ಚೈತ್ರಾ ಹಾಗೂ ಆಕೆಯ ಸಹಚರರು ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೂರ್ಣಗೊಳಿಸಿದ್ದು, ಈ ಸಂಬಂಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರಿಗೆ ಚೈತ್ರಾ ಹಾಗೂ ಆಕೆಯ ಸಹಚರರು ಕೋಟ್ಯಂತರ ರೂ. ವಂಚಿಸಿದ್ದಾರೆ ಎನ್ನುವ ಸುದ್ಧಿ ಭಾರೀ ಸದ್ದು ಮಾಡಿತ್ತು.
ಈ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಚೈತ್ರಾ, ಗಗನ್, ಹಾಲಶ್ರೀ ಸ್ವಾಮೀಜಿ, ರಮೇಶ್, ಪ್ರಜ್ವಲ್, ಶ್ರೀಕಾಂತ್, ಪ್ರಸಾದ್ ಬೈಂದೂರು ಸೇರಿ 9ಜನ ಆರೋಪಿಗಳ ವಿರುದ್ಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರು 5 ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಚೈತ್ರಾ ಹಾಗೂ ಸಹಚರರ ವಿರುದ್ಧ ಉದ್ಯಮಿ ಗೋವಿಂದಬಾಬು ಪೂಜಾರಿಯವರು ದೂರು ನೀಡಿದ್ದರು.
ಈ ಸಂಬಂಧ ತನಿಖೆ ನಡೆಸಿದ ಸಿಸಿಬಿ ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಚೈತ್ರಾ, ಗಗನ್, ದೇವರಾಜ್, ರಮೇಶ್, ಹಾಗೂ ಶ್ರೀಕಾಂತ್ನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದರೆ. ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಒಡಿಶಾದಲ್ಲಿ ಬಂಧಿಸಿ ಕರೆತರಲಾಗಿತ್ತು. ತನಿಖೆಯಲ್ಲಿ ಉದ್ಯಮಿಯನ್ನು ಉದ್ದೇಶಪೂರ್ವಕ ಹಾಗೂ ವ್ಯವಸ್ಥಿತವಾಗಿ ಸಂಚು ರೂಪಿಸಿ ವಂಚಿಸಿರುವ ಸಾಕ್ಷಾಯಧಾರಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್ಗೆ ಮನವಿ