ಮೇ 4ರಂದು ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(CBI)ಕ್ಕೆ ವರ್ಗಾಯಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಈ ಪ್ರಕರಣವು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಗೃಹ ವ್ಯವಹಾರಗಳ ಸಚಿವಾಲಯವು ಪ್ರಕರಣದ ವಿಚಾರಣೆಯನ್ನು ಮಣಿಪುರದ ಹೊರಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ಗೆ ಒತ್ತಾಯಿಸಿದೆ. ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದ ಆರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡುವಂತೆಯೂ ನ್ಯಾಯಾಲಯಕ್ಕೆ ಸಚಿವಾಲಯ ಒತ್ತಾಯಿಸಿ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಶುಕ್ರವಾರ ಈ ಮಣಿಪುರ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.
ಜುಲೈ 19ರಂದು, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಕುಕಿ ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4ರಂದು ಕಾಂಗ್ಪೊಕ್ಪಿಯ ಬಿ ಫೈನೋಮ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಆ ವೀಡಿಯೊದಲ್ಲಿ ಕಂಡುಬರುವ ಇಬ್ಬರು ಸೇರಿದಂತೆ ಮೂವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಪೊಲೀಸ್ ದೂರಿನ ಪ್ರಕಾರ ಮಹಿಳೆಯರಲ್ಲಿ ಒಬ್ಬರನ್ನು “ಕ್ರೂರವಾಗಿ ಸಾಮೂಹಿಕ ಅತ್ಯಾಚಾರ” ಮಾಡಲಾಗಿದೆ ಎಂದು ಹೇಳಲಾಗಿದೆ.
ಮೇ 18ರಂದು ಈ ಪ್ರಕರಣದ ಎಫ್ಐಆರ್ ದಾಖಲಾಗಿತ್ತು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವಾಯರಲ್ ಆಗುವವರೆಗೂ ಯಾರೊಬ್ಬರ ಬಂಧನವೂ ಆಗಿರಲಿಲ್ಲ. ವೀಡಿಯೊ ವೈರಲ್ ಆದಬಳಿಕ ಜನಾಕ್ರೋಶಕ್ಗಕೆ ಕಾರಣವಾಯಿತು. ಆ ಎಚ್ಚತ್ತ ಸರ್ಕಾರ ಮತ್ತು ಪೊಲೀಸ್ ಇಲಾಖೆಯು, ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.
ಜುಲೈ 20ರಂದು, ಈ ಘಟನೆಯ ಕುರಿತು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಮಾತನಾಡಿತು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿತ್ತು ಮತ್ತು ಈ ವಿಷಯದಲ್ಲಿ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ನಾವೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಜುಲೈ 28ರೊಳಗೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅವರು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪಟ್ಟಿ ಮಾಡಲು ಕೇಂದ್ರ ಮತ್ತು ಮಣಿಪುರ ಸರ್ಕಾರಕ್ಕೆ ಸುಪ್ರೀಂ ಸೂಚಿಸಿತ್ತು.
ಕೇಂದ್ರವು ಗುರುವಾರ ಸಲ್ಲಿಸಿದ ಅಫಿಡವಿಟ್ನಲ್ಲಿ ”ಆರೋಪಿಗಳನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಮತ್ತು ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗೆ ವಹಿಸಲಾಗಿದೆ” ಎಂದು ತಿಳಿಸಿದೆ.
”ಕೇಂದ್ರ ಸರ್ಕಾರವು ಈಗಿನ ಅಪರಾಧಗಳನ್ನು ತುಂಬಾ ಘೋರವೆಂದು ಪರಿಗಣಿಸುತ್ತದೆ, ಅದು ಗಂಭೀರವಾಗಿ ಪರಿಗಣಿಸಲು ಅರ್ಹವಾಗಿದೆ” ಎಂದು ತಿಳಿಸಿದೆ.
ಪರಿಹಾರ ಶಿಬಿರಗಳಲ್ಲಿ ಮಾನಸಿಕ ಆರೋಗ್ಯ ನೆರವು ನೀಡಲು ತಂಡಗಳನ್ನು ರಚಿಸಲಾಗಿದೆ ಎಂದು ಅದು ಹೇಳಿದೆ. ಅಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು, ಅಧಿಕಾರ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ಅಂತಹ ಎಲ್ಲಾ ಪ್ರಕರಣಗಳ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ವರದಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಮೇ 4 ರ ಘಟನೆಯನ್ನು ರೆಕಾರ್ಡ್ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ವೀಡಿಯೊವನ್ನು ರೆಕಾರ್ಡ್ ಮಾಡಲು ಬಳಸಿದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮಣಿಪುರದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಮೇ 3 ರಿಂದ ಜನಾಂಗೀಯ ಘರ್ಷಣೆಗಳು ನಡೆಯುತ್ತಲಿವೆ. ವ್ಯಾಪಕವಾದ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ರಾಜ್ಯದಲ್ಲಿ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ಈ ಹಿಂಸಾಚಾರದಲ್ಲಿ ಈ ವರೆಗೂ 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ.
ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿರುವ INDIA ಒಕ್ಕೂಟದ ಸಂಸದರು