ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಪ್ರಕರಣದ ರದ್ದು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ, ಸ್ಪೀಕರ್ ಅವರ ಅನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸಲಾಗಿದೆ ಎಂಬ ತಾಂತ್ರಿಕ ಕಾರಣದಿಂದ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.
ಮಾಡಾಳ್ ವಿರೂಪಾಕ್ಷಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ, ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ ಮತ್ತು ತನಿಖೆಗೆ ಸ್ಪೀಕರ್ ಅನುಮತಿ ಪಡೆದಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು.
ಏನಿದು ಪ್ರಕರಣ?
ಕಳೆದ ಮಾ.2ರಂದು ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಚೀಫ್ ಅಕೌಂಟಿಂಗ್ ಆಫೀಸರ್ ಮಾಡಾಳ್ ಪ್ರಶಾಂತ್ ಅವರು 40 ಲಕ್ಷ ರೂ. ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಈ ವೇಳೆ ಪ್ರಶಾಂತ್ ಅವರಿಗೆ ಹಣ ಕೊಡಲು ಬಂದ ವ್ಯಕ್ತಿಗಳು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದ ಮಾಡಾಳ್ ವಿರುಪಾಕ್ಷಪ್ಪ ಅವರಿಗೆ ಸಂಬಂಧಪಟ್ಟ ಹಣವಾಗಿದೆ ಎಂದು ಹೇಳಿದ್ದರು.
ಬಳಿಕ ಲೋಕಾಯುಕ್ತ ಅಧಿಕಾರಿಗಳು ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ನಿವಾಸದ ಮೇಲೆ ದಾಳಿ ಮಾಡಿತ್ತು. ಬೆಂಗಳೂರಿನ ಮನೆ, ಕಚೇರಿ, ಚನ್ನೇಶಪುರ ಗ್ರಾಮದ ಮನೆಯಲ್ಲಿ ಕಾರ್ಯಚರಣೆ ನಡೆಸಿತ್ತು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಿಗದೆ ಮಾಡಾಳ್ ವಿರುಪಾಕ್ಷಪ್ಪ ಮೊದಲು ತಲೆಮೆರಸಿಕೊಂಡಿದ್ದರು. ಬಳಿಕ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಸೇರಿ ಅವರ ಪುತ್ರ ಹಾಗೂ ಇತರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ನಂತರ ಜಾಮೀನಿನ ಮೇಲೆ ಇತ್ತೀಚೆಗೆ ಮಾಡಾಳ್ ವಿರೂಪಾಕ್ಷಪ್ಪ ಅವರು ಬಿಡುಗಡೆಯಾಗಿದ್ದರು.
ಶಾಸಕ ಮಾಡಾಳ್ ವಿರುಪಾಕ್ಷಪ್ಪಅವರ ಈ ಪ್ರಕರಣ ಕಳೆದ ಬಾರಿ ಅಧಿಕಾರದಲ್ಲಿದ್ದ ಬಿಜೆಪಿಗೆ ಭಾರೀ ಮುಜುಗರವನ್ನು ಉಂಟುಮಾಡಿತ್ತು. ಇದರಿಂದಾಗಿ ಕಳೆದ ಬಾರಿ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು.
ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ