ಎಲ್ಕೆಜಿ, ಯುಕೆಜಿ ಸೇರಿದಂತೆ ಏಳನೆ ತರಗತಿಯವರೆಗೆ ಆನ್ಲೈನ್ ಕ್ಲಾಸ್ ನಡೆಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಒಂದರಿಂದ 7ನೆ ತರಗತಿಯ ವರೆಗೆ ಆನ್ಲೈನ್ ಕ್ಲಾಸ್ ನಡೆಯುವುದಿಲ್ಲ, ಈ ಬಗ್ಗೆ ಶೀಘ್ರವೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದರು.
ಈ ಹಿಂದೆ ಎಲ್ಕೆಜಿಯಿಂದ ಐದನೆ ತರಗತಿಯ ವರೆಗೆ ಆನ್ಲೈನ್ ಕ್ಲಾಸ್ ನಡೆಸಬಾರದು ಎಂದು ನಿರ್ಧರಿಸಲಾಗಿತ್ತು. ಈಗ ಅದನ್ನು ಏಳನೆ ತರಗತಿಯವರೆಗೆ ವಿಸ್ತರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಚಿವ ಸಂಪುಟ ಸಭೆ ಈ ನಿರ್ಧಾರಕ್ಕೆ ಬಂದಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಈ ಪರೀಕ್ಷಗಳ ದಿನಾಂಕಗಳು ಯಾವುದೆ ಕಾರಣಕ್ಕೂ ಬದಲಾಗುವುದಿಲ್ಲ, ಅದು ನಿಗದಿಯಂತೆ ನಡೆಯುತ್ತದೆ ಎಂದು ಹೇಳಿದರು.
ಓದಿ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ