ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.
ಕೆಲದಿನಗಳ ಹಿಂದೆಯಷ್ಟೇ ಸಿಬಿಐ ವಿಚಾರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದಾಗ ಅದರ ವಿರುದ್ಧ ಡಿಕೆಶಿ ಕೋರ್ಟ್ನಲ್ಲಿ ರಿಟ್ ಸಲ್ಲಿಸಿದ್ದರು. ಅಷ್ಟರಲ್ಲಾಗಲೇ ಇಂದು 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಯಾವುದೇ ಸುಳಿವು ಕೊಡದೇ ದಾಳಿ ನಡೆಸಿದ್ದಾರೆ.
ಸಿಬಿಐ ಎಸ್ಪಿ ಥಾಮ್ಸನ್ ಜೋಷ್ ನೇತೃತ್ವದಲ್ಲಿ ಬೆಳಿಗ್ಗೆ 6 ಗಂಟೆಗೆ ಆರಂಭವಾದ ದಾಳಿ 10 ಗಂಟೆಯಾದರೂ ಮುಂದುವರೆದಿದ್ದು, ಶೋಧ ಮುಂದುವರೆಯುತ್ತಿದೆ. ಯಾವುದೇ ಮಾಹಿತಿಯನ್ನು ಸಿಬಿಐ ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ಆ ಮನೆಗಳ ಮೇಲೆ ಮಾಧ್ಯಮದವರನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶ ನಿರಾಕರಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಮನೆ ಮೇಲೆ @narendramodi ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ @BJP4India ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.
— Siddaramaiah (@siddaramaiah) October 5, 2020
ಕಳೆದ ವರ್ಷ ಕೂಡ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಡಿಕೆ ಶಿವಕುಮಾರ್ ಹಲವು ದಿನ ಜೈಲಿನಲ್ಲಿದ್ದರು. ಕೊನೆಗೆ ಅಕ್ಟೋಬರ್ 23 ರಂದು ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್