ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನಲ್ಲಿ ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದ ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆಗೊಂಡ ಬಳಿಕ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದಕ್ಕೆ ಪಕ್ಷದಲ್ಲೇ ಆಕ್ಷೇಪ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ವಾಗ್ದಾಳಿ ನಡೆಸುವುದು ಬಿಟ್ಟು ಜನರ ಪರವಾಗಿ ಕೆಲಸ ಮಾಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಅವರ ಕಷ್ಟಕ್ಕೆ ನೆರವಾಗೋಣ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯನ್ನು ಬಿಜೆಪಿ ಮುಖಂಡ ರಾಜೀವ್ ಬ್ಯಾನರ್ಜಿ ಕೋರಿದ್ದಾರೆ. ಇದಕ್ಕೆ ರಾಜೀವ್ ಬ್ಯಾನರ್ಜಿ ಹೇಳಿಕೆ ಸರಿಯಾಗಿದೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.
ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿದ್ದ ರಾಜೀವ್ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ಪಕ್ಷವನ್ನು ತೊರೆದು ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿದ್ದರು. ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಜಯ ಗಳಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೊಲ್ಕತ್ತಾ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿ, ನಂದಿಗ್ರಾಮ ಪ್ರಕರಣದಿಂದ ಹಿಂದೆ ಸರಿದ ಕೌಶಿಕ್ ಚಂದಾ
“ಜನಾದೇಶ ಪಡೆದ ಮುಖ್ಯಮಂತ್ರಿ ವಿರುದ್ಧ ನ್ಯಾಯಯುತವಲ್ಲದ ವಾಗ್ದಾಳಿ ಮುಂದುವರಿಸದಂತೆ ನಾನು ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸುತ್ತೇನೆ. ಬಂಗಾಳದ ಜನರು ಅವರ ಪಕ್ಷಕ್ಕೆ 213 ಸ್ಥಾನಗಳನ್ನು ನೀಡಿದ್ದಾರೆ. ಅವರ ಮೇಲೆ ವಾಗ್ದಾಳಿ ನಡೆಸುವ ಬದಲು, ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ ಬೆಲೆಗಳ ಏರಿಕೆಯಿಂದ ಜನರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಪ್ರಯತ್ನಿಸಿ” ಎಂದು ರಾಜೀವ್ ಬ್ಯಾನರ್ಜಿ ಹೇಳಿದ್ದಾರೆ.
ರಾಜೀವ್ ಬ್ಯಾನರ್ಜಿ ಹೇಳೀಕೆಯನ್ನು ಸ್ವಾಗತಿಸಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, “ರಾಜೀವ್ ಬ್ಯಾನರ್ಜಿ ಹೇಳಿದ್ದು ಸರಿ. ರಾಜ್ಯದ ಆಳ್ವಿಕೆ ನಡೆಸಲು ಜನಾದೇಶ ಪಡೆದಿರುವ ನಮ್ಮ ನಾಯಕರನ್ನು ಸುವೇಂದು ಅಧಿಕಾರಿ ಅನ್ಯಾಯವಾಗಿ ಗುರಿಯಾಗಿಸಿಕೊಂಡಿದ್ದಾರೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೆ ಏರುತ್ತಿದ್ದರೂ ಈ ಬಗ್ಗೆ ಬಿಜೆಪಿ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ” ಎಂದಿದ್ದಾರೆ.
ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸುವೇಂದು ಅಧಿಕಾರಿಯ ಗೆಲುವು ಪ್ರಶ್ನಿಸಿ ಕೊಲ್ಕತ್ತಾ ಹೈಕೋರ್ಟಗೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಲಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ, ಬಿಜೆಪಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ ಎಂದು ಟಿಎಂಸಿ ನಾಯಕರು ಆರೋಪಿಸಿದ್ದರು. ಹೀಗಾಗಿ ಅವರನ್ನು ಬದಲಾಯಿಸುವಂತೆ ಮಮತಾ ಬ್ಯಾನಜಿ ಅರ್ಜಿ ಸಲ್ಲಿಸಿದ್ದರು. ಬುಧವಾರ ನ್ಯಾಯಾಧೀಶ ಕೌಶಿಕ್ ಚಂದಾ, ಮಮತಾ ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?