Homeಮುಖಪುಟರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಅಭಿಪ್ರಾಯಕ್ಕೆ ನ್ಯಾಯವಾದಿಗಳು, ಚಿಂತಕರು ಏನಂದ್ರು?

ರಾಜ್ಯಪಾಲರು, ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ಅಭಿಪ್ರಾಯಕ್ಕೆ ನ್ಯಾಯವಾದಿಗಳು, ಚಿಂತಕರು ಏನಂದ್ರು?

- Advertisement -
- Advertisement -

ವಿಧಾನಸಭೆ ಅಂಗೀಕರಿಸಿದ ಮಸೂದೆಗೆ ನಿಗದಿತ ಸಮಯದೊಳಗೆ ಸಹಿ ಹಾಕುವಂತೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು 2025ರ ನವೆಂಬರ್ 20ರಂದು ಐವರು ಸದಸ್ಯರ ಸುಪ್ರೀಂ ಕೋರ್ಟ್‌ನ ಸಾವಿಂಧಾನಿಕ ಪೀಠ ಹೇಳಿದೆ.

ಸಂವಿಧಾನದ 143ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2025ರ ಮೇ ತಿಂಗಳಲ್ಲಿ ಮಾಡಿದ್ದ ಉಲ್ಲೇಖಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್, “ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯವು ಯಾವುದೇ ಸಮಯ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರಪತಿ ಮತ್ತು ರಾಜ್ಯಪಾಲರು ಕಾಲಮಿತಿಯನ್ನು ಉಲ್ಲಂಘಿಸಿದರೆ, ನ್ಯಾಯಾಲಯಗಳು ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ (ತಾನಾಗಿಯೇ ಒಪ್ಪಿಗೆ) ಎಂದು ಘೋಷಿಸುವ ಪರಿಕಲ್ಪನೆಯು ಸಂವಿಧಾನದ ಆಶಯ ಮತ್ತು ಅಧಿಕಾರಗಳ ಪ್ರತ್ಯೇಕತೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಇದು ವಾಸ್ತವಿಕವಾಗಿ ರಾಜ್ಯಪಾಲರಿಗೆ ಮೀಸಲಾಗಿರುವ ಕಾರ್ಯಗಳನ್ನು ಆಕ್ರಮಿಸಿಕೊಳ್ಳುವುದಾಗಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ವಿಧಾನಸಭೆಯಲ್ಲಿ ಅಂಗೀಕೃತಗೊಂಡ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಂಗ ಗಡುವೊಂದನ್ನು ವಿಧಿಸುವುದು, ಆ ಗಡುವು ಮೀರಿದ ನಂತರ ‘ಅನುಮೋದನೆ ತಾನಾಗಿಯೇ ಸಿಕ್ಕಿತು’ (deemed consent) ಎಂದು ಪರಿಗಣಿಸುವಂತೆ ಆದೇಶಿಸುವುದು ಸಂವಿಧಾನಾತ್ಮಕವಾಗಿ ತಪ್ಪು ಮತ್ತು ಅಸಾಧ್ಯ. ಏಕೆಂದರೆ, ಇಂತಹ ಆದೇಶದಿಂದ ನ್ಯಾಯಾಂಗವು ಕಾರ್ಯಾಂಗದ ಮೂಲಭೂತ ಅಧಿಕಾರವನ್ನೇ ಆಕ್ರಮಿಸಿಕೊಂಡಂತಾಗುತ್ತದೆ ಮತ್ತು ರಾಜ್ಯಪಾಲರು ಅಥವಾ ರಾಷ್ಟ್ರಪತಿಯ ಸ್ಥಾನವನ್ನು ಬದಲಾಯಿಸಿದಂತಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂವಿಧಾನದ 200 ಮತ್ತು 201ನೇ ವಿಧಿಗಳು ಈ ಅಧಿಕಾರವನ್ನು (ಮಸೂದೆಗೆ ಅನುಮೋದನೆ ನೀಡುವ) ಕೇವಲ ಕಾರ್ಯಾಂಗಕ್ಕೆ ಮಾತ್ರ ನೀಡಿವೆ, ನ್ಯಾಯಾಂಗಕ್ಕೆ ಅಲ್ಲ. ಆದ್ದರಿಂದ ಇಂತಹ ‘ತಾನಾಗಿ ಅನುಮೋದನೆ’ ಎಂಬ ಪರಿಕಲ್ಪನೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ಸಂಪೂರ್ಣ ಅನುಚಿತ ಮತ್ತು ಅನುಮತಿಸಲಾಗದ ಕ್ರಮ ಎಂದು ಸುಪ್ರೀಂ ಕೋರ್ಟ್ ದೃಢವಾಗಿ ತೀರ್ಮಾನಿಸಿದೆ.

ಇದೇ ವೇಳೆ, ರಾಜ್ಯಪಾಲರು ಮಸೂದೆಗಳಿಗೆ ಸಂಬಂಧಿಸಿದಂತೆ ಯಾವುದೇ ಕಾರಣವಿಲ್ಲದೆ ಅತ್ಯಂತ ದೀರ್ಘಕಾಲ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ತಡೆಹಿಡಿದು, ವಿಧಾನಮಂಡಲದ ಕಾನೂನು ರಚನಾ ಪ್ರಕ್ರಿಯೆಯನ್ನೇ ವಿಫಲಗೊಳಿಸುತ್ತಿದ್ದರೆ, ನ್ಯಾಯಾಲಯವು ತನ್ನ ಸೀಮಿತ ನ್ಯಾಯಾಂಗ ಪರಿಶೀಲನಾ ಅಧಿಕಾರವನ್ನು (limited judicial review) ಬಳಸಿಕೊಂಡು ರಾಜ್ಯಪಾಲರಿಗೆ ‘ನಿರ್ದಿಷ್ಟ ಸಮಯದೊಳಗೆ ತೀರ್ಮಾನ ತೆಗೆದುಕೊಳ್ಳಿ’ ಎಂದು ಆದೇಶ ನೀಡಬಹುದು ಎಂದಿದೆ.

ಆದರೆ, ಈ ಆದೇಶದಲ್ಲಿ ಮಸೂದೆಯ ಒಳಿತು-ಕೆಡುಕುಗಳ ಬಗ್ಗೆ (merits of the Bill) ಏನನ್ನೂ ಹೇಳುವಂತಿಲ್ಲ ಅಥವಾ ಮಸೂದೆಗೆ ಅನುಮೋದನೆ ಕೊಡಿ/ತಡೆಯಿರಿ ಎಂದು ಆದೇಶಿಸುವಂತಿಲ್ಲ. ಕೇವಲ ‘ತೀರ್ಮಾನ ತೆಗೆದುಕೊಳ್ಳುವ ಕೆಲಸವನ್ನು ತಡೆಯಬೇಡಿ, ಸಮಯಕ್ಕೆ ಸರಿಯಾಗಿ ಮಾಡಿ’ ಎಂದು ಮಾತ್ರ ಹೇಳಬಹುದು. ಈ ರೀತಿ ನ್ಯಾಯಾಲಯವು ಕಾರ್ಯಾಂಗದ ಅಧಿಕಾರವನ್ನು ಆಕ್ರಮಿಸಿಕೊಳ್ಳದೆ, ಕೇವಲ ಕಾನೂನು ರಚನಾ ಪ್ರಕ್ರಿಯೆಯನ್ನು ರಕ್ಷಿಸುವ ಸೀಮಿತ ಹಸ್ತಕ್ಷೇಪ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್ ನರಸಿಂಹ ಮತ್ತು ಎ.ಎಸ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಸಿ 2025ರ ಸೆಪ್ಟೆಂಬರ್ 11ರಂದು ತನ್ನ ಅಭಿಪ್ರಾಯವನ್ನು ಕಾಯ್ದಿರಿಸಿತ್ತು. ನವೆಂಬರ್ 20ರಂದು ಅದನ್ನು ಪ್ರಕಟಿಸಿದೆ.

2025ರ ಏಪ್ರಿಲ್ 20ರಂದು, ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರಗೊಂಡ 10 ಮಸೂದೆಗಳನ್ನು ರಾಷ್ಟ್ರಪತಿಯ ಪರಿಶೀಲನೆಯ ಕಾರಣ ಹೇಳಿ ಸುದೀರ್ಘ ಸಮಯ ತಡೆಹಿಡಿದು ಇರಿಸಿಕೊಂಡಿದ್ದ ರಾಜ್ಯಪಾಲ ಆರ್‌. ಎನ್‌. ರವಿ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ತೀರ್ಪು ಪ್ರಕಟಿಸುವ ವೇಳೆ, ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಂವಿಧಾನದ 200ನೇ ವಿಧಿಯಡಿ ಹೇಳಲಾದ ರಾಜ್ಯಪಾಲರ ಅಧಿಕಾರ ಮತ್ತು ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು, ರಾಜ್ಯಪಾಲರು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ದುರ್ಬಲಗೊಳಿಸಬಾರದು ಎಂದಿತ್ತು. ಮಸೂದೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ತಡೆಯಲು ಕೆಲವು ನಿರ್ದೇಶನಗಳನ್ನು ಕೂಡ ನೀಡಿತ್ತು. ರಾಜ್ಯಪಾಲರು ತಮಗೆ ಕಳುಹಿಸಲಾದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ದಿಷ್ಟ ಸಮಯ ನಿಗದಿಪಡಿಸಿತ್ತು.

ರಾಜ್ಯಪಾಲರು ‘ವೀಟೋ’ ಅಧಿಕಾರ ಹೊಂದಿಲ್ಲ, ಅಂದರೆ, ಅವರು ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸುಮ್ಮನೆ ತಡೆ ಹಿಡಿದು ಇರಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿತ್ತು. ವಿಧಿ 200ರ ಮೊದಲ ನಿಬಂಧನೆಯ ‘ಸಾಧ್ಯವಾದಷ್ಟು ಬೇಗ’ ಎಂಬ ಪದವು ರಾಜ್ಯಪಾಲರು ಮಸೂದೆಯ ಕುರಿತು ತುರ್ತು ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದನ್ನು ಹೇಳುತ್ತದೆ ಎಂದಿತ್ತು.

ಮಾನ್ಯವಾದ ಸಾಂವಿಧಾನಿಕ ಕಾರಣಗಳಿಲ್ಲದೆ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುವ ಅಥವಾ ಮಸೂದೆಯನ್ನು ಸುಖಾ ಸುಮ್ಮನೆ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರ ಚಲಾಯಿಸಲು ರಾಜ್ಯಪಾಲರಿಗೆ ಅವಕಾಶ ಇಲ್ಲ. ಒಂದಾ ಮಸೂದೆಗೆ ಸಹಿ ಹಾಕಬೇಕು ಅಥವಾ ಹಿಂದಿರುಗಿಸಬೇಕು, ಇಲ್ಲದಿದ್ದರೆ ರಾಷ್ಟ್ರಪತಿಯ ಪರಿಶೀಲನೆಗೆ ಕಳುಹಿಸಬೇಕು ಎಂದು ಸ್ಪಷ್ಟಪಡಿಸಿತ್ತು.

ರಾಜ್ಯಪಾಲರು ಹಿಂದಿರುಗಿಸಿದ ಮಸೂದೆಯನ್ನು ಶಾಸಕಾಂಗ ಪರಿಶೀಲನೆ ನಡೆಸಿ ಮತ್ತೆ ಕಳುಹಿಸಿದರೆ ರಾಜ್ಯಪಾಲರು ಅದಕ್ಕೆ ಸಹಿ ಹಾಕಬೇಕು, ಮತ್ತೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದಿತ್ತು.

ಶಾಸಕಾಂಗ ಮರು ಪರಿಶೀಲನೆ ಮಾಡಿ ಕಳುಹಿಸಿದ ಬಳಿಕವೂ ತಮಿಳುನಾಡಿನ 10 ಮಸೂದೆಗಳನ್ನು ರಾಷ್ಟ್ರಪತಿಯ ಪರಿಶೀಲನೆಗೆಂದು ತಡೆ ಹಿಡಿದು ಇರಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿತ್ತು. ಇದು ‘ಅಧಿಕಾರದ ದುರ್ಬಳಕೆ’ ಎಂದಿತ್ತು.

ಆ 10 ಮಸೂದೆಗಳ ಕುರಿತು ರಾಷ್ಟ್ರಪತಿ ತೆಗೆದುಕೊಂಡ ಯಾವುದೇ ನಂತರದ ಕ್ರಮವು ನಿಲ್ಲುವುದಿಲ್ಲ ಎಂದು ಆದೇಶಿಸಿತ್ತು. ಶಾಸಕಾಂಗವು ಮಸೂದೆಗಳನ್ನು ಮರುಪರಿಶೀಲಿಸಿದ ದಿನಾಂಕದಂದು ರಾಜ್ಯಪಾಲರು ಈ ಮಸೂದೆಗಳಿಗೆ ಒಪ್ಪಿಗೆ ನೀಡಿದ್ದಾರೆ ಎಂದು ಪರಿಗಣಿಸಲಾಗಿದೆ. ಈ ನಿರ್ಧಾರವನ್ನು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯದ ಅಂತರ್ಗತ ಅಧಿಕಾರವನ್ನು ಬಳಸಿಕೊಂಡು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿತ್ತು.

ಆದರೆ, ನವೆಂಬರ್ 20ರ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವು, ಅದರದ್ದೇ ಹಳೆಯ ಅಭಿಪ್ರಾಯವನ್ನು ಅಲ್ಲಗಳೆದಂತಾಗಿದೆ. ಈ ಮೂಲಕ ಜನರಲ್ಲಿ ಗೊಂದಲ ಉಂಟಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯಪಾಲರಿಗೆ ಅಪರಿಮಿತ ಅಧಿಕಾರ ಕೊಟ್ಟಂತಾಗಿದೆ. ಹೊಸ ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್‌.ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ವಾಗತಿಸಿದ್ದಾರೆ.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿಗಳನ್ನು ವಿಧಿಸುವುದು ಅಧಿಕಾರಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ಇಬ್ಬರೂ ವಾದಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ನ ಇತ್ತೀಚಿನ ಅಭಿಪ್ರಾಯದ ಬಳಿಕ, “ಇದು ಕಾರ್ಯಾಂಗದ ಅಧಿಕಾರವನ್ನು ನ್ಯಾಯಾಂಗ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯುತ್ತದೆ” ಎಂದು ಶ್ಲಾಘಿಸಿದ್ದಾರೆ.

ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಸಂಭ್ರಮಿಸಿದ ಬಿಜೆಪಿಗರು

ಬಿಜೆಪಿಯ ಕಾನೂನು ವಿಶ್ಲೇಷಕ ಮತ್ತು ಪರಿಣಮ್ ಲಾ ಅಸೋಸಿಯೇಟ್ಸ್‌ನ ವ್ಯವಸ್ಥಾಪಕ ಪಾಲುದಾರ ಹಿತೇಶ್ ಜೈನ್, “ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪರಿಗಣಿತ ಒಪ್ಪಿಗೆ ಪರಿಕಲ್ಪನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಕ್ಕೆ ಸ್ಥಿರತೆ ಬರುತ್ತದೆ. ಸಂವಿಧಾನದ ನೈತಿಕತೆ ಮತ್ತಷ್ಟು ಬಲಗೊಳ್ಳುತ್ತದೆ. ನ್ಯಾಯಾಂಗ ಪರಿಶೀಲನೆ ಎಂದರೆ ಕೇವಲ ಪರಿಶೀಲನೆ ಮಾಡುವುದು, ಆಡಳಿತ ನಡೆಸುವುದಲ್ಲ ಎಂಬುವುದನ್ನು ಮತ್ತೊಮ್ಮೆ ಗಟ್ಟಿಯಾಗಿ ಹೇಳಲಾಗಿದೆ” ಎಂದಿದ್ದಾರೆ.

TridentX Intel (@TridentxIN) ಎಂಬ ಬಿಜೆಪಿ ಪರ ವಿಶ್ಲೇಷಕ ಸಂಸ್ಥೆಯ ಎಕ್ಸ್‌ ಖಾತೆಯಲ್ಲಿ, “ಸಾಂವಿಧಾನಿಕ ಸಮತೋಲನಕ್ಕೆ ದೊಡ್ಡ ಗೆಲುವು. ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ದೊಡ್ಡ ಹಿನ್ನಡೆ” ಎಂದು ಪೋಸ್ಟ್ ಹಾಕಲಾಗಿದೆ.

ರಾಜಕೀಯ ವಿಶ್ಲೇಷಕ ಎಂದು ಹೇಳಲಾಗುವ JagVyas (@jav_j21) ಎಂಬ ಎಕ್ಸ್‌ ಖಾತೆಯಲ್ಲಿ, “ಸುಪ್ರೀಂ ಕೋರ್ಟ್ ಕೊನೆಗೂ ಸರಿಯಾದ ಮಾರ್ಗಕ್ಕೆ ಬಂದಿದೆ…ಇದು ಮೋದಿ ಯುಗಕ್ಕೆ ಸಿಕ್ಕ ದೊಡ್ಡ ಸಂವಿಧಾನಿಕ ಗೆಲುವು. ಅಧಿಕಾರಗಳ ವಿಭಜನೆಯನ್ನು ಮರುಸ್ಥಾಪಿಸಿ, ನ್ಯಾಯಾಂಗದ ಸಾಹಸಪ್ರಯೋಗಗಳನ್ನು (judicial adventurism) ಕೊನೆಗಾಣಿಸಲಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಸನಾತನಿ ರಾಷ್ಟ್ರೀಯವಾದಿ ಎನ್ನಲಾದ Saravanakumar (@Saravana_2785) ಎಂಬ ಎಕ್ಸ್‌ ಖಾತೆಯಲ್ಲಿ “ಸುಪ್ರೀಂ ಕೋರ್ಟ್ ಈಗ ತಾನೇ ಹಿಂದೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸರಿಪಡಿಸಿಕೊಂಡಿದೆ. I
ಹಿಂದೆ ನ್ಯಾಯಾಲಯಗಳು ತಮ್ಮ ಗಡಿ ಮೀರಿ ರಾಜ್ಯಪಾಲರು/ರಾಷ್ಟ್ರಪತಿಗಳ ಕೆಲಸದಲ್ಲಿ ತಲೆಹಾಕುತ್ತಿದ್ದವು.
ಈ ತೀರ್ಪಿನಲ್ಲಿ ಅದನ್ನು ಸರಿಪಡಿಸಿ, “ರಾಜ್ಯಪಾಲರಿಗೆ ತನ್ನದೇ ಆದ ಚಿಂತನೆ-ನಿರ್ಧಾರದ ಸ್ವಾತಂತ್ರ್ಯ ಇದೆ” ಎಂಬುದನ್ನು ಒಪ್ಪಿಕೊಂಡಿದೆ. ಇದು ಒಳ್ಳೆಯ ಸುಧಾರಣೆ ಮತ್ತು ಸಕಾರಾತ್ಮಕ ಹೆಜ್ಜೆ” ಎಂದು ಶ್ಲಾಘಿಸಲಾಗಿದೆ.

ಇನ್ನುಳಿದಂತೆ ಹಲವು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಸ್ವಾಗತಿಸಲಾಗಿದೆ. ಸಾಂವಿಧಾನಿಕ ಬಿಕ್ಕಟ್ಟನ್ನು ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳ ವಿರುದ್ದ ಕೇಂದ್ರ ಸರ್ಕಾರಕ್ಕೆ ಗೆಲುವು ಎಂಬಂತೆ ಬಿಂಬಿಸಲಾಗಿದೆ.

ನ್ಯಾಯವಾದಿಗಳು ಚಿಂತಕರು ಏನಂದ್ರು?

ಸುಪ್ರೀಂ ಕೋರ್ಟ್‌ನ ಅಭಿಪ್ರಾಯದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಹೈಕೋರ್ಟ್ ನ್ಯಾಯವಾದಿ ಎಸ್‌. ಬಾಲನ್‌, “ಸುಪ್ರೀಂ ಕೋರ್ಟ್ ರಾಜ್ಯಪಾಲರಿಗೆ ಪರಮಾಧಿಕಾರ ಕೊಟ್ಟಿರುವುದು ‘ಸಾಂವಿಧಾನಿಕ ನೈತಿಕತೆ ಅಲ್ಲ” ಎಂದಿದ್ದಾರೆ.

ಭಾರತ ರಾಜ್ಯಗಳ ಒಕ್ಕೂಟ. ರಾಜ್ಯಪಾಲರು ಒಕ್ಕೂಟ ಸರ್ಕಾರದ ಏಜೆಂಟ್‌ಗಳ ರೀತಿ ವರ್ತಿಸಿಕೊಂಡು ಒಕ್ಕೂಟ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದ್ದಾರೆ. ಹಾಗಾಗಿ, ಈ ರಾಜ್ಯಪಾಲ ಹುದ್ದೆಯನ್ನೇ ತೆಗೆದು ಹಾಕಬೇಕು ಎಂದು ಬಾಲನ್ ಅಭಿಪ್ರಾಯಟ್ಟಿದ್ದಾರೆ.

ಇತ್ತೀಚೆಗೆ ಕಾರ್ಪೋರೇಟ್, ಸನಾತನವಾದಿಗಳು ರಾಜ್ಯಪಾಲ ಹುದ್ದೆಗೆ ಬಂದಿದ್ದಾರೆ. ಒಂದು ದೇಶ, ಸನಾತನ ದೇಶ ಮಾಡುವುದು ಅವರ ಉದ್ದೇಶ. ಎಲ್ಲಾ ಕಡೆಗಳಲ್ಲಿ ಆರ್‌ಎಸ್‌ಎಸ್‌ನವರು ರಾಜ್ಯಪಾಲ ಹುದ್ದೆಯಲ್ಲಿದ್ದಾರೆ. ಆರ್‌ಎಎಸ್‌ಎಸ್‌ನವರು ಸಂವಿಧಾನ ವಿರೋಧಿಗಳು, ಅಂತವರು ರಾಜ್ಯಪಾಲರಂತಹ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತರೆ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯದ ಮೂಲಕ ರಾಜ್ಯಪಾಲರಿಗೆ ಪರಮಾಧಿಕಾರ ಕೊಟ್ಟಿದೆ. ಇದನ್ನು ಬಳಸಿಕೊಂಡು ರಾಜ್ಯಪಾಲರು ತಮ್ಮ ಅಜೆಂಡಾ ಸಾಧಿಸುತ್ತಾರೆ. ಹಾಗಾಗಿ, ಇದು ಸಾಂವಿಧಾನಿಕ ನೈತಿಕತೆ ಅಲ್ಲ ಎಂದು ಬಾಲನ್ ಹೇಳಿದ್ದಾರೆ.

ಚಿಂತಕ ಶಿವಸುಂದರ್ ಮಾತನಾಡಿ, ನಿವೃತ್ತಿಗೆ ಮುನ್ನ, ರಾಜ್ಯದ ಮಸೂದೆಗಳಿಗೆ ಒಪ್ಪಿಗೆ ಕೊಡದೆ ಕಾಡಿಸುವ ಕೇಂದ್ರದ ಏಜೆಂಟ್ ರಾಜ್ಯಪಾಲರಿಗೆ ಸಮಯ ಮಿತಿ ವಿಧಿಸಲು ಸಾಧ್ಯವಿಲ್ಲವೆಂದು ತೀರ್ಪು ನೀಡಿ ಭಾರತದ ಫೆಡರಲ್ ಸ್ವರೂಪದ ಇನ್ನಷ್ಟು ಅವನತಿಗೆ ಮತ್ತು ಮೋದಿ ಸರ್ವಾಧಿಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಗವಾಯಿ ಸಾಹೇಬರು ಮಾನ್ಯತೆ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಹೈಕೋರ್ಟ್ ನ್ಯಾಯವಾದಿ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, ಸುಪ್ರೀಂ ಕೋರ್ಟ್ ತಮಿಳುನಾಡು ರಾಜ್ಯಪಾಲರ ಪ್ರಕರಣದಲ್ಲಿ ನೀಡಿದ್ದ ತನ್ನದೇ ಆದೇಶವನ್ನು ಇತ್ತೀಚಿನ ಅಭಿಪ್ರಾಯದ ಮೂಲಕ ಬದಿಗೆ ಸರಿಸಿದೆ. ಇದರಿಂದ ಜನ ಸಾಮಾನ್ಯರಲ್ಲಿ ಸಂವಿಧಾನದ ಮೇಲೆಯೇ ಗೊಂದಲ ಮೂಡುವಂತೆ ಮಾಡಿದೆ ಎಂದಿದ್ದಾರೆ. ಸಾವಿಂಧಾನಿಕ ಬಿಕ್ಕಟ್ಟು ಬಂದಾಗ ಅದನ್ನು ಪರಿಹರಿಸುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿ. ಹೀಗಿರುವಾಗ ಸುಪ್ರೀಂ ಕೋರ್ಟ್‌ ಕೈಚೆಲ್ಲಿ ಕುಳಿತರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯ ತಾಂತ್ರಿಕವಾಗಿ ಸರಿ ಇದ್ದರೂ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ವಿವೇಚನೆ ಬಳಸಬೇಕಿತ್ತು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತನ್ನದೇ ಆದೇಶವನ್ನು ಬದಿಗೆ ಸರಿಸುವ ಮೂಲಕ ಜನರಲ್ಲಿ ದ್ವಂದ್ವ ಉಂಟು ಮಾಡಿದೆ. ಇದರ ಜೊತೆಗೆ ರಾಜ್ಯಪಾಲರಿಗೆ ಪರಮಾಧಿಕಾರ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...