ಮುಂದಿನ ಮಾರ್ಚ್ ತಿಂಗಳಿನಲ್ಲಿ ಬಿಜೆಪಿ ಪಕ್ಷವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಒಕ್ಕೂಟ ಸರ್ಕಾರದ ಸಚಿವ ನಾರಾಯಣ ರಾಣೆ ಶುಕ್ರವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ನಾಯಕರಾದ ದೇವೇಂದ್ರ ಫಡ್ನವೀಸ್ ಮತ್ತು ಚಂದ್ರಕಾಂತ್ ಪಾಟೀಲ್ ಹಾಗೂ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಪ್ರಫುಲ್ ಪಟೇಲ್ ಅವರು ದೆಹಲಿಯಲ್ಲಿ ಇದ್ದ ದಿನವೇ ಸಚಿವ ನಾರಾಯಣ ರಾಣೆ ಅವರ ಈ ಹೇಳಿಕೆ ಹೊರ ಬಿದ್ದಿದ್ದು ರಾಜಕೀಯ ಅಂಗಳದಲ್ಲಿ ಭಾರಿ ಊಹಾಪೋಹಗಳಿಗೆ ಕಾರಣವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಫಡ್ನವೀಸ್ ಅವರು ದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಶನಿವಾರಕ್ಕೆ ಎರಡು ವರ್ಷಗಳನ್ನು ಪೂರೈಸುತ್ತದೆ. ಈ ಹಿಂದಿನಿಂದಲೂ ಬಿಜೆಪಿಯ ಮಿತ್ರ ಪಕ್ಷವಾಗಿದ್ದ ಶಿವಸೇನೆ ಕಳೆದ ಬಾರಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಮತ್ತು ಎನ್ಸಿಪಿಯೊಂದಿಗೆ ಸೇರಿ ‘ಮಹಾ ವಿಕಾಸ್ ಅಘಾಡಿ’ ಎಂಬ ಹೆಸರಿನ ಮೈತ್ರಿ ಸರ್ಕಾವನ್ನು ರಚಿಸಿತ್ತು.
ಜೈಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, ಮಾರ್ಚ್ನಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ. ಆದರೆ ಅವರು ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಸರ್ಕಾರಗಳನ್ನು ಉರುಳಿಸುವುದು ಮತ್ತು ರಚಿಸುವುದು ಗೌಪ್ಯವಾಗಿ ಮಾಡಲಾಗುತ್ತದೆ. ಅದನ್ನು ಸಾರ್ವಜನಿಕವಾಗಿ ಚರ್ಚಿಸಲಾಗುವುದಿಲ್ಲ ಎಂದು ನಾರಾಯಣ ರಾಣೆ ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ
“ರಾಜ್ಯದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇದು ನಿಜವಾಗಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ನಾರಾಯಣ ರಾಣೆ ಹೇಳಿದ್ದಾರೆ.
ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಸರ್ಕಾರವು ಪೂರ್ಣಾವಧಿಯನ್ನು ಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ.
“ಬಿಜೆಪಿ ದೊಡ್ಡ ದೊಡ್ಡ ಭವಿಷ್ಯ ಹೇಳುತ್ತದೆ. ಆದರೆ ಅವು ನಿಜವಾಗುವುದಿಲ್ಲ, ಬಿಜೆಪಿಯನ್ನುಯಾರೂ ನಂಬುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಎನ್ಸಿಪಿ ಮತ್ತು ಬಿಜೆಪಿ ಪಕ್ಷಗಳ ಮೂಲಗಳು ಒಂದೇ ಸಮಯದಲ್ಲಿ ತಮ್ಮ ನಾಯಕರು ದೆಹಲಿಯಲ್ಲಿ ಇರುವುದರ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳನ್ನು ಅಲ್ಲಗೆಳೆದಿದ್ದಾರೆ.
ರಾಜ್ಯ ಬಿಜೆಪಿ ನಾಯಕರಾದ ದೇವೇಂದ್ರ ಫಡ್ನವೀಸ್ ಮತ್ತು ಚಂದ್ರಕಾಂತ್ ಪಾಟೀಲ್ ಅವರು ಕೇಂದ್ರ ನಾಯಕತ್ವದೊಂದಿಗೆ “ಸಾಂಸ್ಥಿಕ ವಿಷಯಗಳ” ಬಗ್ಗೆ ಚರ್ಚಿಸಲು ದೆಹಲಿಯಲ್ಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕುರಿತ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಶರದ್ ಪವಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಅವರ ವೇಳಾಪಟ್ಟಿಯನ್ನು ಒಂದು ವಾರದ ಹಿಂದೆಯೇ ಯೋಜಿಸಲಾಗಿತ್ತು ಎಂದು ಎನ್ಸಿಪಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕರಾಳ ಕೃಷಿ ಕಾಯ್ದೆಗಳ ವಿರುದ್ಧ ರೈತ ಹೋರಾಟಕ್ಕೆ ಐತಿಹಾಸಿಕ ಗೆಲುವು ಸವೆಸಿದ ಹಾದಿಯ ಕ್ರೊನಾಲಜಿ ಹೀಗಿತ್ತು