Homeಮುಖಪುಟರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಅಭಿಪ್ರಾಯಕ್ಕೆ ನ್ಯಾಯವಾದಿಗಳು, ಚಿಂತಕರು ಏನಂದ್ರು?

ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಅಭಿಪ್ರಾಯಕ್ಕೆ ನ್ಯಾಯವಾದಿಗಳು, ಚಿಂತಕರು ಏನಂದ್ರು?

- Advertisement -
- Advertisement -

ವಿಧಾನಸಭೆ ಅಂಗೀಕರಿಸಿದ ಮಸೂದೆಗೆ ನಿಗದಿತ ಸಮಯದೊಳಗೆ ಸಹಿ ಹಾಕುವಂತೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು 2025ರ ನವೆಂಬರ್ 20ರಂದು ಐವರು ಸದಸ್ಯರ ಸುಪ್ರೀಂ ಕೋರ್ಟ್‌ನ ಸಾವಿಂಧಾನಿಕ ಪೀಠ ಹೇಳಿದೆ.

ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2025ರ ಮೇ ತಿಂಗಳಲ್ಲಿ ಮಾಡಿದ್ದ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರು ಕಾಲಮಿತಿಯನ್ನು ಉಲ್ಲಂಘಿಸಿದರೆ, ನ್ಯಾಯಾಲಯಗಳು ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ (ತಾನಾಗಿಯೇ ಒಪ್ಪಿಗೆ) ಎಂದು ಘೋಷಿಸುವ ಪರಿಕಲ್ಪನೆಯು ಸಂವಿಧಾನದ ಆಶಯ ಮತ್ತು ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಇದು ವಾಸ್ತವಿಕವಾಗಿ ರಾಜ್ಯಪಾಲರಿಗೆ ಮೀಸಲಾಗಿರುವ ಕಾರ್ಯಗಳನ್ನು ಆಕ್ರಮಿಸಿಕೊಳ್ಳುವುದಾಗಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ವಿಧಾನಸಭೆಯಲ್ಲಿ ಅಂಗೀಕೃತಗೊಂಡ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಂಗ ಗಡುವೊಂದನ್ನು ವಿಧಿಸುವುದು, ಆ ಗಡುವು ಮೀರಿದ ನಂತರ ‘ಅನುಮೋದನೆ ತಾನಾಗಿಯೇ ಸಿಕ್ಕಿತು’ (deemed consent) ಎಂದು ಪರಿಗಣಿಸುವಂತೆ ಆದೇಶಿಸುವುದು ಸಂವಿಧಾನಾತ್ಮಕವಾಗಿ ತಪ್ಪು ಮತ್ತು ಅಸಾಧ್ಯ. ಏಕೆಂದರೆ, ಇಂತಹ ಆದೇಶದಿಂದ ನ್ಯಾಯಾಂಗವು ಕಾರ್ಯಾಂಗದ ಮೂಲಭೂತ ಅಧಿಕಾರವನ್ನೇ ಆಕ್ರಮಿಸಿಕೊಂಡಂತಾಗುತ್ತದೆ ಮತ್ತು ರಾಜ್ಯಪಾಲರು ಅಥವಾ ರಾಷ್ಟ್ರಪತಿಯ ಸ್ಥಾನವನ್ನು ಬದಲಾಯಿಸಿದಂತಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂವಿಧಾನದ 200 ಮತ್ತು 201ನೇ ವಿಧಿಗಳು ಈ ಅಧಿಕಾರವನ್ನು (ಮಸೂದೆಗೆ ಅನುಮೋದನೆ ನೀಡುವ) ಕೇವಲ ಕಾರ್ಯಾಂಗಕ್ಕೆ ಮಾತ್ರ ನೀಡಿವೆ, ನ್ಯಾಯಾಂಗಕ್ಕೆ ಅಲ್ಲ. ಆದ್ದರಿಂದ ಇಂತಹ ‘ತಾನಾಗಿ ಅನುಮೋದನೆ’ ಎಂಬ ಪರಿಕಲ್ಪನೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ಸಂಪೂರ್ಣ ಅನುಚಿತ ಮತ್ತು ಅನುಮತಿಸಲಾಗದ ಕ್ರಮ ಎಂದು ಸುಪ್ರೀಂ ಕೋರ್ಟ್ ದೃಢವಾಗಿ ತೀರ್ಮಾನಿಸಿದೆ.

ಇದೇ ವೇಳೆ, ರಾಜ್ಯಪಾಲರು ಮಸೂದೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣವಿಲ್ಲದೆ ಅತ್ಯಂತ ದೀರ್ಘಕಾಲ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ತಡೆಹಿಡಿದು, ವಿಧಾನಮಂಡಲದ ಕಾನೂನು ರಚನಾ ಪ್ರಕ್ರಿಯೆಯನ್ನೇ ವಿಫಲಗೊಳಿಸುತ್ತಿದ್ದರೆ, ನ್ಯಾಯಾಲಯವು ತನ್ನ ಸೀಮಿತ ನ್ಯಾಯಾಂಗ ಪರಿಶೀಲನಾ ಅಧಿಕಾರವನ್ನು (limited judicial review) ಬಳಸಿಕೊಂಡು ರಾಜ್ಯಪಾಲರಿಗೆ ‘ನಿರ್ದಿಷ್ಟ ಸಮಯದೊಳಗೆ ತೀರ್ಮಾನ ತೆಗೆದುಕೊಳ್ಳಿ’ ಎಂದು ಆದೇಶ ನೀಡಬಹುದು ಎಂದಿದೆ.

ಆದರೆ, ಈ ಆದೇಶದಲ್ಲಿ ಮಸೂದೆಯ ಒಳಿತು-ಕೆಡುಕುಗಳ ಬಗ್ಗೆ (merits of the Bill) ಏನನ್ನೂ ಹೇಳುವಂತಿಲ್ಲ ಅಥವಾ ಮಸೂದೆಗೆ ಅನುಮೋದನೆ ಕೊಡಿ/ತಡೆಯಿರಿ ಎಂದು ಆದೇಶಿಸುವಂತಿಲ್ಲ. ಕೇವಲ ‘ತೀರ್ಮಾನ ತೆಗೆದುಕೊಳ್ಳುವ ಕೆಲಸವನ್ನು ತಡೆಯಬೇಡಿ, ಸಮಯಕ್ಕೆ ಸರಿಯಾಗಿ ಮಾಡಿ’ ಎಂದು ಮಾತ್ರ ಹೇಳಬಹುದು. ಈ ರೀತಿ ನ್ಯಾಯಾಲಯವು ಕಾರ್ಯಾಂಗದ ಅಧಿಕಾರವನ್ನು ಆಕ್ರಮಿಸಿಕೊಳ್ಳದೆ, ಕೇವಲ ಕಾನೂನು ರಚನಾ ಪ್ರಕ್ರಿಯೆಯನ್ನು ರಕ್ಷಿಸುವ ಸೀಮಿತ ಹಸ್ತಕ್ಷೇಪ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಸಿ 2025ರ ಸೆಪ್ಟೆಂಬರ್ 11ರಂದು ತನ್ನ ಅಭಿಪ್ರಾಯವನ್ನು ಕಾಯ್ದಿರಿಸಿತ್ತು. ನವೆಂಬರ್ 20ರಂದು ಅದನ್ನು ಪ್ರಕಟಿಸಿದೆ.

2025ರ ಏಪ್ರಿಲ್ 20ರಂದು, ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರಗೊಂಡ 10 ಮಸೂದೆಗಳನ್ನು ರಾಷ್ಟ್ರಪತಿಯ ಪರಿಶೀಲನೆಯ ಕಾರಣ ಹೇಳಿ ಸುದೀರ್ಘ ಸಮಯ ತಡೆಹಿಡಿದು ಇರಿಸಿಕೊಂಡಿದ್ದ ರಾಜ್ಯಪಾಲ ಆರ್‌. ಎನ್‌. ರವಿ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ತೀರ್ಪು ಪ್ರಕಟಿಸುವ ವೇಳೆ, ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಂವಿಧಾನದ 200ನೇ ವಿಧಿಯಡಿ ಹೇಳಲಾದ ರಾಜ್ಯಪಾಲರ ಅಧಿಕಾರ ಮತ್ತು ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು, ರಾಜ್ಯಪಾಲರು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ದುರ್ಬಲಗೊಳಿಸಬಾರದು ಎಂದಿತ್ತು. ಮಸೂದೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ತಡೆಯಲು ಕೆಲವು ನಿರ್ದೇಶನಗಳನ್ನು ಕೂಡ ನೀಡಿತ್ತು. ರಾಜ್ಯಪಾಲರು ತಮಗೆ ಕಳುಹಿಸಲಾದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ದಿಷ್ಟ ಸಮಯ ನಿಗದಿಪಡಿಸಿತ್ತು.

ರಾಜ್ಯಪಾಲರು ‘ವೀಟೋ’ ಅಧಿಕಾರ ಹೊಂದಿಲ್ಲ, ಅಂದರೆ, ಅವರು ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸುಮ್ಮನೆ ತಡೆ ಹಿಡಿದು ಇರಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿತ್ತು. ವಿಧಿ 200ರ ಮೊದಲ ನಿಬಂಧನೆಯ ‘ಸಾಧ್ಯವಾದಷ್ಟು ಬೇಗ’ ಎಂಬ ಪದವು ರಾಜ್ಯಪಾಲರು ಮಸೂದೆಯ ಕುರಿತು ತುರ್ತು ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದನ್ನು ಹೇಳುತ್ತದೆ ಎಂದಿತ್ತು.

ಮಾನ್ಯವಾದ ಸಾಂವಿಧಾನಿಕ ಕಾರಣಗಳಿಲ್ಲದೆ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುವ ಅಥವಾ ಮಸೂದೆಯನ್ನು ಸುಖಾ ಸುಮ್ಮನೆ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರ ಚಲಾಯಿಸಲು ರಾಜ್ಯಪಾಲರಿಗೆ ಅವಕಾಶ ಇಲ್ಲ. ಒಂದಾ ಮಸೂದೆಗೆ ಸಹಿ ಹಾಕಬೇಕು ಅಥವಾ ಹಿಂದಿರುಗಿಸಬೇಕು, ಇಲ್ಲದಿದ್ದರೆ ರಾಷ್ಟ್ರಪತಿಯ ಪರಿಶೀಲನೆಗೆ ಕಳುಹಿಸಬೇಕು ಎಂದು ಸ್ಪಷ್ಟಪಡಿಸಿತ್ತು.

ರಾಜ್ಯಪಾಲರು ಹಿಂದಿರುಗಿಸಿದ ಮಸೂದೆಯನ್ನು ಶಾಸಕಾಂಗ ಪರಿಶೀಲನೆ ನಡೆಸಿ ಮತ್ತೆ ಕಳುಹಿಸಿದರೆ ರಾಜ್ಯಪಾಲರು ಅದಕ್ಕೆ ಸಹಿ ಹಾಕಬೇಕು, ಮತ್ತೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದಿತ್ತು.

ಶಾಸಕಾಂಗ ಮರು ಪರಿಶೀಲನೆ ಮಾಡಿ ಕಳುಹಿಸಿದ ಬಳಿಕವೂ ತಮಿಳುನಾಡಿನ 10 ಮಸೂದೆಗಳನ್ನು ರಾಷ್ಟ್ರಪತಿಯ ಪರಿಶೀಲನೆಗೆಂದು ತಡೆ ಹಿಡಿದು ಇರಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿತ್ತು. ಇದು ‘ಅಧಿಕಾರದ ದುರ್ಬಳಕೆ’ ಎಂದಿತ್ತು.

ಆ 10 ಮಸೂದೆಗಳ ಕುರಿತು ರಾಷ್ಟ್ರಪತಿ ತೆಗೆದುಕೊಂಡ ಯಾವುದೇ ನಂತರದ ಕ್ರಮವು ನಿಲ್ಲುವುದಿಲ್ಲ ಎಂದು ಆದೇಶಿಸಿತ್ತು. ಶಾಸಕಾಂಗವು ಮಸೂದೆಗಳನ್ನು ಮರುಪರಿಶೀಲಿಸಿದ ದಿನಾಂಕದಂದು ರಾಜ್ಯಪಾಲರು ಈ ಮಸೂದೆಗಳಿಗೆ ಒಪ್ಪಿಗೆ ನೀಡಿದ್ದಾರೆ ಎಂದು ಪರಿಗಣಿಸಲಾಗಿದೆ. ಈ ನಿರ್ಧಾರವನ್ನು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯದ ಅಂತರ್ಗತ ಅಧಿಕಾರವನ್ನು ಬಳಸಿಕೊಂಡು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿತ್ತು.

ಆದರೆ, ನವೆಂಬರ್ 20ರ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವು, ಅದರದ್ದೇ ಹಳೆಯ ಅಭಿಪ್ರಾಯವನ್ನು ಅಲ್ಲಗಳೆದಂತಾಗಿದೆ. ಈ ಮೂಲಕ ಜನರಲ್ಲಿ ಗೊಂದಲ ಉಂಟಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯಪಾಲರಿಗೆ ಅಪರಿಮಿತ ಅಧಿಕಾರ ಕೊಟ್ಟಂತಾಗಿದೆ. ಹೊಸ ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್‌.ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ವಾಗತಿಸಿದ್ದಾರೆ.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿಗಳನ್ನು ವಿಧಿಸುವುದು ಅಧಿಕಾರಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ಇಬ್ಬರೂ ವಾದಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ನ ಇತ್ತೀಚಿನ ಅಭಿಪ್ರಾಯದ ಬಳಿಕ, “ಇದು ಕಾರ್ಯಾಂಗದ ಅಧಿಕಾರವನ್ನು ನ್ಯಾಯಾಂಗ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯುತ್ತದೆ” ಎಂದು ಶ್ಲಾಘಿಸಿದ್ದಾರೆ.

ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಸಂಭ್ರಮಿಸಿದ ಬಿಜೆಪಿಗರು

ಬಿಜೆಪಿಯ ಕಾನೂನು ವಿಶ್ಲೇಷಕ ಮತ್ತು ಪರಿಣಮ್ ಲಾ ಅಸೋಸಿಯೇಟ್ಸ್‌ನ ವ್ಯವಸ್ಥಾಪಕ ಪಾಲುದಾರ ಹಿತೇಶ್ ಜೈನ್, “ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪರಿಗಣಿತ ಒಪ್ಪಿಗೆ ಪರಿಕಲ್ಪನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಕ್ಕೆ ಸ್ಥಿರತೆ ಬರುತ್ತದೆ. ಸಂವಿಧಾನದ ನೈತಿಕತೆ ಮತ್ತಷ್ಟು ಬಲಗೊಳ್ಳುತ್ತದೆ. ನ್ಯಾಯಾಂಗ ಪರಿಶೀಲನೆ ಎಂದರೆ ಕೇವಲ ಪರಿಶೀಲನೆ ಮಾಡುವುದು, ಆಡಳಿತ ನಡೆಸುವುದಲ್ಲ ಎಂಬುವುದನ್ನು ಮತ್ತೊಮ್ಮೆ ಗಟ್ಟಿಯಾಗಿ ಹೇಳಲಾಗಿದೆ” ಎಂದಿದ್ದಾರೆ.

TridentX Intel (@TridentxIN) ಎಂಬ ಬಿಜೆಪಿ ಪರ ವಿಶ್ಲೇಷಕ ಸಂಸ್ಥೆಯ ಎಕ್ಸ್‌ ಖಾತೆಯಲ್ಲಿ, “ಸಾಂವಿಧಾನಿಕ ಸಮತೋಲನಕ್ಕೆ ದೊಡ್ಡ ಗೆಲುವು. ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ದೊಡ್ಡ ಹಿನ್ನಡೆ” ಎಂದು ಪೋಸ್ಟ್ ಹಾಕಲಾಗಿದೆ.

ರಾಜಕೀಯ ವಿಶ್ಲೇಷಕ ಎಂದು ಹೇಳಲಾಗುವ JagVyas (@jav_j21) ಎಂಬ ಎಕ್ಸ್‌ ಖಾತೆಯಲ್ಲಿ, “ಸುಪ್ರೀಂ ಕೋರ್ಟ್ ಕೊನೆಗೂ ಸರಿಯಾದ ಮಾರ್ಗಕ್ಕೆ ಬಂದಿದೆ…ಇದು ಮೋದಿ ಯುಗಕ್ಕೆ ಸಿಕ್ಕ ದೊಡ್ಡ ಸಂವಿಧಾನಿಕ ಗೆಲುವು. ಅಧಿಕಾರಗಳ ವಿಭಜನೆಯನ್ನು ಮರುಸ್ಥಾಪಿಸಿ, ನ್ಯಾಯಾಂಗದ ಸಾಹಸಪ್ರಯೋಗಗಳನ್ನು (judicial adventurism) ಕೊನೆಗಾಣಿಸಲಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಸನಾತನಿ ರಾಷ್ಟ್ರೀಯವಾದಿ ಎನ್ನಲಾದ Saravanakumar (@Saravana_2785) ಎಂಬ ಎಕ್ಸ್‌ ಖಾತೆಯಲ್ಲಿ “ಸುಪ್ರೀಂ ಕೋರ್ಟ್ ಈಗ ತಾನೇ ಹಿಂದೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸರಿಪಡಿಸಿಕೊಂಡಿದೆ. I
ಹಿಂದೆ ನ್ಯಾಯಾಲಯಗಳು ತಮ್ಮ ಗಡಿ ಮೀರಿ ರಾಜ್ಯಪಾಲರು/ರಾಷ್ಟ್ರಪತಿಗಳ ಕೆಲಸದಲ್ಲಿ ತಲೆಹಾಕುತ್ತಿದ್ದವು.
ಈ ತೀರ್ಪಿನಲ್ಲಿ ಅದನ್ನು ಸರಿಪಡಿಸಿ, “ರಾಜ್ಯಪಾಲರಿಗೆ ತನ್ನದೇ ಆದ ಚಿಂತನೆ-ನಿರ್ಧಾರದ ಸ್ವಾತಂತ್ರ್ಯ ಇದೆ” ಎಂಬುದನ್ನು ಒಪ್ಪಿಕೊಂಡಿದೆ. ಇದು ಒಳ್ಳೆಯ ಸುಧಾರಣೆ ಮತ್ತು ಸಕಾರಾತ್ಮಕ ಹೆಜ್ಜೆ” ಎಂದು ಶ್ಲಾಘಿಸಲಾಗಿದೆ.

ಇನ್ನುಳಿದಂತೆ ಹಲವು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಸ್ವಾಗತಿಸಲಾಗಿದೆ. ಸಾಂವಿಧಾನಿಕ ಬಿಕ್ಕಟ್ಟನ್ನು ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳ ವಿರುದ್ದ ಕೇಂದ್ರ ಸರ್ಕಾರಕ್ಕೆ ಗೆಲುವು ಎಂಬಂತೆ ಬಿಂಬಿಸಲಾಗಿದೆ.

ನ್ಯಾಯವಾದಿಗಳು ಚಿಂತಕರು ಏನಂದ್ರು?

ಸುಪ್ರೀಂ ಕೋರ್ಟ್‌ನ ಅಭಿಪ್ರಾಯದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಹೈಕೋರ್ಟ್ ನ್ಯಾಯವಾದಿ ಎಸ್‌. ಬಾಲನ್‌, “ಸುಪ್ರೀಂ ಕೋರ್ಟ್ ರಾಜ್ಯಪಾಲರಿಗೆ ಪರಮಾಧಿಕಾರ ಕೊಟ್ಟಿರುವುದು ‘ಸಾಂವಿಧಾನಿಕ ನೈತಿಕತೆ ಅಲ್ಲ” ಎಂದಿದ್ದಾರೆ.

ಭಾರತ ರಾಜ್ಯಗಳ ಒಕ್ಕೂಟ. ರಾಜ್ಯಪಾಲರು ಒಕ್ಕೂಟ ಸರ್ಕಾರದ ಏಜೆಂಟ್‌ಗಳ ರೀತಿ ವರ್ತಿಸಿಕೊಂಡು ಒಕ್ಕೂಟ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದ್ದಾರೆ. ಹಾಗಾಗಿ, ಈ ರಾಜ್ಯಪಾಲ ಹುದ್ದೆಯನ್ನೇ ತೆಗೆದು ಹಾಕಬೇಕು ಎಂದು ಬಾಲನ್ ಅಭಿಪ್ರಾಯಟ್ಟಿದ್ದಾರೆ.

ಇತ್ತೀಚೆಗೆ ಕಾರ್ಪೋರೇಟ್, ಸನಾತನವಾದಿಗಳು ರಾಜ್ಯಪಾಲ ಹುದ್ದೆಗೆ ಬಂದಿದ್ದಾರೆ. ಒಂದು ದೇಶ, ಸನಾತನ ದೇಶ ಮಾಡುವುದು ಅವರ ಉದ್ದೇಶ. ಎಲ್ಲಾ ಕಡೆಗಳಲ್ಲಿ ಆರ್‌ಎಸ್‌ಎಸ್‌ನವರು ರಾಜ್ಯಪಾಲ ಹುದ್ದೆಯಲ್ಲಿದ್ದಾರೆ. ಆರ್‌ಎಎಸ್‌ಎಸ್‌ನವರು ಸಂವಿಧಾನ ವಿರೋಧಿಗಳು, ಅಂತವರು ರಾಜ್ಯಪಾಲರಂತಹ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತರೆ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯದ ಮೂಲಕ ರಾಜ್ಯಪಾಲರಿಗೆ ಪರಮಾಧಿಕಾರ ಕೊಟ್ಟಿದೆ. ಇದನ್ನು ಬಳಸಿಕೊಂಡು ರಾಜ್ಯಪಾಲರು ತಮ್ಮ ಅಜೆಂಡಾ ಸಾಧಿಸುತ್ತಾರೆ. ಹಾಗಾಗಿ, ಇದು ಸಾಂವಿಧಾನಿಕ ನೈತಿಕತೆ ಅಲ್ಲ ಎಂದು ಬಾಲನ್ ಹೇಳಿದ್ದಾರೆ.

ಚಿಂತಕ ಶಿವಸುಂದರ್ ಮಾತನಾಡಿ, ನಿವೃತ್ತಿಗೆ ಮುನ್ನ, ರಾಜ್ಯದ ಮಸೂದೆಗಳಿಗೆ ಒಪ್ಪಿಗೆ ಕೊಡದೆ ಕಾಡಿಸುವ ಕೇಂದ್ರದ ಏಜೆಂಟ್ ರಾಜ್ಯಪಾಲರಿಗೆ ಸಮಯ ಮಿತಿ ವಿಧಿಸಲು ಸಾಧ್ಯವಿಲ್ಲವೆಂದು ತೀರ್ಪು ನೀಡಿ ಭಾರತದ ಫೆಡರಲ್ ಸ್ವರೂಪದ ಇನ್ನಷ್ಟು ಅವನತಿಗೆ ಮತ್ತು ಮೋದಿ ಸರ್ವಾಧಿಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಗವಾಯಿ ಸಾಹೇಬರು ಮಾನ್ಯತೆ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಹೈಕೋರ್ಟ್ ನ್ಯಾಯವಾದಿ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, ಸುಪ್ರೀಂ ಕೋರ್ಟ್ ತಮಿಳುನಾಡು ರಾಜ್ಯಪಾಲರ ಪ್ರಕರಣದಲ್ಲಿ ನೀಡಿದ್ದ ತನ್ನದೇ ಆದೇಶವನ್ನು ಇತ್ತೀಚಿನ ಅಭಿಪ್ರಾಯದ ಮೂಲಕ ಬದಿಗೆ ಸರಿಸಿದೆ. ಇದರಿಂದ ಜನ ಸಾಮಾನ್ಯರಲ್ಲಿ ಸಂವಿಧಾನದ ಮೇಲೆಯೇ ಗೊಂದಲ ಮೂಡುವಂತೆ ಮಾಡಿದೆ ಎಂದಿದ್ದಾರೆ. ಸಾವಿಂಧಾನಿಕ ಬಿಕ್ಕಟ್ಟು ಬಂದಾಗ ಅದನ್ನು ಪರಿಹರಿಸುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿ. ಹೀಗಿರುವಾಗ ಸುಪ್ರೀಂ ಕೋರ್ಟ್‌ ಕೈಚೆಲ್ಲಿ ಕುಳಿತರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯ ತಾಂತ್ರಿಕವಾಗಿ ಸರಿ ಇದ್ದರೂ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ವಿವೇಚನೆ ಬಳಸಬೇಕಿತ್ತು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತನ್ನದೇ ಆದೇಶವನ್ನು ಬದಿಗೆ ಸರಿಸುವ ಮೂಲಕ ಜನರಲ್ಲಿ ದ್ವಂದ್ವ ಉಂಟು ಮಾಡಿದೆ. ಇದರ ಜೊತೆಗೆ ರಾಜ್ಯಪಾಲರಿಗೆ ಪರಮಾಧಿಕಾರ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...