Homeಕರ್ನಾಟಕಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಸಿಎಂ; ಬರ ಪರಿಹಾರ ಬಿಡುಗಡೆಗೆ ಮನವಿ

ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಸಿಎಂ; ಬರ ಪರಿಹಾರ ಬಿಡುಗಡೆಗೆ ಮನವಿ

- Advertisement -
- Advertisement -

ಕೂಡಲೇ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯಯವರನ್ನು ಭೇಟಿಯಾಗಿದ್ದರು. ಇಂದು ಗೃಹ ಸಚಿವ ಅಮಿತ್ ಅವರನ್ನು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ‘ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಹೇಳಿದ್ದಾರೆ.

₹4,663 ಕೋಟಿ ಇನ್ಪುಟ್ ಸಬ್ಸಿಡಿ, ₹12,577 ಕೋಟಿ ತುರ್ತು ಪರಿಹಾರ, ₹566 ಕೋಟಿ ಕುಡಿಯುವ ನೀರಿಗಾಗಿ ಹಾಗೂ ₹363 ಕೋಟಿ ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

‘ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.

‘ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದು ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ ₹17,901 ಕೋಟಿ ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ ₹12,577 ಕೋಟಿ ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ ₹18,177 ಕೋಟಿ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ’ ಎಂದು ಕೇಂದ್ರ ಗೃಹ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ರಾಜ್ಯಸಭಾ ಸದಸ್ಯರಾದ ಜಿ.ಸಿ. ಚಂದ್ರಶೇಖರ್ ಹಾಗೂ ಡಾ. ಎಲ್. ಹನುಮಂತಯ್ಯ ಇದ್ದರು.

ಇದನ್ನೂ ಓದಿ; ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...