ಛತ್ತೀಸ್ಗಢ ವಿಧಾನಸಭೆ ಚುನಾವಣೆಗೆ ಒಂದು ದಿನ ಮೊದಲು ಬಿಜೆಪಿ ಅಭ್ಯರ್ಥಿಯ ವಾಹನದಲ್ಲಿ ಕಂತೆಕಂತೆ ನೋಟು ಪತ್ತೆಯಾಗಿದ್ದು, ಆ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಛತ್ತೀಸ್ಗಢದ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ, ಕೊರ್ಬಾ ಜಿಲ್ಲೆಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿಯೊಬ್ಬರ ವಾಹನದಿಂದ 11.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಗದನ್ನು ವಶಪಡಿಸಿಕೊಂಡಾಗ ಕೊರ್ಬಾದ ಪಾಲಿ-ತನಖರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ರಾಮ್ ದಯಾಳ್ ಉಯಿಕೆ ವಾಹನದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
”ಪಾಸನ್ ಪೊಲೀಸ್ ಠಾಣೆ ವ್ಯಾಪ್ತಿಯ ಜುಂಕಿಡಿ ಗ್ರಾಮದ ಬಳಿ ಕೆಲವು ಸ್ಥಳೀಯ ಗ್ರಾಮಸ್ಥರು ಉಯಿಕೆ ಅವರ ವಾಹನವನ್ನು ಅಡ್ಡಗಟ್ಟಿ ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದರು” ಎಂದು ಕೊರ್ಬಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.
ಉಯಿಕೆ ಅವರು ದಾಖಲೆಗಳನ್ನು ನೀಡಲು ವಿಫಲವಾದ ನಂತರ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಶುಕ್ರವಾರ ಚುನಾವಣೆ ನಡೆಯಲಿರುವ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಲ್ಲಿ ಪಾಲಿ-ತನಖರ್ ಕೂಡ ಸೇರಿದೆ. ನವೆಂಬರ್ 7ರಂದು 20 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆದಿದ್ದು, ಸುಮಾರು 78% ಮತದಾನವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 90ರಲ್ಲಿ 68 ಸ್ಥಾನಗಳನ್ನು ಗೆದ್ದುಕೊಂಡಿದ್ದರಿಂದ ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿದೆ. ಬಿಜೆಪಿ 15 ಸ್ಥಾನಗಳನ್ನು ಗೆದ್ದಿತ್ತು.
ಅಕ್ಟೋಬರ್ 9ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಬುಧವಾರದವರೆಗೆ 73.90 ಕೋಟಿ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ನಗದು, ಅಕ್ರಮ ಮದ್ಯ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು ಮಧ್ಯಪ್ರದೇಶ, ಛತ್ತೀಸಗಢ ವಿಧಾನಸಭಾ ಚುನಾವಣೆಯ ಮತದಾನ