ಕಾವೇರಿ ನದಿ ನೀರು ಹಂಚಿಕೆ ವಿವಾದ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಬೆಳಗ್ಗೆ 10 ಗಂಟೆಗೆ (ಸೆಪ್ಟೆಂಬರ್ 21) ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸಂಸದರು ಭೇಟಿಯಾಗಲಿದ್ದು, ಕಾವೇರಿ ನದಿ ನೀರಿನ ವಾಸ್ತವ ಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ.
ಮತ್ತೊಂದು ಕಡೆ ಸುಪ್ರೀಂಕೋರ್ಟ್ನಲ್ಲಿ ಕಾವೇರಿ ವಿವಾದದ ಕುರಿತು ಅರ್ಜಿ ವಿಚಾರಣೆ ನಡೆಯಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ವಸ್ತುಸ್ಥಿತಿಯನ್ನು ಮಂದಿಟ್ಟು, ಅಂಕಿ ಅಂಶಗಳ ಸಮೇತ ಸಮರ್ಥ ವಾದ ಮಂಡಿಸಲು ರಾಜ್ಯಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕಾವೇರಿ ನೀರಿಗಾಗಿ ರಾಜ್ಯರೈತರ ಪರವಾಗಿ ಸುಪ್ರೀಂಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಕೆಂಪರಾಜು ಮತ್ತು ಆರ್.ಪಿ.ರವಿ ಎಂಬುವರು ರಾಜ್ಯದ ರೈತರ ಪರವಾಗಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲ್ಲಿಸಿರುವ ಅರ್ಜಿಯ ಜತೆಗೆ ರೈತರ ಅರ್ಜಿಯನ್ನು ಸಹ ವಿಚಾರಣೆ ನಡೆಯಲಿದೆ.
ಬುಧವಾರ ದೆಹಲಿ ಖಾಸಗಿ ಹೋಟೆಲ್ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಕೇಂದ್ರ ಸಚಿವರು ಹಾಗೂ ಎಲ್ಲ ಸಂಸದರ ಜತೆ ಸಭೆ ನಡೆಸಿದರು. ಈ ಸಭೆಯಲ್ಲಿ ಕಾವೇರಿ ವಿಚಾರಾಗಿಯೇ ಪ್ರಮುಖವಾಗಿ ಚರ್ಚಿಸಲಾಯಿತು. ಪ್ರಾಧಿಕಾರದ ನಿರ್ಧಾರದಿಂದ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕಿದೆ. ಈ ಹಿನ್ನೆಲೆ ಕೇಂದ್ರ ಸಚಿವರು ಮತ್ತು ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಮತ್ತು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ಗೆ ಭೇಟಿಗೆ ಸಮಯ ಕೊಡಿಸಬೇಕು ಎಂದು ಮನವಿ ಮಾಡಿದ್ದರು.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಗೆ ಸಮಯ ನಿಗದಿಯಾಗಿದೆ. ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಮುಖ್ಯಮಂತ್ರಿ ಮತ್ತು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಗಜೇಂದ್ರ ಸಿಂಗ್ ಶೇಖಾವತ್ರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಆದ್ರೆ ಪ್ರಧಾನಿ ಭೇಟಿಗೆ ಅವಕಾಶ ಸಿಕ್ಕಿಲ್ಲ ಎಂದು ಡಿಸಿಎಂ ಡಿ.ಕೆ,ಶಿವಕುಮಾರ್ ಬೇಸರ ಹೊರಹಾಕಿದ್ದಾರೆ.
ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ: ನಾಳೆ ದೆಹಲಿಯಲ್ಲಿ ಮಹತ್ವದ ಸಭೆ