Homeಮುಖಪುಟಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ...

ಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ ಕರೆ

- Advertisement -
- Advertisement -

“ಆಡಳಿತ ಸೇವೆಗಳು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿ ಇರಬೇಕು” ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಿರಾಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್‌ ವಿರೋಧ ಪಕ್ಷಗಳ ಬೆಂಬಲಕ್ಕೆ ಮೊರೆ ಹೋಗಿದ್ದಾರೆ.

“ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವ ಅಗತ್ಯವಿದೆಯೇ?” ಎಂದು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೇ 29 ರಂದು ದೆಹಲಿಯಲ್ಲಿ ಪಕ್ಷದ ಮುಖಂಡರ ಸಭೆ ಕರೆದಿದ್ದಾರೆ.

ಈ ಬಗ್ಗೆ ಚರ್ಚಿಸಲು ಖರ್ಗೆ ಅವರು ಪಕ್ಷದ ಮುಖಂಡರ ಸಭೆಯನ್ನು ಪಕ್ಷದ ಮೇ 29ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಸುಗ್ರೀವಾಜ್ಞೆ ವಿಚಾರವಾಗಿ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಸಭೆ ಮುನ್ನೆಲೆಗೆ ಬಂದಿದೆ.

ಶುಕ್ರವಾರ ಟ್ವೀಟ್ ಮಾಡಿರುವ ಕೇಜ್ರಿವಾಲ್, “ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಅಪ್ರಜಾಸತ್ತಾತ್ಮಕ, ಅಸಾಂವಿಧಾನಿಕ ಸುಗ್ರೀವಾಜ್ಞೆಯ ವಿರುದ್ಧ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಪಡೆಯಲು ಮತ್ತು ಫೆಡರಲ್ ರಚನೆಯ ಮೇಲಿನ ದಾಳಿಯ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯ ಕೋರಿರುವೆ” ಎಂದು ತಿಳಿಸಿದ್ದಾರೆ.

ಎಎಪಿ ನಾಯಕರ ಮನವಿಯ ನಂತರ, ಕಾಂಗ್ರೆಸ್ ಮೂಲಗಳು ಪ್ರತಿಕ್ರಿಯಿಸಿದ್ದು, “ಅವರ ಮನವಿಯನ್ನು ಕಾಂಗ್ರೆಸ್ ಇನ್ನೂ ಪರಿಗಣಿಸುತ್ತಿದೆ” ಎಂದಿವೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಈಗಾಗಲೇ ಪ್ರತಿಕ್ರಿಯಿಸಿದ್ದು, “ಕಾಂಗ್ರೆಸ್ ಪಕ್ಷವು ಸುಗ್ರೀವಾಜ್ಞೆಯ ಸಂಬಂಧ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಪಕ್ಷವು ಕಾನೂನಿನ ನಿಯಮದಲ್ಲಿ ನಂಬಿಕೆ ಹೊಂದಿದೆ. ಅದೇ ಸಮಯದಲ್ಲಿ ಅನಗತ್ಯ ಮುಖಾಮುಖಿ, ರಾಜಕೀಯ ವಿರೋಧಿಗಳ ವಿರುದ್ಧ ಸುಳ್ಳುಗಳ ಆಧಾರದ ಮೇಲೆ ಪ್ರಚಾರಗಳನ್ನು ನಡೆಸುವುದನ್ನು ಕ್ಷಮಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಮತ್ತು ಪಂಜಾಬ್‌ನ ಹಲವು ಕಾಂಗ್ರೆಸ್ ನಾಯಕರು ಕೇಜ್ರಿವಾಲ್ ಅವರನ್ನು ಬೆಂಬಲಿಸದಂತೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಅಜಯ್ ಮಾಕನ್, ಸಂದೀಪ್ ದೀಕ್ಷಿತ್ ಮತ್ತು ಸುಖಜೀಂದರ್ ಸಿಂಗ್ ರಾಂಧವಾ ಅವರು ಪ್ರತಿಕ್ರಿಯಿಸಿ, “ಕಾಂಗ್ರೆಸ್‌ ಪಕ್ಷವು ಎಎಪಿಗೆ ಬೆಂಬಲ ನೀಡಬಾರದು” ಎಂದಿದ್ದಾರೆ.

ಕೇಜ್ರಿವಾಲ್ ಈಗಾಗಲೇ ಮೇ 21ರಂದು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್, ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರೂ ನಾಯಕರು ಸುಗ್ರೀವಾಜ್ಞೆ ವಿಚಾರದಲ್ಲಿ ಎಎಪಿಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಮಂಗಳವಾರ ಕೇಜ್ರಿವಾಲ್ ಅವರು ಪಶ್ಚಿಮ ಬಂಗಾಳಕ್ಕೆ ತೆರಳಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಬ್ಯಾನರ್ಜಿ ಅವರು ಎಎಪಿ ನಾಯಕರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಎಎಪಿ ನಾಯಕರು ಮಹಾರಾಷ್ಟ್ರಕ್ಕೆ ತೆರಳಿ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಲ್ಲಿಯೂ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಕೇಜ್ರಿವಾಲ್ ಅವರ ಪಕ್ಷಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ಭಾರತ್ ರಾಷ್ಟ್ರ ಸಮಿತಿ ನಾಯಕ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಲು ಹೈದರಾಬಾದ್‌ಗೆ ತೆರಳಲಿದ್ದು, ಈ ವಿಷಯದ ಬಗ್ಗೆ ಬೆಂಬಲ ಕೋರಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದೇನು?

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿತ್ತು. ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿತ್ತು.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಹೇಳಿದ್ದಾರೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...