ದೇವದುರ್ಗ ತಾಲೂಕಿನ ರೇಕಲಮರಡಿಯಲ್ಲಿ ಕಲುಷಿತ ನೀರು ಕುಡಿದು ಬಾಲಕ ಮೃತಪಟ್ಟು, 30 ಜನರು ಅಸ್ವಸ್ಥಗೊಂಡ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಆಗ್ರಹಿಸಿದೆ.
ರಾಜ್ಯ ಸಮಿತಿ ಸದಸ್ಯ ನಾಗರಾಜ ಪೂಜಾರ್, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಜಂಟಿ ಹೇಳಿಕೆ ನೀಡಿದ್ದು, “ಕಳೆದ ನಾಲ್ಕಾರು ವರ್ಷಗಳಿಂದ ಕುಡಿವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸದೇ ಇರುವುದು ಹಾಗೂ ಪೈಪ್ಲೈನ್ನಲ್ಲಿ ಚರಂಡಿ ನೀರು ಮಿಶ್ರಣವಾಗಿ ಪೂರೈಕೆಯಾಗಿದ್ದೆ ಈ ದುರಂತಕ್ಕೆ ಕಾರಣವಾಗಿದೆ. ಈ ದುರ್ಘಟನೆಗೆ ತಾಲೂಕು ಹಾಗೂ ಜಿಲ್ಲಾಡಳಿತದ ಆಡಳಿತ ವೈಫಲ್ಯವೇ ಕಾರಣವಾಗಿದ್ದು, ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದ ತಾಲೂಕು ಆಗಿರುವ ದೇವದುರ್ಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯೇ ಹರಿದುಹೋಗಿದ್ದರೂ ಸಮರ್ಪಕ ಕುಡಿವ ನೀರು ಪೂರೈಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳಿಂದ ಕುಡಿವ ನೀರಿಗೆ ತತ್ವಾರವಿದ್ದು, ಶುದ್ಧ ನೀರು ಪೂರೈಕೆಯಾಗುತ್ತಿಲ್ಲ. ನೀರಿನಲ್ಲಿ ಆರ್ಸೆನಿಕ್ ಅಂಶವಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಗ್ರಾಮದಲ್ಲಿ 50 ವರ್ಷ ವಯಸ್ಸಾದವರು ಮೊಣಕಾಲು, ಕೀಲು ಹಾಗೂ ಮೈಕೈಬೇನೆ ಸೇರಿದಂತೆ ಇನ್ನಿತರೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ಗ್ರಾಮೀಣ ಪ್ರದೇಶದ ಜನರಿಗೆ ತಾಲೂಕು, ಜಿಲ್ಲಾಡಳಿತಗಳು ಕನಿಷ್ಠ ಶುದ್ಧ ಕುಡಿವ ನೀರು ಪೂರೈಸಲಾರದಷ್ಟು ಅಸಮರ್ಥವಾಗಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದಿದ್ದಾರೆ.
ರೇಕಲಮರಡಿ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಗ್ರಾಮದಲ್ಲಿ ಶುದ್ಧ ಕುಡಿವ ನೀರಿನ ಘಟಕವನ್ನು ಪುನಶ್ಚೇತನಗೊಳಿಸಿ ಸಮರ್ಪಕ ಪೂರೈಕೆ ಮಾಡಬೇಕು, ಇಂತಹ ಘಟನೆಗಳು ಮರುಕಳಿಸದಂತೆ ನಿಗಾವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ…