Homeಮುಖಪುಟಗಜ ಪ್ರಸವ ಮುಗಿದರೂ, ಇನ್ನೂ ಮುಗಿಯದ ಖಾತೆ ಖ್ಯಾತೆ..!

ಗಜ ಪ್ರಸವ ಮುಗಿದರೂ, ಇನ್ನೂ ಮುಗಿಯದ ಖಾತೆ ಖ್ಯಾತೆ..!

- Advertisement -
- Advertisement -

ಒಂದೆಡೆ ಸೋತು ಸಚಿವ ಸ್ಥಾನ ಮಿಸ್ ಮಾಡಿಕೊಂಡಿರುವವರ ಒತ್ತಡ, ಮತ್ತೊಂದೆಡೆ ಸಚಿವಗಿರಿ ಸಿಕ್ಕರೂ ಇಷ್ಟದ ಖಾತೆ ಸಿಗದೆ ಕ್ಯಾತೆ ತೆಗೆಯುತ್ತಿರುವವರ ಕಿರಿಕಿರಿ, ಸಾಲದ್ದಕ್ಕೆ `ಎಲ್ಲಿಂದಲೋ ಬಂದವರು’ ತಮ್ಮ ಪಕ್ಷದ ಸರ್ಕಾರದಲ್ಲಿ ಸಚಿವರಾಗೋದನ್ನು ಕಂಡು ಮರುಗುತ್ತಿರುವ ಮಂತ್ರಿಗಿರಿ ವಂಚಿತ ಮೂಲ ಬಿಜೆಪಿಗರ ಗೋಳಾಟ, ಹೈಕಮಾಂಡ್‍ನ ನಿರಂತರ ನಿರ್ಲಕ್ಷ್ಯ ಇವೆಲ್ಲವೂ ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ  ಸರ್ಕಾರಕ್ಕೆ ಸರಿಯಾಗೇ ಕಾಟಕೊಡಲು ಸಜ್ಜಾಗಿವೆ…..

ಕಳೆದ ಎರಡು ತಿಂಗಳಿನಿಂದ ಸಾಕ್ಷಾತ್ ಗಜ ಪ್ರಸವವೇ ಏನೋ ಎಂಬಂತೆ ಭಾಸವಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತ್ತು.

ಕೊನೆಗೆ ಉಮೇಶ್ ಕತ್ತಿ , ರೇಣುಕಾಚಾರ್ಯನಂತಹ ಸ್ವಪಕ್ಷೀಯ ಶಾಸಕರ ಅಸಮಾಧಾನದ ನಡುವೆಯೂ ಯಶಸ್ವಿಯಾಗಿ ಸಂಪುಟ ವಿಸ್ತರಿಸಿದ್ದ ಬಿಎಸ್‍ವೈ 10 ಜನ ವಲಸಿಗರಿಗೆ ಸಚಿವ ಸ್ಥಾನ ನೀಡುವ ಮೂಲಕ ಗಜ ಪ್ರಸವಕ್ಕೆ ಸ್ವಾಭಾವಿಕ ಹೆರಿಗೆಯನ್ನೇ ಮಾಡಿಸಿದ್ದರು. ಆದರೆ, ಸ್ವಾಭಾವಿಕ ಹೆರಿಗೆಯ ಖುಷಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ತುಂಬಾ ದಿನ ಉಳಿಯುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣಿಸುತ್ತಿಲ್ಲ.

 

ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ಬಿಜೆಪಿ ವಲಸೆಬಂದ ಶಾಸಕರು ನಿರೀಕ್ಷೆಯಂತೆ ಉಪ-ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಹೇಶ್ ಕುಮಟಳ್ಳಿಗೆ ಹೊರತುಪಡಿಸಿ ಉಳಿದ ಎಲ್ಲಾ ಶಾಸಕರಿಗೂ ಸಂಪುಟ ದರ್ಜೆಯ ಸಚಿವ ಸ್ಥಾನವನ್ನೇನೋ ನೀಡಲಾಗಿದೆ.

ಆದರೆ, ಹೀಗೆ ಸಚಿವ ಸ್ಥಾನ ಪಡೆದಿರುವ ಶಾಸಕರು ಅಷ್ಟಕ್ಕೆ ತೃಪ್ತರಾಗದೆ ಇದೀಗ ಪ್ರತಿಯೊಬ್ಬರೂ ಇಂತಹದ್ದೇ ಖಾತೆ ಕೊಡಿ ಎಂದು ಬಿಎಸ್‍ವೈ ಎದುರು ಪ್ರಬಲ ಖಾತೆಗೆ ಬೇಡಿಕೆ ಇಡುತ್ತಿರುವುದು ಸಿಎಂ ತಲೆನೋವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಮಾತನಾಡುವ ಭರದಲ್ಲಿ ಬಿಜೆಪಿ ಶಾಸಕ ಬಸಡನಗೌಡ ಪಾಟೀಲ್ ಯತ್ನಾಳ್ ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ಬಿಜೆಪಿ ಸರ್ಕಾರ ಮತ್ತು ಸ್ವತಃ ಯಡಿಯೂರಪ್ಪನವರಿಗೆ ಮತ್ತಷ್ಟು ಮುಜುಗರಕ್ಕೀಡುಮಾಡುತ್ತಿದೆ.

ಬಿಜೆಪಿಯಲ್ಲಿ ಮುಗಿಯದ ಖಾತೆ ಖ್ಯಾತೆ

ಕಳೆದ ಜೂನ್ ತಿಂಗಳಲ್ಲಿ ಬಿಜೆಪಿ ಸರ್ಕಾರದ ರಚನೆ ವೇಳೆ ಬಿ.ಎಸ್. ಯಡಿಯೂರಪ್ಪ ತಾವು ಕೊಟ್ಟ ಮಾತಿನಂತೆ ಕೊನೆಗೂ 10 ಜನ ವಲಸಿಗ/ಅರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸ್ವಪಕ್ಷೀಯ ಹಿರಿಯ ನಾಯಕರು ಮತ್ತು ದೆಹಲಿಯ ಹೈಕಮಾಂಡ್ ನಾಯಕರ ವಿರೋಧ ಕಟ್ಟಿಕೊಂಡು ಕೊನೆಗೂ ಕೊಟ್ಟ ಮಾತು ಉಳಿಸಿಕೊಳ್ಳುವ ಮೂಲಕ ವಚನಭ್ರಷ್ಟ ಎಂಬ ಹಣೆಪಟ್ಟಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ, ಇದು ಇಲ್ಲಿಗೆ ಮುಗಿಯುವ ಕಥೆ ಅಲ್ಲ.

ಸೋಮವಾರ ರಾಜ್ಯಪಾಲರಿಗೆ ನೂತನ ಸಚಿವರ ಖಾತೆ ವಿವರದ ಪಟ್ಟಿಯನ್ನು ಕಳುಹಿಸಿದ್ದ ಬಿ.ಎಸ್. ಯಡಿಯೂರಪ್ಪ, ರಮೇಶ್ ಜಾರಕಿಹೊಳಿ – ಜಲ ಸಂಪನ್ಮೂಲ, ಡಾ.ಕೆ. ಸುಧಾಕರ್-ವೈದ್ಯಕೀಯ ಶಿಕ್ಷಣ, ಆನಂದ್ ಸಿಂಗ್-ಆಹಾರ ಮತ್ತು ನಾಗರಿಕ, ಶ್ರೀಮಂತ ಪಾಟೀಲ್- ಜವಳಿ ಇಲಾಖೆ, ನಾರಾಯಣ ಗೌಡ- ಪೌರಾಡಳಿತ ಮತ್ತು ತೋಟಗಾರಿಕೆ, ಎಸ್.ಟಿ. ಸೋಮಶೇಖರ್- ಸಹಕಾರ, ಶಿವರಾಂ ಹೆಬ್ಬಾರ್-ಕಾರ್ಮಿಕ, ಭೈರತಿ ಬಸವರಾಜು – ನಗರಾಭಿವೃದ್ಧಿ, ಗೋಪಾಲಯ್ಯ-ಸಣ್ಣ ಕೈಗಾರಿಕೆ ಹಾಗೂ ಬಿ.ಸಿ. ಪಾಟೀಲ್‍ಗೆ ಅರಣ್ಯ ಖಾತೆಯನ್ನು ನೀಡಿದ್ದರು.

 

ಆದರೆ, ಖಾತೆ ಹಂಚಿಕೆಯ ವಿವರಗಳು ಬಹಿರಂಗಗೊಳ್ಳುತ್ತಿದ್ದಂತೆ ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಮತ್ತು ಕೋಲಾರದ ಶಾಸಕ ಡಾ. ಸುಧಾಕರ್ ಬಹಿರಂಗವಾಗಿಯೇ ತಗಾದೆ ತೆಗೆದಿದ್ದಾರೆ.

ಆರಂಭದಿಂದಲೂ ಬಿಸಿ ಪಾಟೀಲ್ ಗೃಹ ಇಲಾಖೆಯ ಮೇಲೆ ಕಣ್ಣಿಟ್ಟಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. “ಪೊಲೀಸ್ ಅಧಿಕಾರಿಯಾಗಿದ್ದ ನಾನು ಗೃಹ ಸಚಿವನಾಗಬೇಕು ಎಂಬುದು ಹಲವು ಪೊಲೀಸರ ಆಕಾಂಕ್ಷೆ” ಎಂದು ಅವರು ಬಹಿರಂಗವಾಗಿಯೇ ಹೇಳಿದ್ದರು. ಹೀಗಾಗಿ ಅರಣ್ಯ ಇಲಾಖೆ ಸ್ಥಾನಮಾನ ಸ್ವಾಭಾವಿಕವಾಗಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನೂ ಡಾ. ಸುಧಾಕರ್ ಆರಂಭದಲ್ಲೇ ತನಗೆ ಇಂಧನ ಖಾತೆ ನೀಡುವಂತೆ ಬಿಎಸ್‍ವೈ ಎದುರು ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಬಿಎಸ್‍ವೈ ಸಹ ಸಮ್ಮತಿ ಸೂಚಿಸಿದ್ದರು ಎನ್ನಲಾಗುತ್ತಿದೆ. ಆದರೆ, ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಿರುವುದು ಸುಧಾಕರ್ ಅವರನ್ನು ಕೆರಳಿಸಿದೆ. ಹೀಗಾಗಿ ಈ ಇಬ್ಬರೂ ನಾಯಕರು ತಮಗೆ ಪ್ರಬಲ ಖಾತೆ ನೀಡುವಂತೆ ಬಹಿರಂಗವಾಗಿಯೇ ಪಟ್ಟು ಹಿಡಿದು ಕುಳಿತಿದ್ದಾರೆ.

ಪರಿಣಾಮ ಇವರನ್ನು ಸಮಾಧಾನಿಸಲು ಮುಂದಾಗಿರುವ ಸಿಎಂ ಬಿಎಸ್‍ವೈ ಮಂಗಳವಾರ ಮತ್ತೆ ಖಾತೆ ಮರುಹಂಚಿಕೆ ಮಾಡಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದ್ದ ಕೃಷಿ ಖಾತೆಯನ್ನು ಇದೀಗ ಬಿಸಿ ಪಾಟೀಲ್‍ಗೆ ವಹಿಸಲಾಗಿದೆ.

ಬಿ.ಸಿ. ಪಾಟೀಲ್ ಮಾತ್ರವಲ್ಲದೆ ಇನ್ನೂ ನಾಲ್ವರು ಸಚಿವರಿಗೆ ಖಾತೆ ಮರುಹಂಚಿಕೆ ಮಾಡಲಾಗಿದೆ. ಆನಂದ ಸಿಂಗ್‍ಗೆ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಬದಲು ಅರಣ್ಯ ಹಾಗೂ ಜೈವಿಕ ಪರಿಸರ ಇಲಾಖೆಯನ್ನು ನೀಡಲಾಗಿದೆ. ಗೋಪಾಲಯ್ಯ ಅವರಿಗೆ ಸಣ್ಣ ಕೈಗಾರಿಕೆ ಬದಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಲಾಗಿದೆ.

ಶಿವರಾಮ್ ಹೆಬ್ಬಾರ್ ಅವರಿಗೆ ಕಾರ್ಮಿಕ ಇಲಾಖೆ ಜೊತೆಗೆ ಸಕ್ಕರೆ ಖಾತೆಯನ್ನೂ ನೀಡಲಾಗಿದೆ. ಸಚಿವ ಸಿ.ಸಿ. ಪಾಟೀಲ್‍ಗೆ ಗಣಿ ಮತ್ತು ಭೂವಿಜ್ಞಾನ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯನ್ನು ನೀಡಲಾಗಿದೆ.

ಈ ಪರಿಷ್ಕøತ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಆದರೆ, ಡಾ. ಸುಧಾಕರ್ ಅವರ ಖಾತೆ ಬದಲಾವಣೆ ಕುರಿತು ಈ ಪಟ್ಟಿಯಲ್ಲಿ ಎಲ್ಲೂ ಉಲ್ಲೇಖಿಸದಿರುವುದು ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾದರೂ ಅಚ್ಚರಿ ಇಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಎಸ್‍ವೈಗೆ ಬಿಡದ ಶಾಸಕ ಯತ್ನಾಳ್ ಎಂಬ ತಲೆನೋವು
ಸಂಪುಟ ವಿಸ್ತರಣೆಗೂ ಮುನ್ನವೇ ತನಗೆ ಸಚಿವ ಸ್ಥಾನ ಇಲ್ಲ ಎಂಬ ವಿಚಾರವನ್ನು ಅರಿತಿದ್ದ ಶಾಸಕ ಮಹೇಶ್ ಕುಮಟಳ್ಳಿ, “ಮುಖ್ಯಮಂತ್ರಿ ಯಡಿಯೂರಪ್ಪ ಪ್ರಾಣ ಬಿಟ್ಟರೂ ಬಿಟ್ಟಾರು ಆದರೆ, ಕೊಟ್ಟ ಮಾತು ಮಾತ್ರ ತಪ್ಪಲಾರರು. ಅವರು ನನಗೆ ಮಾತು ಕೊಟ್ಟಂತೆ ಸಚಿವ ಸ್ಥಾನ ನೀಡಿಯೇ ತೀರುತ್ತಾರೆ” ಎಂದು ವೀರಾವೇಶದ ಹೇಳಿಕೆ ನೀಡುವ ಮೂಲಕ ಹೊಸ ಆಟಕ್ಕೆ ಮುಂದಾಗಿದ್ದರು.

ಆದರೆ, ಇದ್ಯಾವುದಕ್ಕೂ ಕ್ಯಾರೆ ಎನ್ನದ ಯಡಿಯೂರಪ್ಪ ಬೆಳಗಾವಿಗೆ ಎರಡು ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಅಲ್ಲದೆ, ಶಾಸಕ ಮಹೇಶ್ ಕುಮಟಳ್ಳಿಗೆ ಎಂಎಸ್‍ಐಎಲ್ (ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್) ನಿಗಮದ ಅಧ್ಯಕ್ಷ ಸ್ಥಾನ ನೀಡಿ ಕೈತೊಳೆದುಕೊಂಡಿದ್ದರು.

ತನಗೆ ಸಚಿವ ಸ್ಥಾನ ಲಭಿಸುವುದಿಲ್ಲ ಎಂಬ ಸತ್ಯ ಅರಿವಾದ ಮೇಲೆ ಕುಮಟಳ್ಳಿ ಸಹ ಸ್ವಲ್ಪ ಮೆತ್ತಗಾಗಿದ್ದಾರೆ. ಹಠವನ್ನು ಪಕ್ಕಕ್ಕಿಟ್ಟು “ನಾನು ಒಬ್ಬ ಸಿವಿಲ್ ಇಂಜಿನಿಯರ್. ಹೀಗಾಗಿ ಎಂಎಸ್‍ಐಎಲ್ ಬದಲು ಬೇರೆ ಯಾವುದಾದರೂ ನಿಗಮ ಅಥವಾ ಮಂಡಳಿ ಕೊಟ್ಟರೆ ಕೆಲಸ ಮಾಡಲು ಸಿದ್ಧನಿದ್ದೇನೆ” ಎಂದು ಹೇಳುವ ಮೂಲಕ ತಮ್ಮ ಅಸಮಾಧಾನದಿಂದ ಪಕ್ಷಕ್ಕೆ ಆಗಬಹುದಾದ ಮುಜುಗರವನ್ನು ತಪ್ಪಿಸಿದ್ದರು.

ಆದರೆ, ಸಚಿವ ಸ್ಥಾನ ಸಿಗದ ಕುರಿತಾಗಿ ಸ್ವತಃ ಮಹೇಶ್ ಕುಮಟಳ್ಳಿ ಸುಮ್ಮನಾದರೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಮ್ಮನಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ,

ಮಂಗಳವಾರ ವಿಜಯಪುರ ಜಿಲ್ಲೆಯಲ್ಲಿ ಈ ಕುರಿತು ಹೇಳಿಕೆ ನೀಡಿರುವ ಯತ್ನಾಳ್, “ಚುನಾವಣೆ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ತುಂಬು ಸಭೆಯಲ್ಲಿ ಕುಮಟಳ್ಳಿಯವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಹೀಗಾಗಿ ಅವರು ಕೊಟ್ಟ ಮಾತು ಉಳಿಸಿಕೊಳ್ಳಬೇಕು ಇಲ್ಲದಿದ್ದರೆ, ಹೆಚ್.ಡಿ. ಕುಮಾರಸ್ವಾಮಿಯವರನ್ನು ಈ ಹಿಂದೆ ವಚನಭ್ರಷ್ಟ ಎಂದು ಬೈದಿದ್ದ ಬಿಎಸ್‍ವೈ ಸ್ವತಃ ವಚನಭ್ರಷ್ಟ ಎಂದೆನಿಸಿಕೊಳ್ಳುತ್ತಾರೆ” ಎಂದು ಹೇಳುವ ಮೂಲಕ ಸಿಎಂಗೆ ಟಾಂಗ್ ನೀಡಿದ್ದಾರೆ.

ಯತ್ನಾಳ್ ಹೀಗೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡದ ಕುರಿತಾಗಿ ಬಹಿರಂಗವಾಗಿ ಅಸಮಾಧಾನ ಹೊರಹಾಕುವ ಮೂಲಕ ಪಕ್ಷದಿಂದ ಷೊಕಾಸ್ ನೋಟಿಸ್ ಪಡೆದಿದ್ದರು. ಶಿಸ್ತು ಕ್ರಮಕ್ಕೂ ಒಳಗಾಗಿದ್ದರು.
ಅಲ್ಲದೆ, ತನಗೂ ಸಿಎಂ ಆಗುವ, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷನಾಗುವ ಯೋಗ್ಯತೆ ಇದೆ ಎಂದು ಹೇಳುವ ಮೂಲಕ ಪಕ್ಷದ ವರಿಷ್ಠರ ಕೋಪಕ್ಕೆ ತುತ್ತಾಗಿದ್ದರು. ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಎಂದು ಘೋಷಿಸಿದಾಗ ಬಹಿರಂಗವಾಗಿಯೇ ಕುಟುಕಿದ್ದರು.

ಒಂದೆಡೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಖ್ಯಾತೆ ಸ್ವಪಕ್ಷೀಯರ ಬಂಡಾಯ ಮತ್ತು ಹೈಕಮಾಂಡ್ನ ನಿರಂತರ ಕಿರಿಕಿರಿಯಿಂದ ಈಗಾಗಲೇ ನಲುಗಿಹೋಗಿರುವ ಯಡಿಯೂರಪ್ಪನವರಿಗೆ ಯತ್ನಾಳ್ ಹೀಗೆ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಸರ್ಕಾರ ವರ್ಚಸ್ಸಿಗೆ ಧಕ್ಕೆ ತರುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...