Homeಮುಖಪುಟಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ, ಸೋತಾಗ ಕುಸಿದು ಗೋಳಾಡುತ್ತದೆ: ಜೈರಾಮ್ ರಮೇಶ್ ವ್ಯಂಗ್ಯ

ಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ, ಸೋತಾಗ ಕುಸಿದು ಗೋಳಾಡುತ್ತದೆ: ಜೈರಾಮ್ ರಮೇಶ್ ವ್ಯಂಗ್ಯ

- Advertisement -
- Advertisement -

ಕರ್ನಾಟಕದಲ್ಲಿ ಚುನಾವಣೆ ನಡೆದು ಸರ್ಕಾರ ರಚನೆಯಾಗಿ ಒಂದು ತಿಂಗಳಿಗೂ ಅಧಿಕ ದಿನಗಳು ಕಳೆದರೂ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಶಾಸಕಾಂಗ ಪಕ್ಷದ ನಾಯಕನನ್ನು ಘೋಷಣೆ ಮಾಡಿಲ್ಲ. ಇಂದು (ಸೋಮವಾರ) ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದೇ ವಿಧಾನಮಂಡಲ ಅಧಿವೇಶನ ಆರಂಭವಾಯಿತು. ಈ ವಿಚಾರವಾಗಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿ ಬಿಜೆಪಿಯನ್ನು ಗೇಲಿ ಮಾಡಿದ್ದಾರೆ.

ಜೈರಾಮ್ ರಮೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ”ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಂಡಿದೆ. 1952ರ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಪ್ರಮುಖ ವಿರೋಧ ಪಕ್ಷವಿಲ್ಲದೆ ಅಧಿವೇಶನ ಆರಂಭಗೊಂಡಿದೆ. ಕರ್ನಾಟಕದಲ್ಲಿ ಬಿಜೆಪಿಯು ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಘೋಷಿಸಲಿದೆ. ಈ ಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ. ಸೋತಾಗ ಕುಸಿದು ಗೋಳಾಡುತ್ತದೆ” ಎಂದು ವ್ಯಂಗ್ಯ ಮಾಡಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ”ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಟ್ವೀಟ್ ಮಾಡಿದೆ.

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವು ಇಂದು ಆರಂಭಗೊಂಡಿದ್ದು, 10 ದಿನಗಳವರೆಗೆ ನಡೆಯಲಿದೆ. ಕಲಾಪವು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

‘ಕರ್ನಾಟಕ ಮಾದರಿ’ ಆಡಳಿತ ಪರಿಚಯಿಸುತ್ತೇವೆ: ರಾಜ್ಯಪಾಲ

ವಿಧಾನಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ”ಜನಕಲ್ಯಾಣ ಮತ್ತು ಆರ್ಥಿಕ ಸ್ಥಿತಿ ಎರಡನ್ನೂ ಸಮತೂಕದಲ್ಲಿ ನಿಭಾಯಿಸಿ ಕರ್ನಾಟಕದ್ದೇ ಆದ ಹೊಸ ಆಡಳಿತ ಮಾದರಿಯೊಂದನ್ನು ನನ್ನ ಸರ್ಕಾರ ದೇಶಕ್ಕೆ ಪರಿಚಯಿಸಲಿದೆ” ಎಂದು ಹೇಳಿದ್ದಾರೆ.

”ಶಾಂತಿಯುತವಾದ, ಸಮೃದ್ಧವಾದ, ಸೌಹಾರ್ದಯುತವಾದ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಲು ಬದ್ಧರಾಗಿದ್ದೇವೆ. ಯಾರನ್ನೂ ಹೊರಗಿಡದೆ ಎಲ್ಲರನ್ನೂ ಒಳಗೊಂಡು ‘ಇವ ನಮ್ಮವ’ ಎಂದು ಕೂಡಿ ಬಾಳುವ ನಮ್ಮ ಹಿರಿಯರ ಕನಸನ್ನು ನನಸು ಮಾಡಲು ನನ್ನ ಸರ್ಕಾರ ಬದ್ಧವಾಗಿದೆ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read