ಯ ಬಿಜೆಪಿ ಚುಕ್ಕಾಣಿ ಕೊಡುವಂತೆ ಸಲಹೆ ನೀಡಿರುವುದು ಬೆಳಕಿಗೆ ಬಂದಿದೆ. ಅತ್ತ, ಬಿಜೆಪಿ ಹೈಕಮಾಂಡ್ ಸಹ ಯಡಿಯೂರಪ್ಪನವರ ಸಲಹೆಯನ್ನು ತೆಗೆದುಹಾಕದ ಪರಿಸ್ಥಿತಿಯಲ್ಲಿದ್ದು, ಅವರ ಸಲಹೆಯನ್ನೇ ಒಪ್ಪಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗಿದೆ.
ಹೈಕಮಾಂಡ್ ಜೊತೆಗೆ ಮಾತನಾಡಿರುವ ಯಡಿಯೂರಪ್ಪನವರು, ‘ರಾಜ್ಯ ಬಿಜೆಪಿ ಅಧ್ಯಕ್ಷರ ಗಾದಿಗೆ ಶೋಭಾ ಕರಂದ್ಲಾಜೆ ಅವರೇ ಸೂಕ್ತ ವ್ಯಕ್ತಿ. ಮಹಿಳೆಯರಿಗೆ ನಮ್ಮ ಪಕ್ಷದಲ್ಲಿ ಒಂದು ಮಹತ್ವದ ಪಟ್ಟ ಕೊಟ್ಟಹಾಗೆ ಆಗುತ್ತದೆ. ಜೊತೆಗೆ, ಶೋಭಾ ಅವರು ಹಿಂದೆ ರಾಜ್ಯದಲ್ಲಿ ಸಚಿವರಾಗಿ, ಕೇಂದ್ರದಲ್ಲಿ ಸಚಿವರಾಗಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಹಾಗಾಗಿ, ಅವರಿಗೆ ರಾಜ್ಯಾಧ್ಯಕ್ಷರ ಪಟ್ಟವನ್ನು ಕೊಡಬೇಕು’ ಎಂದು ಮನವಿ ಮಾಡಿದ್ದಾರೆನ್ನಲಾಗಿದೆ.
ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ…