ದೇಶದ ಉನ್ನತ ಚುನಾವಣಾ ಅಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡುವ ಕಾನೂನನ್ನು ತರಲು ಮಸೂದೆಯನ್ನು ಕೇಂದ್ರವು ರಾಜ್ಯಸಭೆಯ ಮುಂದಿಟ್ಟಿದೆ.ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ವಿಧಾನವನ್ನು ಸೂಚಿಸಲು ಕೇಂದ್ರ ಸರ್ಕಾರವು ಮಸೂದೆಯನ್ನು ಮಂಡಿಸಲಿದೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಗಳ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ- 2023, ಇಂದು ರಾಜ್ಯಸಭೆಯಲ್ಲಿ ಮಂಡನೆಗೆ ಬರಲಿದೆ.ಇಂದು ರಾಜ್ಯಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಲಿದ್ದಾರೆ ಎಂದು ವರದಿಯಾಗಿದೆ.
ಉನ್ನತ ಚುನಾವಣಾ ಆಯೋಗದ ಅಧಿಕಾರಿಗಳನ್ನು ರಾಷ್ಟ್ರಪತಿಗಳು ಒಳಗೊಂಡ ಸಮಿತಿಯ ಶಿಫಾರಸಿನ ಮೇರೆಗೆ ನೇಮಕ ಮಾಡಲಾಗುತ್ತದೆ.ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಸಂಪುಟ ಸಚಿವರು ಈ ಆಯ್ಕೆ ಸಮಿತಿಯ ಭಾಗವಾಗಲಿದ್ದಾರೆ ಎಂಬುವುದನ್ನು ಮಸೂದೆ ಹೇಳುತ್ತಿದ್ದು, ಸಿಜೆಐ ಅವರನ್ನು ಆಯ್ಕೆ ಸಮಿತಿಯಿಂದ ಕೈ ಬಿಡಲಿದೆ ಎಂದು ವರದಿ ತಿಳಿಸಿದೆ.
ಪ್ರಧಾನ ಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್ನ ಮಾರ್ಚ್ 2023ರಲ್ಲಿ ಹೇಳಿತ್ತು.ಆದರೆ ಈ ತೀರ್ಪನ್ನು ಮಸೂದೆಯು ಬದಲಾಯಿಸಲಿದೆ.ಇದರಿಂದಾಗಿ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರಕಾರದ ಮಧ್ಯೆ ಮತ್ತೆ ಹೊಸ ವಿವಾದ ಪ್ರಾರಂಭವಾಗುವ ಸಾಧ್ಯತೆ ಇದೆ.
ಇದನ್ನು ಓದಿ:ಲೋಕಸಭೆ ದಾಖಲೆಯಿಂದ ‘ಭಾರತ ಮಾತೆ’ ಗೆ ಸಂಬಂಧಿಸಿದ ರಾಹುಲ್ ಗಾಂಧಿ ಟೀಕೆ ಕಡಿತ