ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಆಂಧ್ರ ಪ್ರದೇಶದ ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಚಂದ್ರಬಾಬು ನಾಯ್ಡು ಅವರನ್ನು ಮಧ್ಯರಾತ್ರಿ 1.20ರ ಸುಮಾರಿಗೆ ಜೈಲಿಗೆ ಕಳುಹಿಸಲಾಗಿದೆ ಎಂದು ಪೂರ್ವ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಜಗದೀಶ್ ತಿಳಿಸಿದ್ದಾರೆ.
ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಇರಿಸಲಾಗಿದ್ದು, ನ್ಯಾಯಾಂಗ ಬಂಧನದ ಅವಧಿಯಲ್ಲಿ ನಾಯ್ಡು ಅವರಿಗೆ ನ್ಯಾಯಾಲಯವು ಮನೆ ಆಹಾರ, ಔಷಧಿ ಮತ್ತು ವಿಶೇಷ ಕೊಠಡಿ ವ್ಯವಸ್ಥೆಗೆ ಅನುಮತಿ ನೀಡಿದೆ. 73 ವರ್ಷದ ಮಾಜಿ ಮುಖ್ಯಮಂತ್ರಿ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಜೈಲಿನೊಳಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ನಾಯ್ಡು ಅವರ ಮಗ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ತಂದೆಯನ್ನು ಜೈಲು ಗೇಟ್ಗಳವರೆಗೆ ಹಿಂಬಾಲಿಸಿಕೊಂಡು ಬಂದಿರುವುದು ಕಂಡು ಬಂದಿದೆ.
ಬಂಧನ ಆದೇಶದ ವೇಳೆ ನಾಯ್ಡು ವಿರುದ್ಧದ ಆರೋಪಗಳಿಗೆ ಆಧಾರಗಳಿವೆ ಮತ್ತು ತನಿಖೆಯನ್ನು ಪೂರ್ಣಗೊಳಿಸಲು 24 ಗಂಟೆಗಳು ಸಾಕಾಗುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಕೌಶಲ್ಯಾಭಿವೃದ್ಧಿ ನಿಗಮದ 371 ಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ನಂದ್ಯಾಲದಲ್ಲಿ ನಾಯ್ಡು ಅವರನ್ನು ಬಂಧಿಸಲಾಗಿತ್ತು. ಆಂಧ್ರಪ್ರದೇಶ ಅಪರಾಧ ತನಿಖಾ ವಿಭಾಗದ ಪೊಲೀಸರು, 73 ವರ್ಷದ ಚಂದ್ರಬಾಬು ನಾಯ್ಡು ವಿಚಾರಣೆಯ ಸಂದರ್ಭದಲ್ಲಿ ಸಹಕಾರ ನೀಡಿಲ್ಲ ಮತ್ತು ಕೆಲವು ವಿಷಯಗಳು ನೆನಪಿಲ್ಲ ಎಂದು ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿ: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ