ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತಮ್ಮ ಕೆಲವು ತೀರ್ಪುಗಳು ಮತ್ತು ಅವಲೋಕನಗಳಿಗಾಗಿ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆಯನ್ನು ನೇರವಾಗಿ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದು, ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ರಾಜೀನಾಮೆ ಜಾರಿಗೆ ಬಂದಿದೆ ಎನ್ನಲಾಗಿದೆ.
ನ್ಯಾಯಾಧೀಶನಾಗಿ ನನ್ನ ಅಧಿಕಾರಾವಧಿ ಮುಗಿದಿದೆ ಮತ್ತು ಇದು ದೊಡ್ಡ ಕ್ಷೇತ್ರವನ್ನು ಪ್ರವೇಶಿಸಲು ಮತ್ತು ಜನರ ಸೇವೆ ಮಾಡಲು ಸೂಕ್ತ ಸಮಯವಾಗಿದೆ ಎಂದು ನನ್ನ ಆತ್ಮ ಹೇಳುತ್ತದೆ. ನಾನು ಮಂಗಳವಾರ ರಾಜೀನಾಮೆ ನೀಡುತ್ತೇನೆ ಎಂದು ಅವರು ಈ ಮೊದಲು ಮಾಧ್ಯಮಗಳಿಗೆ ತಿಳಿಸಿದ್ದರು. ನ್ಯಾಯಾಧೀಶರ ಯಾವ ಪಕ್ಷಕ್ಕೆ ಸೇರತ್ತೇನೆ ಎಂದು ಸ್ಪಷ್ಟಪಡಿಸದಿದ್ದರೂ, ಗಂಗೋಪಾಧ್ಯಾಯ ಅವರು ಕೆಲವೇ ದಿನಗಳಲ್ಲಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ಹಿಂದೂಸ್ತಾನ್ ಟೈಮ್ಸ್ಗೆ ಮಾಹಿತಿ ನೀಡಿದ್ದಾರೆ.
2018ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಹೈಕೋರ್ಟ್ಗೆ ನೇಮಕಗೊಂಡಿದ್ದ 62 ವರ್ಷದ ಗಂಗೋಪಾಧ್ಯಾಯ ಜುಲೈ 2020ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು, ಅವರು ಜುಲೈನಲ್ಲಿ ನಿವೃತ್ತಿ ಪಡೆಯಲಿದ್ದರು. ಅವರು ಪಶ್ಚಿಮ ಬಂಗಾಳ ಸಿವಿಲ್ ಸರ್ವಿಸ್ ಅಧಿಕಾರಿಯಾಗಿದ್ದರು ಆದರೆ ವಕೀಲರಾಗಲು 10 ವರ್ಷಗಳ ಹಿಂದೆ ತಮ್ಮ ಸಿವಿಲ್ ಸರ್ವಿಸ್ ಹುದ್ದೆಯನ್ನು ತೊರೆದಿದ್ದರು.
ಏಪ್ರಿಲ್ 2023ರಲ್ಲಿ, ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು.ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವರದಿ ಕೇಳಿತ್ತು.
ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.
ಇದನ್ನು ಓದಿ: ಮೋದಿ ರ್ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ