ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅಶ್ವಥ್ನಾರಾಯಣ್ “”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದುಹಾಕಿ” ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ ಎಫ್ಐಆರ್ ದಾಖಲಿಸುವಂತೆ ಮೇ 24ರಂದು ಮತ್ತೊಮ್ಮೆ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ ಎಫ್ಐಆರ್ ದಾಖಲಾಗಿದೆ.
ಮಾಜಿ ಸಚಿವ ಅಶ್ವತ್ಥ ನಾರಾಯಣ ಅವರು ನೀಡಿರುವ ಹೇಳಿಕೆಯು ರಾಜ್ಯಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಚಾರ ಪಡೆದು ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ಧರಾಮಯ್ಯನವರ ಸ್ಥಾನಕ್ಕೆ ಕುಂದು ಉಂಟಾಗಿದ್ದು, ರಾಜ್ಯದಲ್ಲಿ ಅಶಾಂತಿ ಉಂಟಾಗಿ ಕೋಮು ಸೌಹಾರ್ದತೆ ಹಾಳಾಗುತ್ತಿರುವುದು ಕಂಡು ಬಂದಿರುತ್ತದೆ. ಹಾಗಾಗಿ ಫೆ. 17 ರಂದು ಕಾಂಗ್ರೆಸ್ ಮುಖಂಡರುಗಳು ದೇವರಾಜ ಪೊಲೀಸ್ ಠಾಣೆಗೆ ಬಂದು ಅಶ್ವಥ್ ನಾರಾಯಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಹಿಸಿರುವುದಿಲ್ಲ. ಹಿಂದೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಮಳೆ ಹಾನಿ ವೀಕ್ಷಣೆಗೆ ಹೋಗಿದ್ದಾಗ ಒಂದು ವರ್ಗ ಕೊಲೆ ಮಾಡಲು ಯತ್ನಿಸಿತ್ತು. ಈ ವಿಚಾರವಾಗಿ ಮಡಿಕೇರಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ. ಇವರನ್ನು ಮತ್ತೊಮ್ಮೆ ಸಮಾಜದ್ರೋಹಿಗಳು ಕೊಲೆ ಮಾಡಲು ಯತ್ನಿಸುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
“ಈ ಎಲ್ಲಾ ಕಾರಣಗಳಿಂದ ಸಾರ್ವಜನಿಕವಾಗಿ ಮಾಜಿ ಸಚಿವ ಅಶ್ವತ್ಥ ನಾರಾಯಣ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೊಲೆ ಮಾಡಲು ಸುಪಾರಿ ನೀಡುವ ಸಂಶಯ ಇರುತ್ತದೆ. ಆದ್ದರಿಂದ ಮಾಜಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಅವರ ಇಂತಹ ಕೊಲೆ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿ ಎಫ್.ಐ.ಆರ್ ದಾಖಲಿಸಿ ಇವರನ್ನು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು” ಎಂದು ದೂರಿನಲ್ಲಿ ಕೋರಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಗೌರಿ ಕೊಲೆಯೂ, ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂಬ ಕರೆಯೂ..