ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್ ದೇವಗನ್ಗೆ ಕನ್ನಡ ಕಲಾವಿದರ ಖಡಕ್ ಪ್ರತಿಕ್ರಿಯೆ
“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು
“ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು, ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ. ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.
“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ. ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.



ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.