‘ಪ್ರಶ್ನೆಗಾಗಿ ನಗದು ಆರೋಪ’ಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ದ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಾಥಮಿಕ ತನಿಖೆ ಆರಂಭಿಸಿದೆ.
ಲೋಕಪಾಲರ ನಿರ್ದೇಶನದ ಮೇರೆಗೆ ಮಹುವಾ ವಿರುದ್ದ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಇದರ ಫಲಿತಾಂಶದ ಆಧಾರದ ಮೇಲೆ ಮಹುವಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆ ಎಂದು ಸಿಬಿಐ ನಿರ್ಧರಿಸಲಿದೆ.
ಪ್ರಾಥಮಿಕ ತನಿಖೆ ವೇಳೆ ಸಿಬಿಐ ಮಹುವಾ ಅವರನ್ನು ಬಂಧಿಸಲು ಅಥವಾ ಅವರಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ಪರಿಶೀಲನೆ ನಡೆಸಲು ಸಾಧ್ಯವಿಲ್ಲ. ಆದರೆ, ಮಹುವಾ ಅವರಿಂದ ಮಾಹಿತಿ ಪಡೆಯಬಹುದು, ದಾಖಲೆಗಳನ್ನು ಪರಿಶೀಲಿಸಬಹುದು ಅವರನ್ನು ವಿಚಾರಣೆಗೆ ಒಳಪಡಿಸಬಹುದು. ಲೋಕಪಾಲರ ಆದೇಶದ ಮೇರೆಗೆ ಈ ತನಿಖೆ ಆರಂಭಿಸಿರುವುದರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರದಿ ಸಲ್ಲಿಸಲಾಗುತ್ತದೆ.
ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಸಿಬಿಐಗೆ ದೂರು ಸಲ್ಲಿಸಿದ್ದರು.
ದೇಹದ್ರಾಯ್ ಅವರು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೂ ಈ ಸಂಬಂಧ ಪತ್ರ ಬರೆದಿದ್ದಾರೆ. ದುಬೆ ಈಗಾಗಲೇ ಮಹುವಾ ಮೊಯಿತ್ರಾ ವಿರುದ್ದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಲೋಕಪಾಲರಿಗೆ ದೂರು ನೀಡಿದ್ದು, ಈ ಸಂಬಂಧ ಲೋಕಸಭೆಯ ನೈತಿಕ ಸಮಿತಿ ಮಹುವಾ ಮೊಯಿತ್ರಾ ಅವರ ಹೇಳಿಕೆ ದಾಖಲಿಸಿಕೊಂಡಿದೆ.
ಇದನ್ನೂ ಓದಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ