Homeಕರ್ನಾಟಕನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

- Advertisement -
- Advertisement -

ನಮ್ಮ ಪ್ರೀತಿಯ ಚಂದ್ರಶೇಖರ ಪಾಟೀಲರು (ಚಂಪಾ, ಜೂನ್‌ 18, 1939– ಜನವರಿ 10, 2022) ಇಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಲ್ಲಿ ನಿಧನರಾಗಿದ್ದಾರೆ. ಅವರು 1980ರ ಬಂಡಾಯ ಚಳುವಳಿಯಲ್ಲಿ ಬರಗೂರರೊಡಗೂಡಿ ನಮಗೆಲ್ಲ ಮಾರ್ಗದರ್ಶನ ಮಾಡಿದವರು. ಚಂಪಾ ನಿಧನದೊಂದಿಗೆ ಜನಪರ ಚಳವಳಿಯ ಇನ್ನೊಂದು ಕೊಂಡಿ ಕಳಚಿತು. ನನ್ನಂಥ ಹಲವರು ಏನಾದರೂ ಚಿಕ್ಕ ಪುಟ್ಟ ಪ್ರತಿಭಟನೆಯ ಕಿಚ್ಚು ಉಳಿಸಿಕೊಂಡಿದ್ದರೆ ಅದಕ್ಕೆ ಚಂಪಾ ಮತ್ತು ಅವರು ತರುತ್ತಿದ್ದ ಸಂಕ್ರಮಣ ಪತ್ರಿಕೆ ಕಾರಣ. ಕವಿ, ನಾಟಕಕಾರ, ವಿಮರ್ಶಕ, ಭಾಷಣಕಾರ ಮತ್ತು ಕನ್ನಡ ಪರ ಹೋರಾಟಗಾರರಾಗಿ ಅವರು ಸದಾ ನಮ್ಮ ನೆನಪಲ್ಲಿ ಉಳಿಯುತ್ತಾರೆ.

ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, 1960ರಲ್ಲಿ ಬಿ.ಎ. ಪೂರೈಸಿದರು. 1962ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದರು. 1996ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು. 1980-83ರ ಅವಧಿಯಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣೆ ನೀಡಿದರು. ಗೋಕಾಕ ಚಳವಳಿಯು ಅವರನ್ನು ನಾಡಿನ ಪ್ರಮುಖ ಹೋರಾಟಗಾರರೆಂದು ಗುರುತಿಸುವಂತೆ ಮಾಡಿತು. ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಅವರು ಸಾಹಿತಿಗಳ ಮೈ ಚಳಿ ಬಿಡಿಸಿದರು.

ಮಾತೃಭಾಷಾ ಮಾಧ್ಯಮ ಚಳುವಳಿಗೆ ಚಂಪಾ ಕೊಡುಗೆ ಬಹಳ ದೊಡ್ಡದು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, ಬೇಕಿದ್ದರೆ ಇಂಗ್ಲಿಷನ್ನು ಪ್ರಾಥಮಿಕ 5ನೇ ತರಗತಿಯಿಂದ ಕಲಿಸಬೇಕು, ಕೇಂದ್ರ ಪಠ್ಯಕ್ರಮದ ಮಾಧ್ಯಮಗಳ ಶಾಲೆಗಳು ಕರ್ನಾಟಕದಲ್ಲಿದ್ದರೆ ಅವು ಕನ್ನಡವನ್ನು ಕಲಿಸಬೇಕು- ಎಂಬ ವಿಷಯಗಳ ಬಗ್ಗೆ ಚಂಪಾ ಅವರು ನಿರಂತರವಾಗಿ ಹೋರಾಡಿದರು. ಕನ್ನಡ ಮಾಧ್ಯಮದಲ್ಲಿ ಶಾಲೆಯನ್ನು ನಡೆಸಲು ಅನುಮತಿ ಪಡೆದು ಆಂಗ್ಲಮಾಧ್ಯಮದಲ್ಲಿ ಶಾಲೆ ನಡೆಸುತ್ತಿದ್ದ ಸುಮಾರು 2215 ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಿಸುವಲ್ಲಿ ಚಂಪಾ ಅವರು ಯಶಸ್ವಿಯಾಗಿದ್ದರು.

1979ರಲ್ಲಿ ಬಂಡಾಯ ಚಳವಳಿಯು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಹಿಷ್ಕಾರ ಹಾಕಿದರೂ ಚಂಪಾ ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ( ನವೆಂಬರ್ 2004ರಿಂದ 2008ರವರೆಗೆ) ಸೇವೆ ಸಲ್ಲಿಸಿದರು. ಅವರ ನೇತೃತ್ವದಲ್ಲಿ ನಡೆದ ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಅನೇಕ ಘಟನೆಗಳಿಗೆ ಸಾಕ್ಷಿಯಾಯಿತು. ಕಸಾಪವನ್ನು ಜನರ ಹತ್ತಿರ ಕೊಂಡೊಯ್ಯಲು ಅವರು ಮಾಡಿದ ಕೆಲಸಗಳು ಹಲವು. ಅದರಲ್ಲಿ ಅವರು ಚಾಲ್ತಿಗೆ ತಂದ ಶನಿವಾರದ ಪುಸ್ತಕಸಂತೆ ಕಾರ್ಯಕ್ರಮವೂ ಒಂದು. ಪ್ರತಿ ಶನಿವಾರವೂ ಪರಿಷತ್ತಿನ ಅಂಗಳದಲ್ಲಿ ಕನ್ನಡ ಪುಸ್ತಕ ಪ್ರಕಾಶಕರನ್ನು ಮತ್ತು ಮಾರಾಟಗಾರರನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಓದುಗರಿಗೆ ಪುಸ್ತಕಗಳು ದೊರೆಯುವಂತೆ ವ್ಯವಸ್ಥೆ ಮಾಡಿದರು. ಈ ಪುಸ್ತಕಸಂತೆಯಲ್ಲಿ ಹೊಸ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರ ಜತೆಗೆ ಹಳೆ ಪುಸ್ತಕ ವ್ಯಾಪಾರಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಅಷ್ಟೇ ಅಲ್ಲದೆ ತಮ್ಮ ಪುಸ್ತಕಗಳನ್ನು ತಾವೇ ಪ್ರಕಟಿಸುತ್ತಿದ್ದ ಲೇಖಕರೂ ಇಲ್ಲಿ ತಮ್ಮ ಪುಸ್ತಕಗಳನ್ನು ತಂದು ಮಾರುತ್ತಿದ್ದರು. ಅಪರೂಪದ ಮತ್ತು ಅಲಭ್ಯ ಗ್ರಂಥಗಳು ಇಲ್ಲಿ ಸಿಗುತ್ತಿದ್ದವು. ಇದರ ಜತೆಗೆ ಪರಿಷತ್ತಿನ ಮುಂಭಾಗದಲ್ಲಿ ಹಾಡು, ನೃತ್ಯ, ಭಾಷಣ ಇತ್ಯಾದಿ ಕಾರ್ಯಕ್ರಮಗಳೂ ನಡೆದುವು. ಅವರ ಅಧಿಕಾರಾವಧಿ ಮುಗಿಯುತ್ತಿದ್ದಂತೆ ಅದು ಯಾಕೋ ನಿಂತು ಹೋಯಿತು.

ಬಾನುಲಿ, ಮಧ್ಯಬಿಂದು, ಹೂವು ಹಣ್ಣು ತಾರೆ, ಓ ಎನ್ನ ದೇಶ ಬಾಂಧವರೇ, ಗುಂಡಮ್ಮನ ಹಾಡು ಮೊದಲಾದುವು ಅವರ ಕವನ ಸಂಗ್ರಹಗಳು. ಕೊಡೆಗಳು, ಗೋಕರ್ಣದ ಗೌಡಶಾನಿ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ಮೊದಲಾದುವು ಅವರ ಜನಪ್ರಿಯ ನಾಟಕಗಳು. ಅವರ ಕೆಲವು ನಾಟಕಗಳಲ್ಲಿ ನಾನು ಅಭಿನಯಿಸಿದ್ದೂ ಉಂಟು. ಬೇಂದ್ರೆ-ನಾನು ಕಂಡಂತೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ, ಚಂಪಾದಕೀಯ, ಮೊದಲಾದುವು ಅವರ ಇತರ ಕೃತಿಗಳು.

ನವ್ಯ ಸಾಹಿತ್ಯ ಸಂದರ್ಭದಲ್ಲಿ ಗೋಪಾಲಕೃಷ್ಣ ಅಡಿಗರನ್ನು ʼ ಒಂದು ಜನಾಂಗದ ಕಣ್ಣು ತೆರೆಸಿದʼ ಕವಿ ಎಂದು ಕೊಂಡಾಡಲಾಗುತ್ತಿತ್ತು. ಆದರೆ ನಾವೆಲ್ಲರೂ ಸಂಕ್ರಮಣ ಪತ್ರಿಕೆಯ ಮೂಲಕ ಅನೇಕ ಲೇಖಕರನ್ನು ಬೆಳೆಸಿದ ಚಂಪಾ ಅವರನ್ನು ʼಅಡಿಗರು ಕಣ್ಣು ಮುಚ್ಚಿಸಿದರು, ಚಂಪಾ ಕಣ್ಣು ತೆರೆಸಿದರುʼ ಎಂದು ಹೇಳಿಕೊಂಡು ಕರ್ನಾಟಕಾದ್ಯಂತ ಓಡಾಡುತ್ತಿದ್ದೆವು. ನಮ್ಮೆಲ್ಲರ ಓದಿನ ಕೇಂದ್ರವಾಗಿದ್ದ ಸಂಕ್ರಮಣವನ್ನು ಚಂದ್ರಶೇಖರ ಪಾಟೀಲರು ಗಿರಡ್ಡಿ ಗೋವಿಂದರಾಜ, ಮತ್ತು ಸಿದ್ಧಲಿಂಗ ಪಟ್ಟಣಶೆಟ್ಟಿಯವರ ಜೊತೆ ಸೇರಿ ಆರಂಭಿಸಿದರು. ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿ, ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿಗೆ ಬೆಂಬಲ ನೀಡಿ ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಒದಗಿಸಿತು. ಆ ಹೊತ್ತಿಗೆ ಗಿರಡ್ಡಿ, ಪಟ್ಟಣಶೆಟ್ಟರು ಸಂಕ್ರಮಣದಿಂದ ಕಳಚಿಕೊಂಡಿದ್ದರು.

ಚಂಪಾ ತಮ್ಮ ಹರಿತವಾದ ವ್ಯಂಗ್ಯಕ್ಕೆ ಹೆಸರಾದವರು.

‘ಕನ್ನಡ ಕಾವ್ಯದ ಭೂತ ಭವಿಷ್ಯವ ಬಣ್ಣಿಸಿ ಹೇಳೋ ಗಾಂಪಾ;

ನಮ್ಮ ಆದಿಕವಿ ಪಂಪಾ, ಗುರುವೇ ನಮ್ಮ ಅಂತ್ಯಕವಿ ಚಂಪಾ’

ಅಂದು ತಮ್ಮನ್ನೇ ತಾವು ವಿನೋದ ಮಾಡಿಕೊಳ್ಳುತ್ತಿದ್ದರು.

ನಿನ್ನೆ ಬಸವಲಿಂಗಯ್ಯ, ಇವತ್ತು ಚಂಪಾ, ಯಾಕೋ ಸಾವು ಹತ್ತಿರದಲ್ಲೆಲ್ಲೋ ಓಡಾಡುವಂತೆ ಭಾಸವಾಗುತ್ತಿದೆ.

ಸರ್‌, ಹೋಗಿ ಬನ್ನಿ, ನಮಸ್ಕಾರ…


ಇದನ್ನೂ ಓದಿರಿ: ಹಿರಿಯ ಸಾಹಿತಿ ಚಂಪಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...