‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಮತ್ತೆರಡು ಪ್ರಕರಣ ದಾಖಲಾಗಿರುವುದಾಗಿ ‘ದಿ ಫೈಲ್’ ವರದಿ ಮಾಡಿದೆ.
ಮತ್ತಿಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಸಂಬಂಧ ದೂರು ದಾಖಲಿಸಿದ್ದಾರೆ. ಅಕ್ಕಮಹಾದೇವಿ, ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 12 ಮತ್ತು 14 ವಯಸ್ಸಿನ ವಿದ್ಯಾರ್ಥಿನಿಯರು ಪೋಷಕರೊಂದಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.
ಮುರುಘಾ ಮಠಾಧೀಶರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 21ರವರೆಗೆ ವಿಸ್ತರಣೆಯಾಗಿತ್ತು. ಇದರ ನಡುವೆ ಮತ್ತೆರಡು ಹೆಣ್ಣುಮಕ್ಕಳು ದೂರು ನೀಡಲು ಮುಂದಾಗಿರುವುದು ಪ್ರಕರಣದ ವ್ಯಾಪ್ತಿ ದೊಡ್ಡದಾಗಿದೆ.
12 ಮತ್ತು 14 ವರ್ಷದ ಬಾಲಕಿಯರಿಬ್ಬರು ತಮ್ಮ ಪೋಷಕರೊಂದಿಗೆ ಮೈಸೂರಿನ ಒಡನಾಡಿ ಸ್ಟ್ಯಾನ್ಲಿ ಅವರನ್ನು ಸಂಪರ್ಕಿಸಿದ್ದರು. ಅವರ ಸಲಹೆ ಮೇರೆಗೆ ಮಕ್ಕಳು ಮತ್ತು ಪೋಷಕರು ಮೈಸೂರಿನ ಸಿಡಬ್ಲ್ಯೂಸಿಯ ಮುಂದೆ ಗುರುವಾರ (ಅ.13)ರಂದು ಸಂಜೆ ಹಾಜರಾಗಿದ್ದಾರೆ ಎಂದು ಮೂಲಗಳನ್ನು ‘ದಿ ಫೈಲ್’ ಉಲ್ಲೇಖಿಸಿದೆ.
ಸಿಡಬ್ಲ್ಯೂಸಿಯು ಮಕ್ಕಳಿಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದೆ. ಆ ನಂತರ ಸಂತ್ರಸ್ತ ಬಾಲಕಿಯರ ಹೇಳಿಕೆಗಳನ್ನು ಪಡೆದು ದಾಖಲಿಸಿ ತಕ್ಷಣವೇ ಮುರುಘಾ ಶರಣರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಸಿಡಬ್ಲ್ಯೂಸಿಯು ಆದೇಶ ಹೊರಡಿಸಿದೆ ಎನ್ನಲಾಗಿದೆ.
ಕಳೆದ ಆಗಸ್ಟ್ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಗತಿ ಹೊರಬಿದ್ದಿತ್ತು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು.
ಒಡನಾಡಿ ಸಂಸ್ಥೆಯು ಮಕ್ಕಳನ್ನು ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.
ಇದನ್ನೂ ಓದಿರಿ: ಮುರುಘಾ ಮಠದ ಶಿವಮೂರ್ತಿ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯದ ದೂರು | ಕ್ರಮ ಕೈಗೊಳ್ಳದ ಜಿಲ್ಲಾಡಳಿತ
ಆರಂಭದಲ್ಲಿ ಪ್ರಕಣವನ್ನು ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಯಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್ಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಯಿತು. ನಂತರ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿತ್ತು.
“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿನಿಯರು ಹೇಳಿದ್ದರು.
“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ತಿಳಿಸಿದ್ದರು.