ಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ಶುಕ್ರವಾರ ವಿಜಯವಾಡದ ಎಸಿಬಿ ನ್ಯಾಯಾಲಯವು ಸೆಪ್ಟೆಂಬರ್ 24 ರವರೆಗೆ ವಿಸ್ತರಿಸಿದೆ.
ಪೊಲೀಸರು ನಾಯ್ಡು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ಹಿಂದೆ ವಿಧಿಸಲಾಗಿದ್ದ ಬಂಧನದ ಅವಧಿ ಸೆಪ್ಟೆಂಬರ್ 22ಕ್ಕೆ ಕೊನೆಗೊಂಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿಜಯವಾಡದ ಎಸಿಬಿ ನ್ಯಾಯಾಲಯವು ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರೆಸಿದೆ.
ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನವೋಲು ಸುಧಾಕರ್ ರೆಡ್ಡಿ ಪಿಟಿಐಗೆ ಮಾತನಾಡಿ, ”ಇಲ್ಲಿನ ಭ್ರಷ್ಟಾಚಾರ ನಿಗ್ರಹ ದಳದ ವಿಶೇಷ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿಯ ಬಂಧನವನ್ನು ಎರಡು ದಿನಗಳವರೆಗೆ ವಿಸ್ತರಿಸಿದೆ” ಎಂದು ಹೇಳಿದ್ದಾರೆ.
ಈ ಮಧ್ಯೆ ನಾಯ್ಡು ಸಲ್ಲಿಸಿರುವ ಎಫ್ಐಆರ್ ರದ್ದು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು ಮಧ್ಯಾಹ್ನ 1:30 ಕ್ಕೆ ನಿಗದಿಪಡಿಸಿದೆ.
ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಅವರು ಹಗರಣದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಇದಕ್ಕೂ ಮುನ್ನ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿ ಆಂಧ್ರಪ್ರದೇಶ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 22ಕ್ಕೆ ಮುಂದೂಡಿತ್ತು.
ನಾಯ್ಡು ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಟಿಡಿಪಿ ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಎಪಿ ವಿಧಾನಸಭೆಯನ್ನು ಅಲ್ಪಾವಧಿಗೆ ಮುಂದೂಡಲಾಯಿತು. ಇದು ಸತತ ಎರಡನೇ ದಿನವೂ ವಿಧಾನಸಭೆ ಕಲಾಪಕ್ಕೆ ಅಡ್ಡಿ ಉಂಟಾಯಿತು.
ಇದನ್ನೂ ಓದಿ: ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್