ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಸೋಲಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ವಿಪಕ್ಷಗಳ ನಾಯಕರು ಇಂದು ಮತ್ತು ನಾಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ” ಎಂದರು.
ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರಿಸಿದ ಅವರು, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ ಎಂದು ಟೀಕಿಸಿದು.
ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಬಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾದ್ಯವಿಲ್ಲ ಎಂದರು.
ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರು.
ಇದನ್ನೂ ಓದಿ: ಕುಮಾರಸ್ವಾಮಿಗೆ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಡುವ ಮನಸ್ಸಿದೆಯೇ?: ಡಿಕೆಶಿ ಪ್ರಶ್ನೆ