ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಅವಹೇಳನಾಕಾರಿ ಪೋಸ್ಟ್ ಬಗ್ಗೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ.
ಖಟಾವೊ ತಹಸಿಲ್ನ ಪುಸೆವಾಲಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಈ ಘಟನೆಯು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ. ಈ ಹಿನ್ನಲೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಘಟನೆಯ ವೇಳೆ ಕೆಲವು ಮನೆಗಳಿಗೆ ಕೂಡ ಹಾನಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ಬಂಧಿಸಲಾಗಿದೆ. ಹಿಂಸಾಚಾರದ ವೇಳೆ ಓರ್ವನಿಗೆ ಗಂಭೀರವಾಗಿ ಗಾಯಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತಾರ ಜಿಲ್ಲೆಯಿಂದ 50 ಕಿ.ಮೀ ಮತ್ತು ಪುಣೆಯಿಂದ 160ಕಿಮಿ ದೂರದಲ್ಲಿರುವ ಖಟಾವೊ ತಹಸಿಲ್ನ ಪುಸೆವಾಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಒಂದು ಸಮುದಾಯದ ಕೆಲವು ಯುವಕರು ಮತ್ತೊಂದು ಸಮುದಾಯದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಪೋಸ್ಟ್ಗಳು ಭಾನುವಾರ ರಾತ್ರಿ 9.30ರ ಸುಮಾರಿಗೆ ಘರ್ಷಣೆಗೆ ಕಾರಣವಾಗಿವೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಅನೇಕ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಸತಾರಾ ಜಿಲ್ಲಾ ಪೊಲೀಸ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾವು ಆ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದ್ದಾರೆ.
ಸತಾರಾ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಶೇಖ್ ಅವರು ಈ ಕುರಿತು ಮಾತನಾಡಿ, ಜಿಲ್ಲೆಯಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಾಗರಿಕರು ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ. ಕೋಮು ವೈಷಮ್ಯಕ್ಕೆ ಕಾರಣವಾಗುವ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಯಾವುದೇ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದರಿಂದ ಜನರು ದೂರವಿರಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನು ಓದಿ: ಮಧ್ಯಪ್ರದೇಶ: RSSನ ಮಾಜಿ ಸ್ವಯಂಸೇವಕರಿಂದ ಹೊಸ ಪಕ್ಷ ಘೋಷಣೆ