ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂತೋಷ್ ರಾವ್ಗೆ ನಿರ್ದೋಷಿ ಎಂದು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದ 4 ತಿಂಗಳ ಬಳಿಕ ಸಿಬಿಐ ಈ ಮೇಲ್ಮನವಿ ಸಲ್ಲಿಸಿದೆ. ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂ.16ರಂದು ತೀರ್ಪು ನೀಡಿತ್ತು. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶವನ್ನೂ ನೀಡಲಾಗಿತ್ತು.
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ 2012ರ ಅ.12ರಂದು ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್ ಅವರನ್ನು ಬಂಧಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿಯನ್ನು ನಿರ್ದೋಷಿ ಎಂದು ವಿಚಾರಣಾ ನ್ಯಾಯಾಲಯ ತೀರ್ಪು ನೀಡಿತ್ತು. ಪ್ರಕರಣದಲ್ಲಿ ಸಂತೋಷ್ ರಾವ್ ವಿರುದ್ಧ ಸಿಬಿಐ ಪೂರಕ ಸಾಕ್ಷಿ ನೀಡಲು ವಿಫಲವಾಗಿದೆ ಎಂದು ಹೇಳಿತ್ತು.
ಈ ಮಧ್ಯೆ ಪ್ರಕರಣದ ಮರು ತನಿಖೆಗೆ ಕೋರಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. 2012ರ ಅ.9ರ ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು. ಮರು ದಿನ ರಾತ್ರಿ ಮಣ್ಣಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು.
ಸೌಜನ್ಯ ಪ್ರಕರಣದಲ್ಲಿ 2012ರಲ್ಲಿ ಸಂತೋಷ್ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದರು. ಬಳಿಕ 2017ರಲ್ಲಿ ಸಂತೋಷ್ ರಾವ್ಗೆ ಜಾಮೀನು ದೊರೆತಿತ್ತು. ಮಗ ಜೈಲು ಸೇರಿದ ಬಳಿಕ ಕೊರಗಿನಲ್ಲಿ 2016ರಲ್ಲಿ ಸಂತೋಷ್ ರಾವ್ ತಾಯಿ ಕೊನೆಯುಸಿರೆಳೆದಿದ್ದರು. ಸುಮಾರು 38 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ರಾವ್ ತಂದೆ ಖಿನ್ನತೆಗೆ ಒಳಗಾಗಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಸಂತೋಷ್ ರಾವ್ ಎಲ್ಲಿಯೂ ಕಾಣಿಸಿಕೊಳ್ಳದೆ ತನ್ನಷ್ಟಕ್ಕೆ ತಾನೇ ದೇವಸ್ಥಾನದಲ್ಲಿ ಧಾರ್ಮಿಕ ಸೇವೆ ಮಾಡುತ್ತಾ ಉಳಿದುಕೊಂಡಿದ್ದರು.
ಸಂತೋಷ್ ರಾವ್ ನಿರ್ದೋಷಿ ಎಂಬ ತೀರ್ಪಿನ ಬೆನ್ನಲ್ಲೇ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕರಾವಳಿಯ ವಿವಿಧೆಡೆ ಭಾರೀ ಪ್ರತಿಭಟನೆ ನಡೆದಿದೆ.
ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಬಂಧನ