Homeಕರ್ನಾಟಕಸಿ.ಟಿ.ರವಿಯ ಮಾಂಸ ಭಕ್ಷಣೆಯೂ ಭಟ್ಕಳ ಬಿಜೆಪಿಯ ಬಣ ಬಡಿದಾಟವೂ!

ಸಿ.ಟಿ.ರವಿಯ ಮಾಂಸ ಭಕ್ಷಣೆಯೂ ಭಟ್ಕಳ ಬಿಜೆಪಿಯ ಬಣ ಬಡಿದಾಟವೂ!

- Advertisement -
- Advertisement -

ತಳ ಸಮುದಾಯದ ಆಹಾರ ಪದ್ಧತಿ ಪ್ರಶ್ನಿಸುವ, ಗೇಲಿ ಮಾಡುವ ಧರ್ಮಕಾರಣದ ಈ ಕಾಲಘಟ್ಟದಲ್ಲಿ ಮಾಂಸಾಹಾರ ಉಂಡು ದೇಗುಲ ಪ್ರವೇಶಿಸುವ ’ಅಪಚಾರ’ ವಿವಾದ, ಹಿಂದುತ್ವ ಓಟ್ ಬ್ಯಾಂಕ್ ರಾಜಕಾರಣದ ಒಂದು ವರಸೆ ಎಂಬುದರಲ್ಲಿ ಈಗ ಯಾವ ಸಂಶಯವೂ ಉಳಿದಿಲ್ಲ. ಕ್ಷುಲ್ಲಕ ಸಂಗತಿಗಳನ್ನು ವಾಟ್ಸ್‌ಪ್-ಯೂಟ್ಯೂಬ್ ಯೂನಿವರ್ಸಿಟಿಯ ಮೂಲಕ ಹಬ್ಬಿಸಿ, ಅದನ್ನು ರಾತ್ರೋರಾತ್ರಿ ಮತ ಧ್ರುವೀಕರಣಕ್ಕೆ ದಾಳವಾಗಿಸುವ ಕುತ್ಸಿತ ಮುತ್ಸದ್ಧಿಗಳು ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಚುರುಕಾಗಿದ್ದವು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನು ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಧರ್ಮದ್ರೋಹ ಮಾಡಿದ್ದಾರೆಂದು ಹುಯಿಲೆಬ್ಬಿಸಿದ್ದರು.

ಇದಿಲ್ಲಿಗೇ ನಿಲ್ಲಲಿಲ್ಲ; ಕೆಲ ತಿಂಗಳ ಹಿಂದೆ ಸಿದ್ದರಾಮಯ್ಯ ಕೊಡಗಿನ ದೇಗುಲವೊಂದಕ್ಕೆ ಮಾಂಸ ಉಂಡು ಪ್ರವೇಶಿಸಿದ್ದಾರೆ ಎಂದು ಕೇಸರಿ ಪಡೆ ಬೊಬ್ಬೆಹೊಡೆದಿತ್ತು. ವಿಪರ್ಯಾಸವೆಂದರೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಬಾಬಾ ಬುಡನ್‌ಗಿರಿ-ದತ್ತ ಪೀಠ ವಿವಾದದ ಹಿರೇಮಣಿ, ಕಟ್ಟರ್ ಹಿಂದುತ್ವ ಪ್ರತಿಪಾದಕ ಸಿ.ಟಿ.ರವಿ ಇಂತಹದ್ದೇ ’ಮಾಂಸಾಹಾರ ಮತ್ತು ದೇವರು’ ಪ್ರಹಸನದಲ್ಲಿ ಸಿಲುಕಿ ’ಮಿಂಚು’ತ್ತಿರುವುದು; ಜೇಡ ತಾನೆ ಹೆಣೆದ ಬಲೆಯಲ್ಲಿ ಸಿಕ್ಕಿಬಿದ್ದು ಒದ್ದಾಡಿದಂತಿದೆ ಸಿ.ಟಿ.ರವಿ ಪೀಕಲಾಟ ಎಂದು ಬಿಜೆಪಿಯ ಶೂದ್ರ ಸಮೂಹ ಆಡಿಕೊಳ್ಳುವಂತಾಗಿದೆ.

ಕಾರವಾರದಲ್ಲಿ ಕಳೆದ ರವಿವಾರ (19.2.2023) ಜರುಗಿದ ಶಿವಾಜಿ ಜಯಂತಿಗೆ ಹೋಗಿದ್ದ ಸಿ.ಟಿ.ರವಿ ವಾಪಸ್ ಬರುವಾಗ ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ್ ಮನೆಗೆ ಕರಾವಳಿಯ ಸ್ವಾದಿಷ್ಠ ಬಾಡೂಟ-ಮೀನೂ ಸವಿಯಲೆಂದು ಹೋಗಿದ್ದರು. ಅಲ್ಲಿ ಅವರಿಗಾಗಿ ವಿಶೇಷ ಆಸಕ್ತಿಯಿಂದ ಇಸ್ವೋಣ (ಎಂಜಲ್) ಮತ್ತಿತರ ’ಪ್ರತಿಷ್ಠಿತ’ ಮೀನು ಹಾಗು ಅರಬ್ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಚಿಕನ್ ಆಲ್‌ಫಾಮ್ ಖಾದ್ಯ ತರಿಸಲಾಗಿತ್ತು. ಭಟ್ಕಳದಲ್ಲಿ ಪ್ರಸಿದ್ಧವಾಗಿರುವ ನವಾಯತ ಮುಸ್ಲಿಮರ “ಆಲ್ ಖಲೀಜ್” ಹೋಟೆಲ್ ಆಲ್‌ಫಾಮ್ ಚಿಕನ್‌ಗೆ ಹೆಸರುವಾಸಿ; ಅಲ್ಲಿಂದಲೇ ಅದನ್ನು ತರಿಸಲಾಗಿತ್ತು ಎಂಬುದು ಈಗ ಎಲ್ಲರಿಗೂ ತಿಳಿದ ಸಂಗತಿ. ಸಂಘಿ ಸರದಾರರ ಕೆಂಗಣ್ಣಿಗೆ ಗುರಿಯಾಗಿರುವ ಶಾಸಕ ಸುನೀಲ್ ನಾಯ್ಕ್ ಬಿಜೆಪಿಯ ಆಯಕಟ್ಟಿನ ಮುಖಂಡ ರವಿಯವರನ್ನು ಸಂಪ್ರೀತಗೊಳಿಸಲು ಭೂರಿ ಭೋಜನ ವ್ಯವಸ್ಥೆ ಮಾಡಿದ್ದರು; ತನ್ನ ಅಧ್ವರ್ಯದಲ್ಲಿ ಜೀರ್ಣೋದ್ಧಾರವಾದ ಭಟ್ಕಳದ ’ಮತೀಯ ಸೂಕ್ಷ್ಮ’ ಧಾರ್ಮಿಕ ಸ್ಥಳ ನಾಗಬನಕ್ಕೆ ಕರೆದೊಯ್ದು ಚುನಾವಣೆ ಹೊತ್ತಲ್ಲಿ ಮೈಲೇಜು ಪಡೆಯುವ ಯೋಜನೆ-ಯೋಚನೆ ಶಾಸಕ ಸುನೀಲ್ ನಾಯ್ಕರದಾಗಿತ್ತೆಂಬುದು ಭಟ್ಕಳದಲ್ಲಿ ’ಟಾಕ್ ಆಫ್ ದಿ ತಾಲೂಕ್’ ಆಗಿದೆ.

ರವಿ ಶಾಸಕ ಸುನೀಲ್ ಮನೆ ತಲುಪಿದಾಗ ಊಟದ ಸಮಯ ಮೀರಿ ಮಧ್ಯಾಹ್ನ ನಾಲ್ಕು ಗಂಟೆ ಸಮೀಪಿಸಿತ್ತು. ತರತರದ ಮತ್ಸ್ಯ-ಮಾಂಸದ ಭಕ್ಷ-ಭೋಜನ ಸವಿದ ನಂತರ ರವಿ ಒಡ್ಡೋಲಗ ಸೀದ ನಾಗಬನ ಮತ್ತು ಕರಿಬಂಟ ಹನುಮ ದೇವಾಲಯಕ್ಕೆ ತೆರಳಿತು. ನಾಗಬನಕ್ಕೆ ಸುತ್ತಲೂ ಕಬ್ಬಿಣದ ಗ್ರಿಲ್ ಅಳವಡಿಸಲಾಗಿದೆ. ಪೂಜೆ-ಪುರಸ್ಕಾರದ ಹೊತ್ತಲ್ಲಷ್ಟೆ ಇದರ ಬಾಗಿಲು ತೆರೆಯುತ್ತದೆ. ಬಾಗಿಲಲ್ಲಿ ಕೈಮುಗಿದು ನಿಂತ ರವಿಯವರಿಗೆ ಅಲ್ಲೆ ಹಾರ-ತುರಾಯಿಯ ಸನ್ಮಾನವೂ ಆಗಿದೆ.

ಹತ್ತಿರದಲ್ಲೆ ಇರುವ ಕರಿಬಂಟ ಹನುಮ ದೇವಾಲಯಕ್ಕೂ ರವಿ ಹೋಗಿದ್ದಾರೆ. ಆವರಣ ಪ್ರವೇಶಿಸಿ ಕೈಜೋಡಿಸಿ ಕಣ್ಮುಚ್ಚಿ ಭಕ್ತಿಯಿಂದ ಒಂದು ಕ್ಷಣ ನಿಂತಿದ್ದಾರೆ. ರವಿ ಬಾಡೂಟ-ಮೀನೂಟ ಮಾಡಿದ್ದು, ನಾಗಬನದ ಮುಂದೆ ಸನ್ಮಾನ ಸ್ವೀಕರಿಸಿದ್ದು ಮತ್ತು ಕರಿಬಂಟ ದೇವಸ್ಥಾನದ ಒಳಗೆ ಸುತ್ತಾಡಿದ್ದೆಲ್ಲ ಬಿಜೆಪಿಯ ಕಾರ್ಯಕರ್ತರ ಮೊಬೈಲ್‌ಗಳಲ್ಲಿ ಸೆರೆಯಾಗಿದೆ; ಆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಾರ್ತಾ ವಾಹಿನಿಗಳಲ್ಲಿ ಬಿತ್ತರವಾಗಿದೆ. ಸಿದ್ದರಾಮಯ್ಯ ಮೀನು ಭಕ್ಷ್ಯ ತಿಂದು ಗುಡಿ-ಗುಂಡಾರ ಸುತ್ತುವ ’ಕಾಫಿರ್’ ಎಂದು ಸುಳ್ಳಿನ ಮೇಲೆ ನಿಂತ ಧರ್ಮಸೂಕ್ಷ್ಮದ ವಿವಾದ ಸೃಷ್ಟಿಸುವ ಕೆಲಸಕ್ಕೆ ಕೈಹಾಕಿದ್ದ ಕೇಸರಿ-ಕಮಲ ಪಡೆಯ ಮುಂಚೂಣಿ ನಾಯಕ ಸಿ.ಟಿ.ರವಿಯವರೆ ಧರ್ಮ ಸಂಕಟಕ್ಕೆ ಸಿಲುಕಿದ್ದು ದೊಡ್ಡ ಸುದ್ದಿ-ಸದ್ದಾಯಿತು!

ಈ ’ಮಾಂಸ ಮತ್ತು ದೇವರು’ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ಕೊಟ್ಟ ರವಿ, ತಾನು ನಾಗಬನಕ್ಕೆ ಹೋಗೇ ಇಲ್ಲ; ರೋಡಲ್ಲೆ ನಿಂತು ಕೈಮುಗಿದು ಬಂದಿದ್ದೇನೆ… ಮಾಂಸ ತಿನ್ನುವ ಜಾತಿಯಲ್ಲಿ ಹುಟ್ಟಿದ್ದೇನೆ… ತಿಂದಿದ್ದು ನಿಜ… ಹಾಗಂತ ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೇನೆ ಏನೀಗ ಎಂದು ಕೇಳಲು ನಾನೇನೂ ಸಿದ್ದರಾಮಯ್ಯ ಅಲ್ಲ… ದತ್ತ ವ್ರತ ಮಾಡುವ ಧರ್ಮನಿಷ್ಠ ನಾನು…” ಎಂದು ಮಾಮೂಲಿಯಾಗಿ ಅಸಂಬದ್ಧ ವರಸೆ ಪ್ರದರ್ಶಿಸಿದ್ದಾರೆ. ರವಿ ಹೇಳಿದ್ದು ಹಸಿ ಸುಳ್ಳು; ಶಾಸಕ ಸುನೀಲ್ ನಾಯ್ಕ್ ಮನೆಯ ಊಟದ ಕೋಣೆಯಿಂದ ನಾಗಬನದ ಕಬ್ಬಿಣದ ಗ್ರಿಲ್ ಬಾಗಿಲಿನ ತನಕ, ಅಲ್ಲಿಂದ ಕರಿಬಂಟ ದೇವಸ್ಥಾನಕ್ಕೆ ತೆರಳಿ, ಗರ್ಭಗುಡಿ ಮುಂದೆ ಕೈ ಮುಗಿದು ಹೊರಡುವವರೆಗಿನ ರವಿ ತಿರುಗಾಟವನ್ನು ಚಿತ್ರೀಕರಿಸಿ ಬಿಜೆಪಿಗರೆ ಹೊರಬಿಟ್ಟ ದೃಶ್ಯಾವಳಿಗಳು ಅಂದಿನ ಘಟನಾವಳಿಗಳನ್ನು ನಿಸ್ಸಂಶಯವಾಗಿ ಸಾಬೀತುಪಡಿಸುತ್ತಿವೆ; ಸಿದ್ದರಾಮಯ್ಯ ಪ್ರಕರಣದಲ್ಲಿ ಹಿಂದೆ ಆಡಿದ ಮಾತುಗಳಿಗೂ ಈಗ ತಾವು ಮಾಡಿದ ಕೆಲಸಕ್ಕೂ ಇರುವ ವೈರುಧ್ಯವನ್ನು ಹೇಗೋ ಸಮರ್ಥಿಸಿಕೊಳ್ಳುವ ಭರದಲ್ಲಿ ರವಿ ಮಾಂಸಾಹಾರ ತಿಂದು ತಾನು ದೇಗುಲಕ್ಕೆ ಹೋದರೆ ’ನಿವೇದನೆ’, ಸಿದ್ದರಾಮಯ್ಯ ಮೀನು ತಿಂದು ಗುಡಿ ಪ್ರವೇಶಿಸಿದರೆ ಅದು “ದಾಷ್ಟ್ರ್ಯ ” ಎಂದು ’ಮಾಂಸ ಮತ್ತು ದೇವರು’ ಪ್ರಹಸನವನ್ನು ವಿಂಗಡಿಸುವುದು ಹಾಸ್ಯಾಸ್ಪದ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

ಧರ್ಮಾಧಾರಿತ ಲಾಭ ತರಬಲ್ಲುದೆಂದು ತೀರಾ ಸಣ್ಣ ಘಟನೆಯನ್ನೂ ಬಿಡದೆ ದೊಡ್ಡ ಗಂಟಲಲ್ಲಿ ಮಾತಾಡುವ ಸಿ.ಟಿ.ರವಿಯಂಥ ಬಡಾ ಲೀಡರ್‌ರನ್ನೇ ಧರ್ಮ ಸಂಕಟಕ್ಕೆ ಸಿಲುಕಿಸಿ ಸತಾಯಿಸಿ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದ ಭಟ್ಕಳ ಶಾಸಕರ ಮನೆಯ ಔತಣಕೂಟದ ಕತೆಯ ಜಾಡುಹಿಡಿದು ಹೊರಟರೆ ಸ್ಥಳೀಯ ಬಿಜೆಪಿಯೊಳಗಿನ ಬಣ ಬಡಿದಾಟ ಗೋಚರಿಸುತ್ತದೆ. ಹಿಂದುತ್ವದ ಚಟುವಟಿಕೆಯಿಂದ ಸದಾ ಸದ್ದುಮಾಡುವ ಸಿ.ಟಿ.ರವಿಯವರನ್ನು ನಾಗಬನ-ಕರಿಬಂಟ ದೇವಸ್ಥಾನಕ್ಕೆ ಕರೆದೊಯ್ದು ಪ್ರಚಾರ ಪಡೆದರೆ ಹಿಂದು ಮತ ಕ್ರೋಢೀಕರಣಕ್ಕೆ ಅನುಕೂಲ ಆಗುತ್ತದೆಂಬ ಎಣಿಕೆ ಶಾಸಕ ಸುನೀಲ್ ನಾಯ್ಕ್‌ರದ್ದಾಗಿದ್ದರೆ, ಸ್ವಪಕ್ಷದ ಹಿತ ಶತ್ರುಗಳು ಎಮ್ಮೆಲ್ಲೆ ಕಾಲೆಳೆಯಲು ಸನ್ನದ್ಧರಾಗಿದ್ದರೆನ್ನಲಾಗಿದೆ.

ಈ ನಾಗಬನದ ಹಿನ್ನೆಲೆ ಗೊತ್ತಾಗದಿದ್ದರೆ ರವಿಯವರ ಮಾಂಸಾಹಾರ ಮತ್ತು ದೇಗುಲ ಪುರಾಣ ಸರಿಯಾಗಿ ಅರ್ಥವಾಗುವುದಿಲ್ಲ. ಕಳೆದ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಸಂಘಪರಿವಾರ ಗಂಭೀರವಾಗಿ ರಣತಂತ್ರ ಹೆಣೆಯುತ್ತಿದ್ದಾಗ ಭಟ್ಕಳ ನಗರದ ಹಳೆ ಬಸ್ ನಿಲ್ದಾಣದ ಪಕ್ಕದ ರಾಜಾಂಗಣ ನಾಗಬನ ಆವರಣದಲ್ಲಿ ದನದ ಮಾಂಸದ ಪ್ಲಾಸ್ಟಿಕ್ ಚೀಲವೊಂದು ರಾತ್ರಿ ಬೆಳಗಾಗುವುದರಲ್ಲಿ ಬಿದ್ದಿತ್ತು. ಗೋಮಾಂಸವನ್ನು ನಾಗಬನದಲ್ಲಿ ಎಸೆಯಲಾಗಿದೆ ಎಂಬ ಸಮಾಚಾರ ನವಾಯತ ಮುಸ್ಲಿಮರು ಜಾಸ್ತಿಯಿರುವ ಭಟ್ಕಳದಲ್ಲಿ ಹಬ್ಬುತ್ತಿದ್ದಂತೆಯೆ ಕೋಮು ಸಂಘರ್ಷ ಶುರುವಾಗಿತ್ತು. ಹಿಂದೂಗಳ ನಾಯಕತ್ವವನ್ನು ಶಾಸಕಗಿರಿ ಕನಸು ಕಾಣುತ್ತಿದ್ದ ಸುನೀಲ್ ನಾಯ್ಕ್ ವಹಿಸಿಕೊಂಡಿದ್ದರು.

ಸುನೀಲ್ ನಾಯ್ಕ್

ಈ ಗೋಮಾಂಸ ನಾಗಬನಕ್ಕೆ ಎಸೆಯಲ್ಪಟ್ಟ ಪ್ರಕರಣದ ರೂವಾರಿ ಸುನೀಲ್ ನಾಯ್ಕ್ ಎಂಬುದು ಬಹಿರಂಗವಾಗಲು ತಡವೇನೂ ಆಗಲಿಲ್ಲ. ಅಂದಿನ ಭಟ್ಕಳ ಎಎಸ್‌ಪಿ ಹಾಗು ಮಹಿಳಾ ಪಿಎಸ್‌ಐ ನಡುವಿನ ಕಾದಾಟ ಇದನ್ನು ಸಾಬೀತುಪಡಿಸಿತ್ತು. ಹಿಂದುತ್ವದ ಪ್ರಯೋಗ ಶಾಲೆ ಎನ್ನಲಾಗುತ್ತಿರುವ ದಕ್ಷಿಣ ಕನ್ನಡ ಮೂಲದ ಎಎಸ್‌ಪಿ ಸಂಘ ಪರಿವಾರದ ದಾಂಧಲೆಕೋರರಿಗೆ ನೆರವಾಗುತ್ತಿದ್ದಾರೆಂಬ ಆರೋಪವಿತ್ತು. ಅಂದಿನ ಪಿಎಸ್‌ಐ ರೇವತಿ ಮೇಲಾಧಿಕಾಗರಿಳಿಗೆ ಎಎಸ್‌ಪಿ ವಿರುದ್ಧ ದೂರಿನಲ್ಲಿ “ಸುನೀಲ್ ನಾಯ್ಕ್ ಮತಿಭ್ರಮಿತನೊಬ್ಬನ ಕೈಗೆ ದನದ ಮಾಂಸ ತುಂಬಿದ ಚೀಲ ಕೊಟ್ಟು ನಾಗಬನದಲ್ಲಿ ಎಸೆಯುವಂತೆ ಹೇಳಿಕಳಿಸಿದ್ದರು” ಎಂದು ವಿವರಿಸಿದ್ದರು! ಶಾಸಕನಾಗಿ ಆಯ್ಕೆಯಾದ ನಂತರ ಸುನೀಲ್ ನಾಯ್ಕ್ ಕುಮಟಾದಲ್ಲಿರುವ ಆರೆಸ್ಸೆಸ್‌ನ ಸರ್ವೋಚ್ಚ ನಾಯಕರೊಬ್ಬರ ಕಾಲಿಗೆರಗಿ ಆಶೀರ್ವಾದ ಪಡೆದಾಗ “ನೀನು ನಾಗಬನದ ವಿವಾದ ಭುಗಿಲೆಬ್ಬಿಸಿದಾಗಲೆ ನಿನಗೆ ಟಿಕೆಟ್ ಕೊಡುವ ನಿರ್ಧಾರವನ್ನು ಸಂಘ ಮಾಡಿತ್ತು” ಎಂದು ಹೇಳಿದ್ದರೆಂಬ ಮಾತು ಇವತ್ತಿಗೂ ಸಂಘಿ ವಲಯದಲ್ಲಿ ಚಾಲ್ತಿಯಲ್ಲಿದೆ.

ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಸುನೀಲ್ ನಾಯ್ಕ್ ಈ ನಾಗಬನವನ್ನು ಈಚೆಗೆ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿಪಡಿಸಿದ್ದಾರೆ. ಸಿ.ಟಿ.ರವಿಯನ್ನು ನಾಗಬನಕ್ಕೆ ಕರೆದೊಯ್ದು ಸನ್ಮಾನ ಮಾಡಲು ಸುನೀಲ್ ನಾಯ್ಕ್ ಯೋಚಿಸುತ್ತಿರುವುದು ಗೊತ್ತಾಗುತ್ತಿದ್ದಂತೆ ವಿರೋಧಿ ಪಡೆ ಎಚ್ಚೆತ್ತಿದೆ. ಕಳೆದ ಇಲೆಕ್ಷನ್ ಸಂದರ್ಭದಲ್ಲಿ ಶಾಸಕ ನಾಯ್ಕರ ಕಟ್ಟಾ ಬೆಂಬಲಿಗರಾಗಿದ್ದ ಕೆಲವರು ಈಗ ಕಡು ಶತ್ರುಗಳಾಗಿದ್ದಾರೆ. ವಾಟ್ಸ್‌ಪ್, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣ ಬಳಸಿ ಅಂದಿನ ಶಾಸಕ ಮಂಕಾಳ ವೈದ್ಯರ ಹೆಡೆಮುರಿ ಕಟ್ಟಿ ಸುನೀಲ್ ನಾಯ್ಕರನ್ನು ಪ್ರಮೋಟ್ ಮಾಡಲು ಹವಣಿಸಿದ್ದ ತಂಡವೀಗ ಬೂಮರಾಂಗ್ ಆಗಿದೆ! ಹಿಂದೆ ಮಾಜಿ ಶಾಸಕ ವೈದ್ಯ “ನವಾಯತ ಮುಸ್ಲಿಮರಿಗೆ ಕಸಾಯಿಖಾನೆ ಮತ್ತು ಮಾಂಸದ ಮಾರುಕಟ್ಟೆಗೆ ಪರವಾನಗಿ ಕೊಡಿಸಿದ್ದಾರೆ; ನವಾಯತರ ಸರ್ವೋಚ್ಚ ಧಾರ್ಮಿಕ ಸಂಸ್ಥೆ ’ತಂಜೀಮ್’ಗೆ  ಸಾವಿರಾರು ಕೋಟಿ ರೂ. ಅನುದಾನ ಕೊಡಿಸಿದ್ದಾರೆ” ಎಂದೆಲ್ಲ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡಿ ಹಿಂದೂ ಮತದಾರರ ದಿಕ್ಕುತಪ್ಪಿಸಿದ್ದ ತಂಡವೀಗ ಶಾಸಕ ಸುನೀಲ್ ನಾಯ್ಕ್ ವಿರುದ್ದ ತಿರುಗಿಬಿದ್ದಿದೆ.

ಕಳೆದ ಚುನಾವಣೆಯ ಹೊತ್ತಲ್ಲಿ ಮಾಜಿ ಶಾಸಕ ಮಂಕಾಳ್ ವೈದ್ಯರ ಮೇಲೆ ಪ್ರಯೋಗಿಸಿದ ಅಸ್ತ್ರಗಳನ್ನೇ ಈಗ ಸುನೀಲ್ ನಾಯ್ಕರತ್ತ ಎಸೆಯಲಾಗುತ್ತಿದೆ. ಕಳೆದ ನಾಲ್ಕೂವರೆ ವರ್ಷದಿಂದ ಧರ್ಮ ಮತ್ತು ಅಭಿವೃದ್ಧಿ ಹೆಸರಲ್ಲಿ ಭಟ್ಕಳ ಕ್ಷೇತ್ರದಲ್ಲಿ ಆಗುತ್ತಿರುವ ಭ್ರಷ್ಟಾಚಾರ-ಅವ್ಯವಹಾರ-ಅವಾಂತರಗಳನ್ನು ವಾಟ್ಸಪ್ ಗ್ರೂಪ್ ಮತ್ತು ಯೂಟ್ಯೂಬ್ ವಾಹಿನಿಗಳಲ್ಲಿ ಕಳೆದ ಒಂದೆರಡು ತಿಂಗಳಿಂದ ಬಿಚ್ಚಿಡಲಾಗುತ್ತಿದೆ; ಶಾಸಕ ಸುನೀಲ್ ನಾಯ್ಕರನ್ನು ಹೆಜ್ಜೆಹೆಜ್ಜೆಗೆ ಗೇಲಿ ಮಾಡಲಾಗುತ್ತಿದೆ. ಸುನೀಲ್ ನಾಯ್ಕ್ ಬಿಟ್ಟು ಬೇರೆ ಯಾರಿಗಾದರೂ ಕೇಸರಿ ಟಿಕೆಟ್ ಕೊಡಿ ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಲಾಗುತ್ತಿದೆ. ಸುನೀಲ್ ಬಿಜೆಪಿ ಅಭ್ಯರ್ಥಿಯಾದರೆ ಸೋಲಿಸುವ ಹಠ ತೊಟ್ಟಿದೆ. ಸ್ಥಳೀಯ ಬಿಜೆಪಿಯ ಒಳಸುಳಿಯ ಅರಿವಿಲ್ಲದೆ ಶಾಸಕ ಸುನೀಲ್ ನಾಯ್ಕರ ಮನೆಗೆ ಅರಬ್ ದೇಶಗಳ ವಿಶಿಷ್ಟ ರುಚಿಯ ಕೋಳಿ ಮಾಂಸದ ಅಡುಗೆ ಉಣ್ಣಲು ಬಂದಿದ್ದ ಸಿ.ಟಿ.ರವಿ ತಮ್ಮದೇ ವ್ಯಾಖ್ಯಾನದ ’ಧರ್ಮದ್ರೋಹ’ದ ವಿವಾದಕ್ಕೆ ಸಿಲುಕಿದರು; ಶತ್ರು ಪಡೆ ಸುನೀಲ್ ನಾಯ್ಕರ ಮುಖಭಂಗಕ್ಕೆ ಹಾಕಿದ ಸ್ಕೆಚ್‌ನಿಂದ ಸಿ.ಟಿ.ರವಿಯ ಅಸಲಿ ಅವತಾರ ಅನಾವರಣವಾಯಿತು ಎಂದೀಗ ವ್ಯಾಖ್ಯಾನಿಸಲಾಗುತ್ತಿದೆ.

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...