Homeಮುಖಪುಟ'ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ' : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

- Advertisement -
- Advertisement -

‘ಅಂತಾರಾಷ್ಟ್ರೀಯ ಸಂತಾಲ್’ ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನ’ಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಮಾ.7) ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಉತ್ತರ ಬಂಗಾಳದಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಮೊದಲು ಅನುಮತಿ ನಿರಾಕರಿಸಿತ್ತು ಎಂದು ರಾಷ್ಟ್ರಪತಿ ಆರೋಪಿಸಿದ್ದರು.

ಕೊನೆಯ ಕ್ಷಣದಲ್ಲಿ ಸಮ್ಮೇಳನವನ್ನು ಡಾರ್ಜಿಲಿಂಗ್ ಜಿಲ್ಲೆಯ ಬಿಧಾನನಗರದಿಂದ ಸಿಲಿಗುರಿ ಹೊರವಲಯದ ಗೋಸೈನ್‌ಪುರಕ್ಕೆ ವರ್ಗಾಯಿಸಲಾಗಿದೆ ಎಂದಿದ್ದರು. ಅಲ್ಲದೆ, ರಾಷ್ಟ್ರಪತಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದಾಗ ಸಿಎಂ ಮಮತಾ ಬ್ಯಾನರ್ಜಿ ಅಥವಾ ಯಾವುದೇ ಹಿರಿಯ ಸಚಿವರು ಅವರನ್ನು ಸ್ವಾಗತಿಸಲು ಬರದಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಬೆಟ್ಟು ಮಾಡಿದ್ದರು.

ಬಂಗಾಳದಲ್ಲಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಸರಿಯಾಗಿ ನಡೆಯುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದರು.

ದಾಖಲೆ ಸಹಿತ ಮಮತಾ ತಿರುಗೇಟು

ರಾಷ್ಟ್ರಪತಿಯ ಗಂಭೀರ ಆರೋಪಗಳಿಗೆ ಸಿಎಂ ಮಮತಾ ಬ್ಯಾನರ್ಜಿ ದಾಖಲೆ ಸಹಿತ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ರಾಷ್ಟ್ರಪತಿಯ ಕಾರ್ಯಾಲಯ ಅನುಮೋದಿಸಿದ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಚಿವರು ಹಾಜರಿರಬೇಕೆಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ ಮತ್ತು ಈ ಕಾರ್ಯಕ್ರಮವನ್ನು ಖಾಸಗಿ ಸಂಸ್ಥೆಯೊಂದು ಆಯೋಜಿಸಿತ್ತು ಎಂದು ಹೇಳಿದ್ದಾರೆ. ಅಲ್ಲದೆ, ಬಿಧಾನನಗರವು ಕಾರ್ಯಕ್ರಮದ ಆರಂಭಿಕ ಸ್ಥಳವಾಗಿತ್ತು ಎಂಬ ಬಗ್ಗೆ ಯಾವುದೇ ದಾಖಲೆಗಳಲ್ಲಿ ಉಲ್ಲೇಖವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮವು ಮೊದಲಿನಿಂದಲೂ ಗೊಸೈನ್‌ಪುರದಲ್ಲಿಯೇ ನಡೆಯಬೇಕಿತ್ತು ಎಂದು ಅವರು ಹೇಳಿದ್ದಾರೆ. ರಾಷ್ಟ್ರಪತಿ ಭವನಕ್ಕೆ ನೀಡಲಾದ ಮೂಲ ದಾಖಲೆಗಳಲ್ಲಿಯೂ ಇದೇ ಸ್ಥಳದ ಉಲ್ಲೇಖವಿದೆಯೇ ಹೊರತು ಬಿಧಾನನಗರದ್ದಲ್ಲ ಎಂದು ಅವರು ವಾದಿಸಿದ್ದಾರೆ.

ಸಿಲಿಗುರಿ ಜಿಲ್ಲಾಡಳಿತವು ಕಾರ್ಯಕ್ರಮದ ಸ್ಥಳದಲ್ಲಿ ವ್ಯವಸ್ಥೆಗಳ ಕೊರತೆಯಿರುವ ಬಗ್ಗೆ ರಾಷ್ಟ್ರಪತಿಯ ಕಾರ್ಯಾಲಯಕ್ಕೆ ಮುಂಚಿತವಾಗಿಯೇ ಮಾಹಿತಿ ನೀಡಿತ್ತು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರು ಹಂಚಿಕೊಂಡ ದಾಖಲೆಗಳ ಪ್ರಕಾರ, ಕಾರ್ಯಕ್ರಮ ಗೊಸೈನ್‌ಪುರದಲ್ಲಿಯೇ ನಡೆಯಬೇಕಿತ್ತು. ರಾಷ್ಟ್ರಪತಿ ಭೇಟಿಗೆ ಎರಡು ದಿನಗಳ ಮೊದಲು ತೆಗೆಯಲಾದ ಫೋಟೋಗಳನ್ನು ಸಿಎಂ ಬಿಡುಗಡೆ ಮಾಡಿದ್ದು, ಅವುಗಳಲ್ಲಿ ಸಾರ್ವಜನಿಕ ಸಮಾರಂಭಕ್ಕೆ ಅಗತ್ಯವಿರುವ ಯಾವುದೇ ಸೌಲಭ್ಯಗಳಿಲ್ಲದ ಬಂಜರು ಮೈದಾನವನ್ನು ಕಾಣಬಹುದು.

ಖಾಸಗಿ ಸಂಸ್ಥೆಯಾದ ಅಂತಾರಾಷ್ಟ್ರೀಯ ಸಂತಾಲ್ ಕೌನ್ಸಿಲ್, ಗೌರವಾನ್ವಿತ ರಾಷ್ಟ್ರಪತಿಯವರನ್ನು ಸಿಲಿಗುರಿಯಲ್ಲಿ ಆಯೋಜಿಸಿದ್ದ 9ನೇ ಅಂತಾರಾಷ್ಟ್ರೀಯ ಆದಿವಾಸಿ ಸಂತಾಲ್ ಸಮ್ಮೇಳನಕ್ಕೆ ಆಹ್ವಾನಿಸಿತ್ತು. ಮುಂಗಡ ಭದ್ರತಾ ಸಂಪರ್ಕದ ನಂತರ, ಸಂಘಟಕರು ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಜಿಲ್ಲಾಡಳಿತವು ರಾಷ್ಟ್ರಪತಿಯ ಕಾರ್ಯಾಲಯಕ್ಕೆ ಲಿಖಿತವಾಗಿ ಮಾಹಿತಿ ನೀಡಿತ್ತು; ಈ ವಿಷಯವನ್ನು ದೂರವಾಣಿ ಮೂಲಕವೂ ತಿಳಿಸಲಾಗಿತ್ತು. ರಾಷ್ಟ್ರಪತಿಯ ಸಚಿವಾಲಯದ ಮುಂಗಡ ತಂಡವು ದಿನಾಂಕ 05.03.26 ರಂದು ಭೇಟಿ ನೀಡಿದಾಗಲೂ ವ್ಯವಸ್ಥೆಗಳ ಕೊರತೆಯ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿತ್ತು, ಆದರೂ ಕಾರ್ಯಕ್ರಮವು ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರಿಯಿತು” ಎಂದು ಸಿಎಂ ಮಮತಾ ಬ್ಯಾನರ್ಜಿ ಎಕ್ಸ್‌ ಹಾಗೂ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರಪತಿಯವರ ತಂಡವು ಮೊದಲೇ ಅನುಮೋದಿಸಿದ ಪಟ್ಟಿಯಂತೆಯೇ ಸಿಲಿಗುರಿ ಮೇಯರ್, ಡಾರ್ಜಿಲಿಂಗ್ ಜಿಲ್ಲಾಧಿಕಾರಿ ಮತ್ತು ಸಿಲಿಗುರಿ ಪೊಲೀಸ್ ಕಮಿಷನರ್ ಅವರು ರಾಷ್ಟ್ರಪತಿ ಮುರ್ಮು ಅವರನ್ನು ಸ್ವಾಗತಿಸಿ, ಬೀಳ್ಕೊಟ್ಟಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರಪತಿಯ ಸಚಿವಾಲಯ ಹಂಚಿಕೊಂಡಿದ್ದ ಅನುಮೋದಿತ ಪಟ್ಟಿಯ ಪ್ರಕಾರವೇ ಗೌರವಾನ್ವಿತ ರಾಷ್ಟ್ರಪತಿಯವರನ್ನು ಸಿಲಿಗುರಿ ಮಹಾನಗರ ಪಾಲಿಕೆಯ ಮೇಯರ್, ಡಾರ್ಜಿಲಿಂಗ್ ಜಿಲ್ಲಾಧಿಕಾರಿ ಮತ್ತು ಸಿಲಿಗುರಿ ಪೊಲೀಸ್ ಕಮಿಷನರ್ ಅವರು ಸ್ವಾಗತಿಸಿ, ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿದ್ದಾರೆ. ಈ ಪಟ್ಟಿಯಲ್ಲಾಗಲಿ ಅಥವಾ ವೇದಿಕೆಯ ಕಾರ್ಯಕ್ರಮದಲ್ಲಾಗಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯವರ ಹೆಸರು ಇರಲಿಲ್ಲ. ಆದ್ದರಿಂದ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಶಿಷ್ಟಾಚಾರದ ಉಲ್ಲಂಘನೆಯಾಗಿಲ್ಲ ಎಂದು ಮಮತಾ ಬ್ಯಾನರ್ಜಿ ತಮ್ಮ ಪೋಸ್ಟ್‌ನಲ್ಲಿ ವಿವರಿಸಿದ್ದಾರೆ.

ಬಿಜೆಪಿಯು ‘ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತನ್ನ ಪಕ್ಷದ ಕಾರ್ಯಸೂಚಿಗಾಗಿ ಅಗೌರವಗೊಳಿಸುತ್ತಿದೆ ಮತ್ತು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದು, ‘ಇದು ಅತ್ಯಂತ ದುರದೃಷ್ಟಕರ’ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಮಾಡಿರುವ ಆರೋಪಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪಶ್ಚಿ ಬಂಗಾಳ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. “ಬಂಗಾಳ ಸರ್ಕಾರ ರಾಷ್ಟ್ರಪತಿಗೆ ಅವಮಾನ ಮಾಡುತ್ತಿರುವುದು ಅತ್ಯಂತ ನಾಚಿಕೆಗೇಡು, ಇದು ಹಿಂದೆಂದೂ ನಡೆಯದ ಘಟನೆ ಎಂದು ಹೇಳಿದ್ದರು.

ಪ್ರಧಾನಿಯವರು ಹೀಗೆ ಹೇಳಿದ ಕೂಡಲೇ ವಿವಾದ ದೊಡ್ಡದಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ರಾಷ್ಟ್ರಪತಿ ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ, ಅವರು ಬಿಜೆಪಿಯ ಪರವಾಗಿ (ಬಿಜೆಪಿ ಹೇಳಿದಂತೆ) ನಡೆದುಕೊಳ್ಳುತ್ತಿದ್ದಾರೆ” ಎಂದು ನೇರವಾಗಿ ಆರೋಪ ಮಾಡಿದ್ದಾರೆ.

ರಾಷ್ಟ್ರಪತಿಯನ್ನು ಬಳಸಿಕೊಂಡು ಬಿಜೆಪಿಯ ಸಲಹೆಯಂತೆ ರಾಜಕೀಯ ಮಾಡಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೋಲ್ಕತ್ತಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದನ್ನು ಹೇಳಲು ನನಗೆ ನಾಚಿಕೆಯಾಗುತ್ತಿದೆ. ಗೌರವಾನ್ವಿತ ರಾಷ್ಟ್ರಪತಿಗಳ ಮೇಲೆ ನಮಗೆ ಅಪಾರ ಗೌರವವಿದೆ. ಆದರೆ, ಅವರನ್ನು ಇಲ್ಲಿಗೆ ಕೇವಲ ರಾಜಕೀಯ ಮಾಡಲು ಕಳುಹಿಸಲಾಗಿದೆ ಎಂದು ದೂರಿದ್ದಾರೆ.

“ಕ್ಷಮಿಸಿ ಮೇಡಂ, ನಿಮ್ಮ ಬಗ್ಗೆ ನನಗೆ ಬಹಳ ಗೌರವವಿದೆ. ಆದರೆ ನೀವು ಈಗ ಸಂಪೂರ್ಣವಾಗಿ ಬಿಜೆಪಿಯ ನೀತಿಗಳು ಮತ್ತು ಅವರ ಸೂಚನೆಗಳಂತೆ ನಡೆಯುತ್ತಿದ್ದೀರಿ” ಎಂದು ಮಮತಾ ನೇರವಾಗಿ ರಾಷ್ಟ್ರಪತಿಗೆ ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ರಾಷ್ಟ್ರಪತಿ ಪಶ್ಚಿಮ ಬಂಗಾಳಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದನ್ನು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ನೀವು ವರ್ಷಕ್ಕೊಮ್ಮೆ ಬಂದರೆ ನಾನು ನಿಮ್ಮನ್ನು ಸ್ವಾಗತಿಸಬಹುದು. ಆದರೆ, ಚುನಾವಣೆ ಇರುವಾಗ ನೀವು ಪದೇ ಪದೇ ಬರುತ್ತಿದ್ದರೆ, ನಮಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸಲು ಹೇಗೆ ಸಾಧ್ಯ? ನಾವು ಯಾವಾಗಲೂ ನಿಮ್ಮನ್ನೇ ಹಿಂಬಾಲಿಸಿಕೊಂಡಿರಬೇಕೇ?” ಎಂದು ಮಮತಾ ಪ್ರಶ್ನಿಸಿದ್ದಾರೆ.

“ಗಾಳಿಪಟ ಹಾರಿಸುವವನು ದಾರ ಹಿಡಿದು ಓಡುವಂತೆ ನಾವು ಸದಾ ನಿಮ್ಮ ಹಿಂದೆ ಓಡಬೇಕೇ? ಗಾಳಿಪಟವನ್ನು ವರ್ಷಕ್ಕೆ ಒಮ್ಮೆ ವಿಶ್ವಕರ್ಮ ಪೂಜೆಯ ಸಮಯದಲ್ಲಿ ಹಾರಿಸಲಾಗುತ್ತದೆ (ಆದರೆ ನೀವು ಯಾವಾಗಲೂ ಬರುತ್ತಿದ್ದೀರಿ)” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...